ಅಲ್ಪಸಂಖ್ಯಾತ ಇಲಾಖೆ ಅನುದಾನ ಕಡಿತಕ್ಕೆ ಖಂಡನೆ : ಮುಸ್ಲಿಂ ಚಿಂತಕರ ಚಾವಡಿಯಿಂದ ಸಿಎಂಗೆ ಮನವಿ

Update: 2020-12-09 15:24 GMT

ಮಂಗಳೂರು, ಡಿ.9: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ರಾಜ್ಯ ಬಿಜೆಪಿ ಸರಕಾರವು ಅಲ್ಪಸಂಖ್ಯಾತ ಸಮುದಾಯಗಳ ಸಬಲೀಕರಣಕ್ಕಾಗಿ ನಿಗದಿಗೊಳಿಸಲಾದ ಅನುದಾನವನ್ನು ಕಡಿತಗೊಳಿಸಿರುವುದು ಮುಸ್ಲಿಂ ಚಿಂತಕರ ಚಾವಡಿ ತೀವ್ರವಾಗಿ ಖಂಡಿಸಿದೆ.

ವಿದ್ಯಾರ್ಥಿಗಳ ಪ್ರೋತ್ಸಾಹಧನ, ವಿದ್ಯಾರ್ಥಿ ವೇತನವನ್ನು ತಡೆ ಹಿಡಿದಿರುವುದನ್ನು ವಿರೋಧಿಸಿ ಮುಸ್ಲಿಂ ಚಿಂತಕರ ಚಾವಡಿಯು ರಾಜ್ಯಾದ್ಯಂತ ನಡೆಸುತ್ತಿರುವ ಅಭಿಯಾನದ ಭಾಗವಾಗಿ ಮಂಗಳೂರಿನಲ್ಲಿ ದ.ಕ. ಜಿಲ್ಲೆಯ ಅಪರ ಜಿಲ್ಲಾಧಿಕಾರಿ ಎಂ.ಜೆ. ರೂಪಾ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿತು.

ರಾಜ್ಯದಲ್ಲಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಸರಕಾರ ಅಧಿಕಾರಕ್ಕೆ ಬಂದ ನಂತರ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಮೂಲಕ ಅಲ್ಪಸಂಖ್ಯಾತ ಸಮುದಾಯಗಳ ಜನಪರ ಕಲ್ಯಾಣ ಯೋಜನೆಗಳಿಗೆ ನಿಗದಿಗೊಳಿಸಲಾದ ಅನುದಾನವನ್ನು ಬೃಹತ್ ಪ್ರಮಾಣದಲ್ಲಿ ಕಡಿತ ಗೊಳಿಸಲಾಗಿದೆ. ಉನ್ನತ ವ್ಯಾಸಂಗ, ವಿದೇಶದಲ್ಲಿ ಶಿಕ್ಷಣ ಪಡೆಯಲು ನೀಡಲಾಗುತ್ತಿದ್ದ ಪ್ರೋತ್ಸಾಹ ಧನ, ವಿವಿಧ ಹಂತದ ವಿದ್ಯಾಭ್ಯಾಸಗಳಿಗೆ ನೀಡಲಾಗುತ್ತಿದ್ದ ವಿದ್ಯಾರ್ಥಿ ವೇತನಗಳಿಗೆ ಅನುದಾನ ನೀಡದೆ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳನ್ನು ಅತಂತ್ರಗೊಳಿಸಿ ವಿದ್ಯಾಭ್ಯಾಸ ಮೊಟಕುಗೊಳಿಸುವ ಸ್ಥಿತಿ ನಿರ್ಮಿಸಲಾಗಿದೆ ಎಂದು ತಿಳಿಸಿದೆ.

ಹಿಂದಿನ ಸರಕಾರದ ಅವಧಿಯಲ್ಲಿ 1,870 ಕೋಟಿ ರೂಪಾಯಿ ಇದ್ದ ಅನುದಾನ, ಈಗಿನ ಸರಕಾರದ ಅವಧಿಯಲ್ಲಿ 1,000 ಕೋಟಿ ರೂ.ಗೆ ಇಳಿದಿದೆ. ಇದರಿಂದ ಕಳೆದ ಹಲವು ವರ್ಷಗಳಲ್ಲಿ ಜಾರಿಯಲ್ಲಿದ್ದ ಜನ ಕಲ್ಯಾಣ ಯೋಜನೆಗಳು ಹಣದ ಕೊರತೆಯಿಂದ ನನೆಗುದಿಗೆ ಬಿದ್ದಿವೆ. ಕಾಲೋನಿ ಅಭಿವೃದ್ಧಿ ಯೋಜನೆ, ಶಾದಿಭಾಗ್ಯ ಯೋಜನೆಗಳನ್ನು ರದ್ದುಗೊಳಿಸಲಾಗಿದೆ ಎಂದು ಮುಸ್ಲಿಂ ಚಿಂತಕರ ಚಾವಡಿ ಮನವಿಯಲ್ಲಿ ತಿಳಿಸಿದೆ.

ವಿದೇಶದಲ್ಲಿ ಉನ್ನತ ವ್ಯಾಸಂಗ, ಮೆಟ್ರಿಕ್ ಪೂರ್ವ, ಮೆಟ್ರಿಕ್ ನಂತರದ, ಮೆರಿಟ್ ಕಮ್ ಮೀನ್ಸ್ ವಿದ್ಯಾರ್ಥಿ ವೇತನ, ವಿದ್ಯಾಸಿರಿಯಂತಹ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳ ಶೈಕ್ಷಣಿಕ ಬೆಳವಣಿಗೆಗೆ ಪೂರಕವಾದಂತಹ ಯೋಜನೆಯ 2019-20ನೇ ಸಾಲಿನ ಅನುದಾನ ವನ್ನು ಸರಕಾರ ಈವರೆಗೂ ಬಿಡುಗಡೆಗೊಳಿಸಿಲ್ಲ. 2016-17ರಿಂದ ಜಾರಿಯಲ್ಲಿರುವ ಅಲ್ಪಸಂಖ್ಯಾತ ಸಮುದಾಯದ ಸಂಶೋಧನೆ (ಪಿಎಚ್‌ಡಿ/ಎಂ.ಫಿಲ್) ವಿದ್ಯಾರ್ಥಿಗಳಿಗೆ ಪ್ರತಿ ತಿಂಗಳು ನೀಡಲಾಗುತ್ತಿದ್ದ ಪ್ರೋತ್ಸಾಹ ಧನವನ್ನು 25 ರೂ. ಇಂದ 8,333 ರೂ.ಗೆ ಕಡಿತಗೊಳಿಸಿ ಸಂಶೋಧನೆ ಪೂರ್ಣಗೊಳಿಸಲಾಗದ ಸ್ಥಿತಿ ನಿರ್ಮಿಸಲಾಗಿದೆ ಎಂದು ಚಾವಡಿಯು ಬೇಸರ ವ್ಯಕ್ತಪಡಿಸಿದೆ.

ರಾಜ್ಯದಲ್ಲಿ ಅಂದಾಜು 300ರಷ್ಟಿರುವ ಸಂಶೋಧನಾ ವಿದ್ಯಾರ್ಥಿಗಳಿಗೆ ಬೇಕಾಗುವ 9 ಕೋಟಿ ರೂಪಾಯಿಯಷ್ಟು ಸಣ್ಣ ಮೊತ್ತವನ್ನು ತಡೆ ಹಿಡಿದಿರುವುದು ಅಲ್ಪಸಂಖ್ಯಾತ ಸಮುದಾಯಗಳ ಕುರಿತು ಸರಕಾರಕ್ಕಿರುವ ಅನಾದಾರವನ್ನು ಎತ್ತಿ ತೋರಿಸುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದೆ.

ಮೆಟ್ರಿಕ್ ಪೂರ್ವ, ಮೆಟ್ರಿಕ್ ನಂತರದ, ಮೆರಿಟ್ - ಕಮ್ ಮೀನ್ಸ್ ವಿದ್ಯಾರ್ಥಿ ವೇತನದಡಿ ಲಕ್ಷಾಂತರ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಂದ ಅರ್ಜಿ ಸಲ್ಲಿಕೆಯಾಗಿದೆ. ಕೇಂದ್ರ ಹಾಗೂ ರಾಜ್ಯ ಸರಕಾರಗಳು ಸೇರಿ ಇದಕ್ಕೆ 270 ಕೋಟಿ ರೂ. ಅನುದಾನ ನಿಗದಿಗೊಳಿಸ ಲಾಗಿತ್ತು. ಈಗ ರಾಜ್ಯ ಸರಕಾರ ತನ್ನ ಪಾಲಿನ ಅನುದಾನ ಬಿಡುಗಡೆಗೊಳಿಸದೇ ಇರುವುದು ಶೇ.50 ರಷ್ಟು ಬಡ ವಿದ್ಯಾರ್ಥಿಗಳು ಸ್ಕಾಲರಶಿಪ್ ದೊರಕದೆ ಅಸಹಾಯಕರಾಗಿದ್ದಾರೆ ಎಂದು ಚಾವಡಿಯು ಮನವಿ ಮೂಲಕ ಸಮಸ್ಯೆಯನ್ನು ಮುಖ್ಯಮಂತ್ರಿ ಗಮನಕ್ಕೆ ತರುವ ಪ್ರಯತ್ನ ಮಾಡಿದೆ.

ವಿದ್ಯಾಸಿರಿ, ‘ಅರಿವು’ ಶೈಕ್ಷಣಿಕ ಸಾಲಯೋಜನೆಗಳು ಅನುದಾನ ಕಡಿತದಿಂದ ಸ್ಥಗಿತಗೊಂಡಿವೆ. ಇದರಿಂದ ಸಾವಿರಾರು ವಿದ್ಯಾರ್ಥಿಗಳು ಉನ್ನತ ಶಿಕ್ಷಣದಿಂದ ವಂಚಿತಾಗುವಂತಾಗಿದೆ. ಈ ಎಲ್ಲ ಬೆಳವಣಿಗೆಗಳು ಸರಕಾರ ಅಲ್ಪಸಂಖ್ಯಾತ ಸಮುದಾಯವನ್ನು ಸಂಪೂರ್ಣ ಮೂಲೆಗುಂಪು ಮಾಡುವ ದೃಢ ನಿರ್ಧಾರಕ್ಕೆ ಬಂದಂತಿದೆ ಎಂದು ಮುಸ್ಲಿಂ ಚಿಂತಕರ ಚಾವಡಿ ಆತಂಕ ವ್ಯಕ್ತಪಡಿಸಿದೆ.

ಅನುದಾನ ಕಡಿತಗೊಳಿಸಲು ಸರಕಾರ ಕೋವಿಡ್ 19 ಕಾರಣವನ್ನು ಮುಂದಿಟ್ಟಿದ್ದರೂ ಜನಪರ ಕಲ್ಯಾಣ ಇಲಾಖೆಗಳ ಅನುದಾನ ಕಡಿತ ಗೊಳಿಸುವುದು ಸಾಮಾಜಿಕ ಬದ್ಧತೆಯ ದೃಷ್ಟಿಯಿಂದ ಒಳ್ಳೆಯ ಆಡಳಿತದ ಮಾದರಿಯಂತೂ ಖಂಡಿತ ಆಗಲಾರದು.

ಸರಕಾರದ ಯಾವುದೇ ಇಲಾಖೆಗೂ ಇರದ ಅನುದಾನ ಕಡಿತ ಕೇವಲ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಗೆ ಮಾತ್ರ ಅನ್ವಯಿಸಿರುವುದು ಸರಕಾರದ ತಾರತಮ್ಯ ಮನೋಭಾವವನ್ನು ಸ್ಪಷ್ಟವಾಗಿ ಎತ್ತಿ ತೋರಿಸುತ್ತದೆ. ಸರಕಾರದ ಇಂತಹ ನಡೆಯನ್ನು ಯಾವ ಕಾರಣಕ್ಕೂ ಒಪ್ಪಿಕೊಳ್ಳ ಲಾಗದು ಎಂದು ಮುಸ್ಲಿಂ ಚಿಂತಕರ ಚಾವಡಿಯು ತಿಳಿಸಿದೆ.

ಯಾವುದೇ ಹೊಸ ಯೋಜನೆ ಜಾರಿಗೊಳಿಸದೆ ಇದ್ದರೂ ಈಗಾಗಲೇ ಜಾರಿಯಲ್ಲಿರುವ ಎಲ್ಲ ಯೋಜನೆಗಳನ್ನು ಮುಂದುವರಿಸಬೇಕು. ಅದಕ್ಕೆ ಬೇಕಿರುವ ಅನುದಾನವನ್ನು ಸಂಪೂರ್ಣವಾಗಿ ಬಿಡುಗಡೆಗೊಳಿಸಬೇಕು ಎಂದು ಚಾವಡಿಯು ಮುಖ್ಯಮಂತ್ರಿಯಲ್ಲಿ ಮನವಿ ಮಾಡಿಕೊಂಡಿದೆ.
ನಿಯೋಗದಲ್ಲಿ ಚಿಂತಕರ ಚಾವಡಿಯ ರಾಜ್ಯ ಕಾರ್ಯದರ್ಶಿ ಮುನೀರ್ ಕಾಟಿಪಳ್ಳ, ಮಂಗಳೂರು ಪಾಲಿಕೆಯ ಮಾಜಿ ಉಪಮೇಯರ್ ಮುಹಮ್ಮದ್ ಕುಂಜತ್ತಬೈಲ್, ಮಾಜಿ ತಾಪಂ ಸದಸ್ಯ ಎನ್.ಇ. ಮುಹಮ್ಮದ್, ಸಾಮಾಜಿಕ ಕಾರ್ಯಕರ್ತರಾದ ಬಾವ ಪದರಂಗಿ, ಅಬ್ದುಲ್ ಖಾದರ್ ಇಡ್ಮ, ಇಮ್ತಿಯಾಝ್ ಪಾಂಡೇಶ್ವರ, ನೌಷಾದ್ ಬೆಂಗ್ರೆ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News