ಬಹುಮತ ಸಾಬೀತಿಗೆ ನಾವು ಸಿದ್ಧ: ಸುಪ್ರೀಂ ತೀರ್ಪಿನ ಬಳಿಕ ಬಿಜೆಪಿ
ಮುಂಬೈ, ನ.26: ಮಹಾರಾಷ್ಟ್ರ ವಿಧಾನಸಭೆಯಲ್ಲಿ ಬುಧವಾರವೇ ಬಹುಮತ ಸಾಬೀತುಪಡಿಸಬೇಕೆಂದು ಸುಪ್ರೀಂಕೋರ್ಟ್ ನೀಡಿರುವ ತೀರ್ಪನ್ನು ನಾವು ಗೌರವಿಸುತ್ತೇವೆ ಎಂದು ಮಂಗಳವಾರ ತಿಳಿಸಿರುವ ಬಿಜೆಪಿ, ಸದನದಲ್ಲಿ ನಮ್ಮ ಪಕ್ಷ ಬಹುಮತವನ್ನು ಸಾಬೀತುಪಡಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದೆ.
‘‘ನಾವು ನ್ಯಾಯಾಲಯದ ಆದೇಶವನ್ನು ಗೌರವಿಸುತ್ತೇವೆ. ನಾವು ವಿಶ್ವಾಸಮತ ಸಾಬೀತುಪಡಿಸಲು ಸಿದ್ಧವಿದ್ದೇವೆ. ನಮ್ಮ ಶಕ್ತಿಯನ್ನು ತೋರಿಸುತ್ತೇವೆ’’ ಎಂದು ಮಹಾರಾಷ್ಟ್ರ ಬಿಜೆಪಿ ಮುಖ್ಯಸ್ಥ ಚಂದ್ರಕಾಂತ್ ಪಾಟೀಲ್ ಸುದ್ದಿಗಾರರಿಗೆ ತಿಳಿಸಿದ್ದಾರೆ.
ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಬುಧವಾರ ಸಂಜೆ 5 ಗಂಟೆಯೊಳಗೆ ಮಹಾರಾಷ್ಟ್ರದ ಅಸೆಂಬ್ಲಿಯಲ್ಲಿ ತನ್ನ ಸರಕಾರದ ಬಹುಮತವನ್ನು ಸಾಬೀತುಪಡಿಸಬೇಕೆಂದು ಸುಪ್ರೀಂಕೋರ್ಟ್ ಮಂಗಳವಾರ ಮಹತ್ವದ ಆದೇಶ ನೀಡಿದೆ.
ರಾಜ್ಯಪಾಲ ಭಗತ್ ಸಿಂಗ್ ಕೋಶಿಯಾರಿ ಬುಧವಾರವೇ ಎಲ್ಲ ಶಾಸಕರು ಪ್ರಮಾಣವಚನ ಸ್ವೀಕರಿಸುವಂತೆ ನೋಡಿಕೊಳ್ಳಬೇಕು. ಬಹುಮತದ ಯಾಚನೆ ಪ್ರಕ್ರಿಯೆ ಸಂಪೂರ್ಣವಾಗಿ ವಿಡಿಯೋ ಚಿತ್ರಣವಾಗಬೇಕು, ನೇರ ಪ್ರಸಾರವಾಗಬೇಕು. ಗೌಪ್ಯ ಮತದಾನಕ್ಕೆ ಅವಕಾಶ ನೀಡಬಾರದು ಎಂದು ನ್ಯಾಯಮೂರ್ತಿಗಳಾದ ಎನ್ವಿ ರಮಣ, ಅಶೋಕ್ ಭೂಷಣ್ ಹಾಗೂ ಸಂಜೀವ್ ಖನ್ನಾ ಅವರನ್ನೊಳಗೊಂಡ ತ್ರಿಸದಸ್ಯ ಪೀಠ ಆದೇಶಿಸಿದೆ..