ಫೋನ್ ಕದ್ದಾಲಿಕೆ ಆರೋಪ ಕಾಂಗ್ರೆಸ್ ನಾಯಕರ ಹತಾಶಭಾವನೆಗೆ ಹಿಡಿದ ಕೈಗನ್ನಡಿ: ಬಿ.ವೈ.ವಿಜಯೇಂದ್ರ
ಬೆಂಗಳೂರು, ಆ.23: ದೂರವಾಣಿ ಕದ್ದಾಲಿಕೆ ಆರೋಪ ಕಾಂಗ್ರೆಸ್ ನಾಯಕರ ಹತಾಶಭಾವನೆಗೆ ಹಿಡಿದ ಕೈಗನ್ನಡಿಯಾಗಿದ್ದು ಗಲಭೆ ಕುರಿತು ಸತ್ಯ ಶೋಧನೆ ಬದಲು ಪಕ್ಷದ ಅಂತರಾಳ ಶೋಧನೆ ಮಾಡಿಕೊಳ್ಳಲಿ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ರವಿವಾರ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿ ಜಗನ್ನಾಥ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿ.ಜೆ.ಹಳ್ಳಿ, ಕೆ.ಜಿ.ಹಳ್ಳಿ ಗಲಭೆ ಘಟನೆಯಲ್ಲಿ ಕಾಂಗ್ರೆಸ್ ನಾಯಕರು ಸತ್ಯಶೋಧನಾ ಸಮಿತಿಯನ್ನು ಮಾಡಿಕೊಂಡಿದ್ದಾರೆ. ಆದರೆ ಎಲ್ಲೋ ಒಂದು ಕಡೆ ಅವರು ತಮ್ಮ ಮನಸ್ಸನ್ನು, ಅಂತರಾಳವನ್ನು ಅರ್ಥಮಾಡಿಕೊಳ್ಳುವ ಆತ್ಮಶೋಧನಾ ಸಮಿತಿಯನ್ನು ಮಾಡುವುದು ಒಳ್ಳೆಯದು ಎಂದು ಟೀಕಿಸಿದರು.
ಕಾಂಗ್ರೆಸ್ ಪಕ್ಷದ ಆಂತರಿಕ ಕಚ್ಚಾಟವನ್ನು ಮುಚ್ಚಿಕೊಳ್ಳಲು ಸಮಾಜವಿರೋಧಿ ಶಕ್ತಿಯನ್ನು ಬಳಸಿಕೊಂಡು ಈ ಮಟ್ಟಕ್ಕೆ ಇಳಿದಿರುವುದು ಸರಿಯಲ್ಲ. ಕಾಂಗ್ರೆಸ್ ಪಕ್ಷಕ್ಕೆ ರಾಜ್ಯದಲ್ಲಿ ತಲೆಯೆತ್ತಿಕೊಂಡು ಓಡಾಡಲು ಸಾಧ್ಯವಿಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ. ಹೀಗಾಗಿ, ಬೇರೆ ಬೇರೆ ವಿಚಾರಗಳನ್ನು ಎತ್ತಿಕೊಂಡು ರಾಜ್ಯ ಸರಕಾರಕ್ಕೆ ಮಸಿ ಬಳಿಯುವ ಕೆಲಸವನ್ನು ಮಾಡಲು ಹೊರಟಿದ್ದಾರೆ ಎಂದು ದೂರಿದರು.
ರಾಜ್ಯ ಸರಕಾರದ ವಿರುದ್ಧ ಜನತೆಯಲ್ಲಿ ತಪ್ಪು ಭಾವನೆ ಮೂಡಿಸುವ ಕೆಲಸಕ್ಕೆ ಕಾಂಗ್ರೆಸ್ ಪಕ್ಷದ ಮುಖಂಡರು ಮುಂದಾಗಿದ್ದಾರೆ. ಇದು ಯಾರೂ ಕೂಡ ಒಪ್ಪುವಂಥದ್ದಲ್ಲ. ರಾಜ್ಯದ ಜನತೆಯನ್ನು ಮೂರ್ಖರನ್ನಾಗಿ ಮಾಡಲು ಕಾಂಗ್ರೆಸ್ ಪ್ರಯತ್ನಿಸುತ್ತಿದೆ, ಆದರೆ ಇದೆಲ್ಲಾ ನಡೆಯುವುದಿಲ್ಲ ಎಂದು ಹರಿಹಾಯ್ದರು.
ಕಾಂಗ್ರೆಸ್ ನಾಯಕರಿಗೆ ಎಲ್ಲೋ ಒಂದು ಕಡೆ ಹತಾಶ ಮನೋಭಾವನೆ ಕಾಡುತ್ತಿದೆ. ಅವರ ನಾಯಕರ ಹೇಳಿಕೆ ನೋಡಿದರೆ ನಗಬೇಕೋ ಬೇಡವೋ ಗೊತ್ತಾಗುತ್ತಿಲ್ಲ. ದೂರವಾಣಿ ಕದ್ದಾಲಿಕೆ ಸೇರಿದಂತೆ ಬೇರೆ ಬೇರೆ ರೀತಿಯಲ್ಲಿ ಸರಕಾರದ ವಿರುದ್ಧ ಹಲವು ಆರೋಪಗಳ ಹೇಳಿಕೆ ನೀಡುತ್ತಿದ್ದಾರೆ. ಕೋವಿಡ್ ಸಂದರ್ಭದಲ್ಲಿಯೂ ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಮುಂದಾಗಿರುವ ನಡೆ ಖಂಡನೀಯ ಎಂದರು.
ಇತ್ತೀಚೆಗೆ ಡಿ.ಜೆ.ಹಳ್ಳಿ ಗಲಭೆ ವೇಳೆ ರಾಜ್ಯದ ಜನತೆಯ ಮುಂದೆ ಕಾಂಗ್ರೆಸ್ ಪಕ್ಷ ಬೆತ್ತಲಾಗಿದೆ. ಹಾಗಾಗಿ ಈಗ ದೂರವಾಣಿ ಕದ್ದಾಲಿಕೆ ಆರೋಪದ ಹೇಳಿಕೆ ಕೊಡುವ ಮೂಲಕ ತಮ್ಮ ಪಕ್ಷವನ್ನು ರಾಜ್ಯದಲ್ಲಿ ಚಾಲ್ತಿಯಲ್ಲಿಡುವ ಪ್ರಯತ್ನವನ್ನು ಕಾಂಗ್ರೆಸ್ ಪಕ್ಷ ಮಾಡುತ್ತಿದೆ ಎಂದು ಅಪಾದಿಸಿದರು. ಕಾಂಗ್ರೆಸ್ ಪಕ್ಷದ ನಾಯಕರು ಆಡಳಿತ ನಡೆಸಿದ್ದಾರೆ, ಕೊರೋನ ಸಂದರ್ಭದಲ್ಲಿ ಜವಾಬ್ದಾರಿಯುತ ಪ್ರತಿಪಕ್ಷವಾಗಿ ಕೆಲಸ ಮಾಡದೆ ಸರ್ಕಾರವನ್ನು ಟೀಕಿಸುತ್ತಾ ಕಾಲ ಕಳೆಯುವುದು ಎಷ್ಟು ಸರಿ ಎಂದು ವಿಜಯೇಂದ್ರ ಪ್ರಶ್ನಿಸಿದರು.
ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಬೆಂಗಳೂರಿಗೆ ಬಂದ ಸಂದರ್ಭದಲ್ಲಿ ಪಕ್ಷದ ಚಟುವಟಿಕೆಗಳು ಮುಂದೆ ಯಾವ ರೀತಿ ಇರಬೇಕು, ಕೊರೋನ ಇರುವ ಸಂದರ್ಭದಲ್ಲಿ ಯಾವ ರೀತಿ ನಮ್ಮ ಪಕ್ಷ ಸಂಘಟನೆ ಮಾಡಬೇಕು ಎನ್ನುವ ದೃಷ್ಟಿಕೋನದಿಂದ ವಿವಿಧ ಮೋರ್ಚಾಗಳ ಪದಾಧಿಕಾರಿಗಳ ಜೊತೆ ಚರ್ಚೆ ಮಾಡಲಿದ್ದಾರೆ ಎಂದು ಬಿ.ವೈ.ವಿಜಯೇಂದ್ರ ಮಾಹಿತಿ ನೀಡಿದರು.