ಎಸೆಸೆಲ್ಸಿ ಪರೀಕ್ಷೆ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್

Update: 2020-06-17 11:00 GMT

ಹೊಸದಿಲ್ಲಿ, ಜೂ.17: ಕರ್ನಾಟಕದಲ್ಲಿ ಎಸೆಸೆಲ್ಸಿ ಪರೀಕ್ಷೆ ರದ್ದು ಕೋರಿ ಸುಪ್ರೀಂಕೋರ್ಟ್‍ಗೆ ಸಲ್ಲಿಸಲಾಗಿದ್ದ ಅರ್ಜಿ ವಜಾ ಆಗಿದ್ದು, ಈ ಹಿನ್ನೆಲೆಯಲ್ಲಿ ನಿಗದಿಯಂತೆ ಜೂ.25ರಿಂದ ಎಸೆಸೆಲ್ಸಿ ಪರೀಕ್ಷೆ ನಡೆಯಲಿದೆ.

ರಾಜ್ಯದಲ್ಲಿ ಕೊರೋನ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಎಸೆಸೆಲ್ಸಿ ಪರೀಕ್ಷೆಗಳನ್ನು ನಡೆಸುವುದು ಸೂಕ್ತವಲ್ಲ. ಈ ವರ್ಷ ಓದಿರುವ ಹತ್ತನೆ ತರಗತಿಯ ಎಲ್ಲ ವಿದ್ಯಾರ್ಥಿಗಳನ್ನು ಪಾಸ್ ಮಾಡುವಂತೆ ಕೋರಿ ರಾಜಶ್ರೀ ಎನ್ನುವವರು ಸುಪ್ರೀಂಕೋರ್ಟ್‍ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಇದರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಲ್.ನಾಗೇಶ್ವರರಾವ್, ನ್ಯಾ.ಕೃಷ್ಣಮುರಾರಿ, ನ್ಯಾ.ಎಸ್.ರವೀಂದ್ರ ಭಟ್ ನೇತೃತ್ವದ ತ್ರಿಸದಸ್ಯ ಪೀಠ ವಿಚಾರಣೆ ನಡೆಸಿತು.

ಈ ಅರ್ಜಿ ವಿಚಾರಣೆಗೆ ಯೋಗ್ಯವಾಗಿಲ್ಲ. ಕರ್ನಾಟಕ ಹೈಕೋರ್ಟ್ ನೀಡಿರುವ ತೀರ್ಪು ಸರಿಯಾಗಿದೆ. ಅಲ್ಲದೆ, ಸರಕಾರದ ನಿರ್ಧಾರದಲ್ಲಿ ಮಧ್ಯಪ್ರವೇಶ ಮಾಡುವುದು ಸರಿಯಲ್ಲ ಎಂದು ಸುಪ್ರೀಂಕೋರ್ಟ್  ಅಭಿಪ್ರಾಯ ವ್ಯಕ್ತಪಡಿಸಿತು. ಈ ವೇಳೆಯಲ್ಲಿ ರಾಜ್ಯ ಸರಕಾರದ ಪರ ಅಡ್ವೊಕೇಟ್ ಜನರಲ್ ಪ್ರಭುಲಿಂಗ ನಾವದಗಿ ಹಾಜರಾಗಿದ್ದರು.

ಇದಕ್ಕೂ ಮೊದಲು ರಾಜಶ್ರೀ ಪರೀಕ್ಷೆಯನ್ನು ರದ್ದು ಮಾಡುವಂತೆ ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಕರ್ನಾಟಕ ಹೈಕೋರ್ಟ್‍ನಲ್ಲಿ ಅರ್ಜಿ ತಿರಸ್ಕೃತವಾದ ಮೇಲೆ ಅವರು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News