ಸಚಿವ ಸಂಪುಟಕ್ಕೆ ಸೇರ್ಪಡೆ ಬಗ್ಗೆ ಅಜಿತ್ ಪವಾರ್ ಪ್ರತಿಕ್ರಿಯೆ
ಮುಂಬೈ, ನ.27: ತನ್ನನ್ನು ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳುವುದು ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಲಿರುವ ಉದ್ಧವ್ ಠಾಕ್ರೆಯ ನಿರ್ಧಾರಕ್ಕೆ ಬಿಟ್ಟದ್ದು ಎಂದು ಎನ್ಸಿಪಿ ಮುಖಂಡ ಅಜಿತ್ ಪವಾರ್ ಹೇಳಿದ್ದಾರೆ.
ನನಗೆ ಯಾರೊಬ್ಬರ ಬಗ್ಗೆಯೂ ಅಸಮಾಧಾನವಿಲ್ಲ. ಪಕ್ಷ ನೀಡುವ ಯಾವುದೇ ಜವಾಬ್ದಾರಿಯನ್ನು ಒಪ್ಪಿಕೊಳ್ಳಲು ಸಿದ್ಧನಿದ್ದೇನೆ ಎಂದು ಹೇಳುವ ಮೂಲಕ ಸಂಪುಟಕ್ಕೆ ಸೇರ್ಪಡೆಯಾಗುವ ಸುಳಿವು ನೀಡಿದ್ದಾರೆ.
ಶನಿವಾರ ಬಿಜೆಪಿಗೆ ಬೆಂಬಲ ಸೂಚಿಸಿ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದ ಅಜಿತ್ ಪವಾರ್, ಮಂಗಳವಾರ ರಾಜೀನಾಮೆ ನೀಡಿದ ಬಳಿಕ ಶರದ್ಪವಾರ್ ಮನೆಗೆ ಭೇಟಿ ನೀಡಿ ಸಮಾಲೋಚನೆ ನಡೆಸಿದ್ದರು. ಈ ಕುರಿತು ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು, ನನ್ನ ಮುಖಂಡನನ್ನು ಭೇಟಿಯಾಗಲು ನನಗೆ ಅಧಿಕಾರವಿದೆ ಎಂದಿದ್ದರು. ಅಜಿತ್ ಪವಾರ್ ಬುಧವಾರ ಪಕ್ಷಕ್ಕೆ ಮರಳಿದ್ದಾರೆ.
ಮಹಾರಾಷ್ಟ್ರದಲ್ಲಿ ಶಿವಸೇನೆ-ಎನ್ಸಿಪಿ-ಕಾಂಗ್ರೆಸ್ ಮೈತ್ರಿಕೂಟದ ಸರಕಾರ ರಚನೆಗೆ ವೇದಿಕೆ ಸಜ್ಜಾಗಿದ್ದು ಶಿವಸೇನೆಯ ಅಧ್ಯಕ್ಷ ಉದ್ಧವ್ ಠಾಕ್ರೆ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಮೈತ್ರಿಕೂಟದ ಮೂಲಗಳು ಸ್ಪಷ್ಟಪಡಿಸಿವೆ.