ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಪ್ರಗತಿ ಪರಿಶೀಲನಾ ಸಭೆ
ಮಂಗಳೂರು, ಜೂ.19: ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಸಂಬಂಧಪಟ್ಟ ಪ್ರಗತಿ ಪರಿಶೀಲಾ ಸಭೆಯು ಶಾಸಕ ವೇದವ್ಯಾಸ್ ಕಾಮತ್ ಅಧ್ಯಕ್ಷತೆಯಲ್ಲಿ ಶುಕ್ರವಾರ ನಡೆಯಿತು.
ಪ್ರಸ್ತುತ ನಿಯಮಾವಳಿಗಳ ಪ್ರಕಾರ ವಾಣಿಜ್ಯ ಹಾಗೂ ವಾಣಿಜ್ಯೇತರ ನಿವೇಶನ ಮಂಜೂರಾತಿಗಾಗಿ ವಾಸ್ತವ್ಯ ಕಟ್ಟಡಗಳಿಗೆ ವಿಧಿಸಲಾಗಿರುವ 0.5 ಹಾಗೂ ವಾಣಿಜ್ಯ ಕಟ್ಟಡಗಳಿಗೆ 1.5 ತೆರಿಗೆಯನ್ನು ಕಡಿತಗೊಳಿಸುವಂತೆ ಶಾಸಕರು ಸೂಚಿಸಿದ್ದಾರೆ.
ಏಕ ನಿವೇಶನವನ್ನು ಅರ್ಜಿ ಸ್ವೀಕರಿಸಿದ 15 ದಿನಗಳ ಒಳಗಾಗಿ ನೀಡಲು ಕ್ರಮ ವಹಿಸಲು ನಿರ್ಣಯಿಸಲಾಗಿದೆ. ನಗರಾಭಿವೃದ್ಧಿ ಪ್ರಾಧಿಕಾರ ಇಲಾಖೆಯಲ್ಲಿ ಸಾರ್ವಜನಿಕ ಸಹಾಯಕ್ಕಾಗಿ ಮಾಹಿತಿ ನೀಡಲು ಪ್ರತ್ಯೇಕ ಮಾಹಿತಿ ಕೇಂದ್ರ ತೆರೆಯಲು ಮತ್ತು ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನೆಗಾಗಿ ಎರಡು ವಾರಕ್ಕೊಮ್ಮೆ ಸಭೆ ನಡೆಸಲು ನಿರ್ಣಯ ಕೈಗೊಳ್ಳಲಾಯಿತು.
ಸಭೆಯಲ್ಲಿ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರವಿಶಂಕರ್ ಮಿಜಾರ್, ಪ್ರಾಧಿಕಾರದ ಆಯುಕ್ತ ದಿನೇಶ್, ಪಾಲಿಕೆಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಪ್ರೇಮಾನಂದ ಶೆಟ್ಟಿ, ಪೂರ್ಣಿಮಾ, ಸದಸ್ಯರಾದ ಸುಧೀರ್ ಶೆಟ್ಟಿ ಕಣ್ಣೂರು, ಶಕೀಲಾ ಕಾವಾ, ಹಿರಿಯ ಅಭಿಯಂತರ ಗಣೇಶ್, ಬಾರ್ ಅಸೋಸಿಯೇಶನ್ ಪದಾಧಿಕಾರಿಗಳು, ಕ್ರೆಡಾಯ್ ಪದಾಧಿಕಾರಿಗಳು, ಇಂಜಿನಿಯರ್ ಅಸೋಸಿಯೇಶನ್, ಧರ್ಮರಾಜ್, ಸಾಮಾಜಿಕ ಕಾರ್ಯಕರ್ತರಾದ ಹನುಮಂತ್ ಕಾಮತ್, ಗೋಪಾಲ್ ಕೃಷ್ಣ ಭಟ್ ಮತ್ತಿತರರು ಉಪಸ್ಥಿತರಿದ್ದರು.