ಮಂಗಳೂರು: ಪೊಲೀಸರಿಗೆ ಹಲ್ಲೆ ಪ್ರಕರಣ; ಇಬ್ಬರ ಬಂಧನ

Update: 2021-07-15 11:57 GMT

ಮಂಗಳೂರು, ಜು.15: ಉರ್ವ ಪೊಲೀಸ್ ಠಾಣೆಯ ಇಬ್ಬರು ಪೊಲೀಸ್ ಸಿಬ್ಬಂದಿಗೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಆರೋಪಿಗಳಾದ ಜೋಹನ್ ಸಿಕ್ವೇರಾ, ನೊಯೆಲ್ ಸಿಕ್ವೇರಾ ಎಂಬವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಬಂಧಿತರಿಗೆ ಜು.29ರವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಇನ್ನೋರ್ವ ಬಾಲಾರೋಪಿಯಾಗಿದ್ದು, ಆತನನ್ನು ಬಾಲಾಪರಾಧ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ನಗರ ಪೊಲೀಸ್ ಕಮಿಷನರ್ ಶಶಿಕುಮಾರ್ ಗುರುವಾರ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಬಂಧಿತ ಆರೋಪಿಗಳ ಪೈಕಿ ಮೊದಲನೇ ಆರೋಪಿ ವಿರುದ್ಧ ಎರಡು ಕೇಸು ದಾಖಲಾಗಿತ್ತು. ಇನ್ನೋರ್ವ ಆರೋಪಿ ರೌಡಿಶೀಟರ್ ಆಗಿದ್ದಾನೆ ಎಂದು ಮಾಹಿತಿ ನೀಡಿದರು.

ಪ್ರಕರಣ ವಿವರ: ಮೇ ತಿಂಗಳ ಕೊನೆಯಲ್ಲಿ ದಾಖಲಾದ ಎರಡು ಪ್ರಕರಣಗಳಿಗೆ ಸಂಬಂಧಿಸಿ ಕೇಸು ವಾಪಸ್ ಪಡೆದುಕೊಳ್ಳುವುದರ ಕುರಿತು ಇನ್‌ಸ್ಪೆಕ್ಟರ್ ಕೊಠಡಿಯಲ್ಲಿ ಮಾತುಕತೆ ನಡೆಯುತ್ತಿತ್ತು. ಇದನ್ನು ಆರೋಪಿಗಳು ಮೊಬೈಲ್‌ನಲ್ಲಿ ಶೂಟಿಂಗ್ ಮಾಡಿದ್ದಾರೆ. ಇದನ್ನು ಪೊಲೀಸ್ ಸಿಬ್ಬಂದಿ ಪ್ರಶ್ನಿಸಿದಾಗ ಆರೋಪಿಗಳು ಅನುಚಿತವಾಗಿ ವರ್ತಿಸಿದ್ದರು. ಮೊಬೈಲ್ ಎಳೆದುಕೊಳ್ಳುವಾಗ ತಳ್ಳಾಟವಾಗಿ ಇಬ್ಬರು ಪೊಲೀಸರು ಗಾಯಗೊಂಡಿದ್ದರು. ಈ ಕುರಿತು ಉರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News