ಎ.26ರಂದು ರಾಜ್ಯದ 110 ದೇವಾಲಯಗಳಲ್ಲಿ ಸಾಮೂಹಿಕ ವಿವಾಹ : ಕೋಟ ಶ್ರೀನಿವಾಸ ಪೂಜಾರಿ

Update: 2019-12-05 15:04 GMT

ಮಣಿಪಾಲ, ಡಿ.5: ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೊಳಪಡುವ ರಾಜ್ಯದ ಪ್ರಮುಖ 110 ದೇವಾಲಯಗಳಲ್ಲಿ ಮುಂದಿನ ಎ.26ರಂದು ಸಾಮೂಹಿಕ ವಿವಾಹಗಳನ್ನು ನಡೆಸಲಾಗುವುದು ಎಂದು ರಾಜ್ಯ ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

ಗುರುವಾರ ಮಣಿಪಾಲದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಉಡುಪಿ ಜಿಲ್ಲೆಯ ‘ಎ’ ವರ್ಗದ ದೇವಾಲಯಗಳಲ್ಲಿ ಸಾಮೂಹಿಕ ವಿವಾಹ ನಡೆಸುವ ಕುರಿತಂತೆ ಕರೆದ ವಿವಿಧ ದೇವಾಲಯಗಳ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರು ಹಾಗೂ ಕಾರ್ಯ ನಿರ್ವಹಣಾಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು.

ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ, ಉತ್ತಮ ಆದಾಯವಿರುವ ರಾಜ್ಯದ 110 ದೇವಾಲಯಗಳಲ್ಲಿ 2020 ರ ಎ.26ರಂದು ಸಾಮೂಹಿಕ ವಿವಾಹ ನಡೆಸಲು ದಿನಾಂಕ ನಿಗದಿಪಡಿಸಿದ್ದು, ವಿವಾಹವಾಗುವ ದಂಪತಿಗಳಿಗೆ ಎಪಿಎಲ್, ಬಿಪಿಎಲ್ ಎಂಬ ಮಾನದಂಡ ಇರುವುದಿಲ್ಲ ಎಂದರು.

ವಿವಾಹವಾಗುವ ವರನಿಗೆ ಪೋತ್ಸಾಹಧನವಾಗಿ (ಹೂವಿನ ಹಾರ, ಪಂಚೆ, ಶರ್ಟ್, ಶಲ್ಯಕ್ಕಾಗಿ) 5,000ರೂ. ಮತ್ತು ವಧುವಿಗೆ (ಹೂವಿನ ಹಾರ, ಧಾರೆ ಸೀರೆ, ರವಿಕೆ ಕಣಕ್ಕಾಗಿ) 10,000ರೂ. ಅಲ್ಲದೇ ವಧುವಿಗೆ ಚಿನ್ನದ ತಾಳಿ, ಚಿನ್ನದ ಗುಂಡು (ಅಂದಾಜು 8ಗ್ರಾಂ ತೂಕ) ಗಾಗಿ 40,000ರೂ.ಗಳನ್ನು ನೀಡಲಾಗುವುದು. ಈ ಮೊತ್ತವನ್ನು ವಿವಾಹದ ದಿನದಂದೇ ಸಂಬಂಧಪಟ್ಟ ವಧು-ವರರ ಖಾತೆಗೆ ಆರ್‌ಟಿಜಿಎಸ್ ಮೂಲಕ ಜಮೆ ಮಾಡಲಾಗುವುದು. ಹಾಗೂ ವಿವಾಹಕ್ಕೆ ಆಗಮಿಸುವ ವಧು ವರರ ಬಂಧುಗಳಿಗೆ/ಸಾರ್ವಜನಿಕರಿಗೆ ಊಟೋಪಚಾರ ವ್ಯವಸ್ಥೆಯನ್ನು ಹಾಗೂ ಇತರೆ ವ್ಯವಸ್ಥೆಗೆ ತಗಲುವ ವೆಚ್ಚವನ್ನು ದೇವಾಲಯಗಳ ನಿಧಿಯಿಂದ ಭರಿಸಲಾಗುವುದು ಎಂದು ಹೇಳಿದರು.

ಸಾಮೂಹಿಕ ವಿವಾಹ ನಡೆಯುವ ಕುರಿತಂತೆ ಸಂಬಂಧಪಟ್ಟ ಎಲ್ಲಾ ದೇವಾಲಯಗಳ ಆವರಣದಲ್ಲಿ ಮಾಹಿತಿಯನ್ನು ಪ್ರಚುರಪಡಿಸುವಂತೆ ತಿಳಿಸಿದ ಮುಜರಾಯಿ ಸಚಿವರು, 2020ರ ಮಾ.27 ವಧು-ವರರ ವಿವರಗಳನ್ನು ನೊಂದಾಯಿಸಿಕೊಳ್ಳಲು ಕಡೆಯ ದಿನವಾಗಿರುತ್ತದೆ. ಎ.1ರಂದು ನೊಂದಾಯಿಸಿ ಕೊಂಡ ವಧು-ವರರ ವಿವರಗಳನ್ನು ದೇವಾಲಯಗಳಲ್ಲಿ ಪ್ರಕಟಪಡಿಸ ಲಾಗುವುದು. ಎ.6ರಂದು ವಧು-ವರರ ಪಟ್ಟಿಗೆ ಆಕ್ಷೇಪಣೆ ಸಲ್ಲಿಸಲು ಕೊನೆಯ ದಿನವಾಗಿದ್ದು, ಎ.11ರಂದು ಅಂತಿಮ ವಧು-ವರರ ಪಟ್ಟಿಯನ್ನು ಪ್ರಕಟಿಸಲಾ ಗುವುದು ಎಂದು ವಿವರಿಸಿದರು.

ಸಾಮೂಹಿಕ ವಿವಾಹದಲ್ಲಿ ಮೊದಲ ಬಾರಿ ವಿವಾಹವಾಗುವವರಿಗೆ ಮಾತ್ರ ಅವಕಾಶವಿದ್ದು, ಎರಡನೇ ಮದುವೆ ಆಗುವವರಿಗೆ ಅವಕಾಶವಿಲ್ಲ. ವಧು- ವರರು ನಿಯಮಾನುಸಾರ ಪ್ರಾಪ್ತ ವಯಸ್ಕರಾಗಿದ್ದು, ಈ ಬಗ್ಗೆ ಸರಕಾರದ ಅಧಿಕೃತ ದಾಖಲೆಗಳನ್ನು ನೀಡಬೇಕು. ವಿವಾಹ ನಡೆಯುವ ಸ್ಥಳದಲ್ಲೇ ವಿವಾಹ ನೊಂದಣಾಧಿಕಾರಿಗಳಿಂದ ‘ವಿವಾಹ ನೊಂದಣಿ’ ನಡೆಯಲಿದ್ದು, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯಿಂದ ಬಾಂಡ್ ವಿತರಣೆ ಸಹ ನಡೆಯಲಿದೆ. ರಾಜ್ಯದ ಪ್ರಮುಖ ಖಾಸಗಿ ಸಂಸ್ಥೆಗಳು ತಮ್ಮ ನಿಧಿಯಿಂದ ವಧು -ವರರಿಗೆ ಉಚಿತ ಉಡುಗೊರೆ ನೀಡುವುದಾದರೆ ಅದಕ್ಕೆ ಅವಕಾಶ ನೀಡಲಾಗುವುದು ಎಂದು ಸಚಿವರು ತಿಳಿಸಿದರು.

ಎ.26ರಂದು ನಡೆಯುವ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ, ಪೇಜಾವರಶ್ರೀಗಳು, ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ, ರವಿಶಂಕರ್ ಗುರೂಜಿ, ಇನ್ಫೋಸಿಸ್‌ನ ಸುಧಾಮೂರ್ತಿ, ಪ್ರಮುಖ ವೀರಶೈವ ಮಠಾಧೀಶರು, ಒಕ್ಕಲಿಗ ಗುರುಗಳು ಸೇರಿದಂತೆ ಪ್ರಮುಖ ಧಾರ್ಮಿಕ ಗುರುಗಳು ಈ ವಿವಾಹ ಕಾರ್ಯಕ್ರಮಕ್ಕೆ ಸಾಕ್ಷಿಯಾಗಲಿದ್ದಾರೆ ಎಂದು ಸಚಿವ ಕೋಟ ತಿಳಿಸಿದರು.

ಸಾಮಾಹಿಕ ವಿವಾಹ ಕಾರ್ಯಕ್ರಮದ ಬಗ್ಗೆ ಶೀಘ್ರದಲ್ಲಿಯೇ ಟೋಲ್‌ಫ್ರೀ ಸಂಖ್ಯೆಯನ್ನು ನೀಡಲಿದ್ದು, ಬೆಳಗ್ಗೆ 10ರಿಂದ ಸಂಜೆ 6ಗಂಟೆಯವರೆಗೆ ಸಾರ್ವಜನಿಕರು ಕರೆ ಮಾಡಿ ವಿವಾಹಕ್ಕೆ ನಿಗದಿಪಡಿಸಿರುವ ಅರ್ಹತೆಗಳು ಮತ್ತಿತರ ಅಗತ್ಯ ಮಾಹಿತಿ ಪಡೆಯಬಹುದು ಎಂದು ಸಚಿವರು ಹೇಳಿದರು.

ಸಾಮೂಹಿಕ ವಿವಾಹ ಕಾರ್ಯಕ್ರಮದ ಕುರಿತಂತೆ ರಾಜ್ಯಾದಂತ ಸರಕಾರದ ವಿವಿಧ ಜಾಹಿರಾತು ಫಲಕಗಳಲ್ಲಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಮೂಲಕ ಜಾಹಿರಾತು ಸಿದ್ದಪಡಿಸಿ, ಅಳವಡಿಸುವ ಮೂಲಕ, ಸಾರ್ವಜನಿಕರಿಗೆ ಹೆಚ್ಚಿನ ಅರಿವು ಮೂಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಅನಿವಾರ್ಯ ಕಾರಣಗಳಿಂದ ಎ.26ರಂದು ಸಾಮೂಹಿಕ ವಿವಾಹ ನಡೆಸಲು ಸಾಧ್ಯವಾಗದ ದೇವಾಲಯಗಳಲ್ಲಿ ಮೇ 24ರಂದು ವಿವಾಹ ನಡೆಸಲಾಗುವುದು ಎಂದ ಅವರು, ಸಾಮೂಹಿಕ ವಿವಾಹ ಏರ್ಪಡಿಸುವ ಕುರಿತಂತೆ ಸಂಬಂಧಪಟ್ಟ ದೇವಾಲಯಗಳು ತಮ್ಮ ವ್ಯಾಪ್ತಿಯ ಜಿಲ್ಲಾ ಉಸ್ತುವಾರಿ ಸಚಿವರು, ಸಂಸದರು, ಶಾಸಕರು, ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಅವರ ಸಲಹೆ, ಸೂಚನೆ, ಅಭಿಪ್ರಾಯಗಳನ್ನು ಪಡೆದು ಕಾರ್ಯಕರಮವನ್ನು ಯಶಸ್ವಿಗೊಲಿಸುವಂತೆ ಸಚಿವ ಪೂಜಾರಿ ಸಲಹೆ ನೀಡಿದರು.

ಸಭೆಯಲ್ಲಿ ಉಡುಪಿ ಶಾಸಕ ರಘುಪತಿ ಭಟ್, ಜಿಲ್ಲಾಧಿಕಾರಿ ಜಿ.ಜಗದೀಶ್, ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಕುಂದಾಪುರ ಉಪವಿಬಾಗಾಧಿಕಾರಿ ರಾಜು, ಎಲ್ಲಾ ತಾಲೂಕುಗಳ ತಹಶೀಲ್ದಾರರು ಹಾಗೂವಿವಿಧ ದೇವಾಲಯಗಳ ಆಡಳಿತ ಮೊಕ್ತೇಸರರು, ಕಾರ್ಯ ನಿರ್ವಹಣಾಧಿಕಾರಿಗಳು ಮತ್ತು ಧಾರ್ಮಿಕ ದತ್ತಿ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News