ವಿಟ್ಲ ಪಟ್ಟಣ ಪಂಚಾಯತ್ ಸಾಮಾನ್ಯ ಸಭೆ

Update: 2019-10-31 17:59 GMT

ವಿಟ್ಲ, ಅ. 31: ವಿಟ್ಲ ಪಟ್ಟಣ ಪಂಚಾಯತ್ ಸಾಮಾನ್ಯ ಸಭೆಯು ಪಪಂ ಅಧ್ಯಕ್ಷೆ ದಮಯಂತಿ ಅಧ್ಯಕ್ಷತೆಯಲ್ಲಿ ಗುರುವಾರ ನಡೆಯಿತು. 
ಮನೆ ಹಾಗೂ ಹೊಸ ಕಟ್ಟಡ ನಿರ್ಮಾಣಕ್ಕೆ ಪರವಾನಿಗೆ ಸಿಗುತ್ತಿಲ್ಲ. ಮೂಡಾದ ಅನುಮತಿಯನ್ನು ಪಡೆಯಲು ನಾಗರಿಕರು ಸುತ್ತಾಡುತ್ತಿದ್ದಾರೆ. ಈ ನಡುವೆ ಸಾಮಾನ್ಯ ಸಭೆಯಲ್ಲಿ ತೆರಿಗೆ ಪರಿಷ್ಕರಣೆ ಮಾಡಬೇಕು ಎನ್ನುವ ಸುತ್ತೋಲೆ ಬಂದಿದೆ. ಮನೆ ಹಾಗೂ ಕಟ್ಟಡಕ್ಕೆ ಪರವಾನಿಗೆ ನೀಡಲಾಗುವುದಿಲ್ಲವೆಂದಾದಲ್ಲಿ ತೆರಿಗೆ ಪರಿಷ್ಕರಣೆಗೆ ಆತುರವೇನು? ಎಂದು ವಿಟ್ಲ ಪಪಂ ಸದಸ್ಯರು ಒಕ್ಕೊರಲಿನಿಂದ ಪ್ರಶ್ನಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯಾಧಿಕಾರಿ ಮಾಲಿನಿ, ಕಳೆದ ಮೂರು ವರ್ಷಗಳಿಂದ ತೆರಿಗೆ ಪರಿಷ್ಕರಣೆ ಮಾಡಲಿಲ್ಲ. ಪ.ಪಂ.ಆಗಿ ನಾಲ್ಕು ವರ್ಷಗಳಾದವು. ಪ್ರತೀ ಮೂರು ವರ್ಷಕ್ಕೊಮ್ಮೆ ತೆರಿಗೆ ಪರಿಷ್ಕರಿಸಬೇಕೆನ್ನುವ ನಿಯಮವಿದೆ ಎಂದರು.

ಇದೇ ಸಂದರ್ಭ ಮೀನು ಮಾರುಕಟ್ಟೆಯ ವಿಷಯವನ್ನು ಮಂಡನೆ ಮಾಡಿದಾಗಲೂ ಗೊಂದಲವುಂಟಾಯಿತು. ಬೊಬ್ಬೆಕೇರಿ ಕಟ್ಟೆಯಿಂದ ದೇವಸ್ಥಾನಕ್ಕೆ ತೆರಳುವ ಮಾರ್ಗದ ಬದಿಯಲ್ಲಿ ಮೀನು ಮಾರುಕಟ್ಟೆ ಕಟ್ಟಡ ನಿರ್ಮಾಣವಾಗಲಿಲ್ಲ. ರಸ್ತೆಯಲ್ಲೇ ವಾಹನಗಳು ನಿಂತು ಮೀನು ಮಾರಾಟ ಮಾಡಲಾಗುತ್ತಿದೆ. ವಾಹನ ಚಾಲಕರಿಗೆ ಸಂಚಾರಕ್ಕೆ ಅಡ್ಡಿಯುಂಟಾಗುತ್ತದೆ. ಮೀನು ಮಾರುಕಟ್ಟೆಯನ್ನು ತಾತ್ಕಾಲಿಕವಾಗಿ ಸಂತೆ ನಡೆಯುವ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ. ಅಲ್ಲಿಗೆ ಯಾರೂ ತೆರಳುತ್ತಿಲ್ಲ, ಅಲ್ಲಿ ವ್ಯಾಪಾರ ನಡೆಸುತ್ತಿಲ್ಲ ಎಂಬ ಬಿಜೆಪಿ ಸದಸ್ಯರ ಅಭಿಪ್ರಾಯಕ್ಕೆ ವಿರೋಧ ವ್ಯಕ್ತವಾಯಿತು. 

ಉಪಾಧ್ಯಕ್ಷ ಜಯಂತ ನಾಯ್ಕ, ಸ್ಥಾಯಿ ಸಮಿತಿ ಅಧ್ಯಕ್ಷೆ ಉಷಾ ಕೃಷ್ಣಪ್ಪ, ಮಾಜಿ ಅಧ್ಯಕ್ಷ ಅರುಣ್ ವಿಟ್ಲ, ಪಪಂ ಸದಸ್ಯರಾದ ಅಶೋಕ್ ಕುಮಾರ್ ಶೆಟ್ಟಿ, ರಾಮದಾಸ ಶೆಣೈ, ರವಿಪ್ರಕಾಶ್, ಮಂಜುನಾಥ ಕಲ್ಲಕಟ್ಟ, ಲೋಕನಾಥ ಶೆಟ್ಟಿ ಕೊಲ್ಯ, ಚಂದ್ರಕಾಂತಿ ಶೆಟ್ಟಿ, ಅಬ್ದುಲ್‍ರಹಿಮಾನ್ ನೆಲ್ಲಿಗುಡ್ಡೆ, ಸುನಿತಾ ಕೋಟ್ಯಾನ್, ಗೀತಾ ಪುರಂದರ, ಲತಾ ಅಶೋಕ್, ಸಂಧ್ಯಾ ಮೋಹನ್, ಇಂದಿರಾ ಅಡ್ಡಾಳಿ, ಅಬ್ಬೋಕರೆ ವಿ., ಎಂಜಿನಿಯರ್ ಶ್ರೀಧರ್, ರತ್ನಾ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News