ವಿವೇಕಾನಂದರ ಚಿಂತನೆಗಳನ್ನು ಅಳವಡಿಸಿಕೊಳ್ಳಿ: ಜಿಲ್ಲಾಧಿಕಾರಿ ಜಿ.ಜಗದೀಶ್

Update: 2021-01-12 16:27 GMT

ಉಡುಪಿ, ಜ.12: ಸ್ವಾಮಿ ವಿವೇಕಾನಂದರು ಯುವಜನತೆಗೆ, ಯುವ ಪೀಳಿಗೆಗೆ ಮಾದರಿಯಾಗಿದ್ದಾರೆ. ತತ್ವಶಾಸ್ತ್ರಕ್ಕೆ, ಶಿಕ್ಷಣ ಕ್ಷೇತ್ರಕ್ಕೆ ಅವರ ಕೊಡುಗೆ ಅಪಾರವಾದದ್ದು. ವಿವೇಕಾನಂದರ ಚಿಂತನೆಗಳನ್ನು ಜೀವನದಲ್ಲಿ ಅಳವಡಿಸಿ ಕೊಂಡರೆ ಬದುಕಲ್ಲಿ ಯಶಸ್ಸು ಕಾಣಲು ಸಾಧ್ಯ. ಅವರ ವಿವೇಕವಾಣಿ ‘ಏಳಿ ಎದ್ದೇಳಿ, ಗುರಿ ಮುಟ್ಟುವ ತನಕ ನಿಲ್ಲದಿರಿ’ ಎಂಬ ಸಂದೇಶವನ್ನು ಯುವ ಪೀಳಿಗೆ ಅಳವಡಿಸಿಕೊಂಡರೆ, ಯಶಸ್ಸು ಹುಡುಕಿಕೊಂಡು ಬರುತ್ತದೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಹೇಳಿದ್ದಾರೆ.

ಮಂಗಳವಾರ ಎಂಜಿಎಂ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ಜಿಲ್ಲಾಡಳಿತ, ಜಿಪಂ, ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಹಾತ್ಮ ಗಾಂಧಿ ಮೆಮೋರಿಯಲ್ ಕಾಲೇಜು ಉಡುಪಿ, ಡಾ. ಜಿ. ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಅಜ್ಜರಕಾಡು ಇವುಗಳ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡ ಆಯೋಜಿ ಸಿದ್ದ, ಸ್ವಾಮಿ ವಿವೇಕಾನಂದ ಜಯಂತಿ ‘ರಾಷ್ಟ್ರೀಯ ಯುವದಿನ’ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು.

ಇಂದಿನ ಯುವ ಜನತೆ ನಮ್ಮ ಸಂಸ್ಕೃತಿಯನ್ನು ಮರೆಮಾಚುತ್ತಿರುವುದರ ಜೊತೆಗೆ ಪಾಶ್ಚಾತ್ಯ ಸಂಸ್ಕೃತಿಯ ಮೊರೆ ಹೋಗುತಿ ದ್ದಾರೆ. ಸಾಮಾಜಿಕ ಜಾಲತಾಣ ಸೃಜನಶೀಲ ವ್ಯಕ್ತಿತ್ವಕ್ಕೆ ತೊಡಕಾಗುತ್ತಿದೆ. ಋಣಾತ್ಮಕ ವ್ಯಕ್ತಿತ್ವವನ್ನು ಬೆಳೆಸುತ್ತಿದೆ. ಆದ್ದರಿಂದ ಯುವಕರು ಉತ್ತಮವಾದ ಗುರಿಯೊಂದಿಗೆ ಸಾಗಬೇಕು. ಕರ್ತವ್ಯ ದಲ್ಲಿ ಶ್ರೇಷ್ಟತೆಯನ್ನು ಪಡೆಯುವುದೇ ಮೂಲ ಗುರಿಯಾಗಬೇಕು ಎಂದರು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಉಡುಪಿ ಜಿಪಂ ಅಧ್ಯಕ್ಷ ದಿನಕರ ಬಾಬು, ಸ್ವಾಮಿ ವಿವೇಕಾನಂದರ ಜಯಂತಿಯು ಇಂದಿನ ಯುವ ಜನರಿಗೆ ಪ್ರೇರಣೆ ಆಗಬೇಕು. ಅವರಲ್ಲಿ ರಾಷ್ಟ್ರಪ್ರೇಮ, ದೇಶಭಕ್ತಿ ಮೂಡಿಸಲು ಮಾರ್ಗದರ್ಶಕವಾಗಬೇಕು ಎಂದರು.

ಹಿರಿಯ ಪತ್ರಕರ್ತೆ ಡಾ. ಸಂಧ್ಯಾ ಎಸ್ ಪೈ, ಎಂಜಿಎಂ ಕಾಲೇಜಿನ ಪ್ರಾಂಶುಪಾಲರಾದ ಡಾ.ದೇವಿದಾಸ್ ನಾಯ್ಕ ಕೂಜಳಿ ಅವರ ವೌಲಿಕ ಶಿಕ್ಷಣದ ಕುರಿತಾದ ‘ಅಮೃತ ಬಿಂದು’ ಕೃತಿಯನ್ನು ಲೋಕಾರ್ಪಣೆ ಮಾಡಿ ಮಾತನಾಡಿ ದರು. ತುಮಕೂರು ರಾಮಕೃಷ್ಣ ವಿವೇಕಾನಂದ ಆಶ್ರಮದ ಅಧ್ಯಕ್ಷ ವೀರೇಶಾನಂದ ಸರಸ್ವತಿ ಆಶಯ ನುಡಿಯೊಂದಿಗೆ ಶುಭ ಹಾರೈಸಿದರು.

ಇದೇ ಸಂದರ್ಭದಲ್ಲಿ ನಡೆದ ಮೌಕಿಕ ಶಿಕ್ಷಣ ಶಿಬಿರದಲ್ಲಿ ಜೈನ್ ಹೈಸ್ಕೂಲ್ ಮುಖ್ಯ ಅಧ್ಯಾಪಕ ಮುನಿರಾಜ್ ರೆಂಜಾಳ, ಪ್ರವಚನ ಕಾರ ಜಿ. ಎಸ್. ನಟೇಶ್, ನಟ ಹಾಗೂ ಲೇಖಕ ಓಂ ಗಣೇಶ್ ಉಪನ್ಯಾಸ ನೀಡಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ನಗರಾಭಿವೃಧ್ದಿ ಪ್ರಾಧಿಕಾರ ಅಧ್ಯಕ್ಷ ರಾಘವೇಂದ್ರ ಕಿಣಿ, ನಗರಸಭೆ ಅಧ್ಯಕ್ಷೆ ಸುಮಿತ್ರ ನಾಯಕ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಡಾ.ರೋಷನ್ ಕುಮಾರ್ ಶೆಟ್ಟಿ, ಎಂಜಿಎಂ ಕಾಲೇಜಿನ ಪ್ರಾಂಶು ಪಾಲ ಡಾ ದೇವಿದಾಸ್ ನಾಯ್ಕ, ಡಾ ಜಿ ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲ ಡಾ.ಭಾಸ್ಕರ್ ಶೆಟ್ಟಿ, ಉಡುಪಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಪ್ರೊ.ಮಾಲತಿದೇವಿ ಮತ್ತಿತರರು ಉಪಸ್ಥಿತರಿದ್ದರು.

ಎಂಜಿಎಂ ಕಾಲೇಜಿನ ಗಾಂಧಿ ಅಧ್ಯಯನ ಕೇಂದ್ರದ ವಿನೀತ್ ರಾವ್ ಸ್ವಾಗತಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News