ಸಂವಿಧಾನ ವಿರೋಧಿಸುವವರೇ ದೇಶದ್ರೋಹಿಗಳು: ಬಿ.ಕೆ. ಹರಿಪ್ರಸಾದ್

Update: 2021-08-01 09:56 GMT

ಮಂಗಳೂರು, ಆ.1: ದೇಶದ ಸಂವಿಧಾನ ರಚನೆಯಾದ ಬಳಿಕ ಮೇಲ್ವರ್ಗ, ಹಿಂದುಳಿದ ವರ್ಗ, ಕೆಳವರ್ಗದವರಿಗೆ ಸಮಾನ ಹಕ್ಕು ಬಂದಿದೆ. ಅಂತಹ ಸಂವಿಧಾನವನ್ನು ವಿರೋಧಿಸುವವರೇ ನಿಜವಾದ ದೇಶದ್ರೋಹಿಗಳು ಎಂದು ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಹೇಳಿದರು.

ನಗರದ ಮಲ್ಲಿಕಟ್ಟೆಯಲ್ಲಿರುವ ದ.ಕ. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ರವಿವಾರ ಹಿಂದುಳಿದ ವರ್ಗಗಳ ದ.ಕ. ಜಿಲ್ಲಾ ಘಟಕದ ಅಧ್ಯಕ್ಷ ವಿಶ್ವಾಸ್ ಕುಮಾರ್‌ ದಾಸ್‌ರ ಪದಗ್ರಹಣ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ದೇಶದಲ್ಲಿ ಬಿಜೆಪಿ ಸರಕಾರ ಆಡಳಿತಕ್ಕೆ ಬಂದ ಬಳಿಕ ರಾಷ್ಟ್ರವು ಕವಲುದಾರಿಯಲ್ಲಿದೆ. ಸಂವಿಧಾನ ಬದಲಾವಣೆ ಮಾಡುವ ಹುನ್ನಾರ ನಡೆಯುತ್ತುದೆ. ಕೆಳವರ್ಗ, ಹಿಂದುಳಿದ ವರ್ಗವನ್ನು ತುಳಿಯಲಾಗುತ್ತಿದೆ. ನಮಗೆ ಯಾವತ್ತೂ ನಾಥೂರಾಂ ಗೋಡ್ಸೆಯ ಚಿಂತನೆ ಬೇಕಾಗಿಲ್ಲ. ಮಹಾತ್ಮಾಗಾಂಧಿಯ ಚಿಂತನೆ ಬೇಕಿದೆ. ಪ್ರತಿಯೊಬ್ಬ ಭಾರತೀಯನಿಗೆ ಸಂವಿಧಾನವೇ ಮುಖ್ಯವಾಗಿದೆ. ಸಮಾಜದ ಕಟ್ಟಕಡೆಯ ವ್ಯಕ್ತಿಯ ಕಣ್ಣೀರು ಒರೆಸುವ, ಅಧಿಕಾರ, ನ್ಯಾಯ ನೀಡುವ ಶಕ್ತಿ ಸಂವಿಧಾನಕ್ಕಿದೆ. ಇಂತಹ ಪವಿತ್ರ ಸಂವಿಧಾನವನ್ನು ರಾಷ್ಟ್ರಪ್ರೇಮ-ರಾಷ್ಟ್ರ ಭಕ್ತಿಯ ಹೆಸರಿನಲ್ಲಿ ಬದಲಾವಣೆ ಮಾಡಲು ಹೊರಟಿರುವುದು ಖಂಡನೀಯ ಎಂದ ಹರಿಪ್ರಸಾದ್, ಜಾತಿ-ಧರ್ಮದ ಹೆಸರಿನಲ್ಲಿ ಹಿಂದುಳಿದ ವರ್ಗದವರನ್ನು ಎತ್ತಿಕಟ್ಟಲಾಗುತ್ತಿದೆ. ಇದನ್ನು ಗಂಭೀರವಾಗಿ ಪರಿಗಣಿಸಿ ಸಂವಿಧಾನ ರಕ್ಷಣೆ ಮಾಡಿದರೆ ಮಾತ್ರ ಈ ರಾಷ್ಟ್ರಕ್ಕೆ ಉಜ್ವಲ ಭವಿಷ್ಯವಿದೆ. ಬಹುಸಂಖ್ಯಾತರಾಗಿರುವ ಹಿಂದುಳಿದ ವರ್ಗದವರು ತಮ್ಮ ನ್ಯಾಯ, ರಕ್ಷಣೆಗಾಗಿ ಸಂಘಟಿತರಾಗಬೇಕು ಎಂದರು.

ಬ್ರಹ್ಮಶ್ರೀ ನಾರಾಯಣ ಗುರುಗಳ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು ಮಾತನಾಡಿದ ಕೆಪಿಸಿಸಿ ಹಿಂದುಳಿದ ವರ್ಗಗಳ ವಿಭಾಗದ ರಾಜ್ಯಾಧ್ಯಕ್ಷ ಎಂ.ಡಿ.ಲಕ್ಷ್ಮಿನಾರಾಯಣ ಬಿಜೆಪಿ ಹಿಂದುತ್ವ ವಿಚಾರವನ್ನು ಮುಂದಿಟ್ಟುಕೊಂಡು ರಾಜ್ಯ, ಕೇಂದ್ರದಲ್ಲಿ ಅಧಿಕಾರ ಪಡೆದಿದೆ. ಆದರೆ ಈಗ ಎಲ್ಲರೂ ಪಶ್ಚಾತ್ತಾಪ ಪಡುತ್ತಿದ್ದಾರೆ. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರ ತರುವಲ್ಲಿ ಹಿಂದುಳಿದ ವರ್ಗದ ಸಂಘಟನಾತ್ಮಕ ಪಾತ್ರ ಹಿರಿದಾಗಿದೆ ಎಂದರು.

ಡಿಸಿಸಿ ಅಧ್ಯಕ್ಷ ಹರೀಶ್ ಕುಮಾರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ದ.ಕ. ಜಿಲ್ಲಾ ಹಿಂದುಳಿದ ವರ್ಗಗಳ ಅಧ್ಯಕ್ಷ ವಿಶ್ವಾಸ್ ಕುಮಾರ್‌ದಾಸ್, ಶಾಸಕ ಯು.ಟಿ. ಖಾದರ್, ಮಾಜಿ ಸಚಿವರಾದ ರಮಾನಾಥ ರೈ, ಅಭಯಚಂದ್ರ ಜೈನ್, ಮಾಜಿ ಶಾಸಕರಾದ ಜೆ.ಆರ್. ಲೋಬೊ, ಮೊಯ್ದಿನ್ ಬಾವ, ಶಕುಂತಳಾ ಶೆಟ್ಟಿ, ಐವನ್ ಡಿಸೋಜ, ದ.ಕ.ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಶಾಹುಲ್ ಹಮೀದ್, ದ.ಕ.ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಲುಕ್ಮಾನ್ ಬಂಟ್ವಾಳ, ಎಐಸಿಸಿ ಕಾರ್ಯದರ್ಶಿ ಪಿ.ವಿ. ಮೋಹನ್, ಪಕ್ಷದ ಮುಖಂಡರಾದ ಸುರೇಶ್ ಬಲ್ಲಾಳ್, ಎ.ಸಿ. ಭಂಡಾರಿ, ಶಾಲೆಟ್ ಪಿಂಟೋ, ಸದಾಶಿವ ಉಳ್ಳಾಲ್, ಶಶಿಧರ್ ಹೆಗ್ಡೆ, ಜೋಕಿಂ ಡಿಸೋಜ, ಲಾರೆನ್ಸ್ ಡಿಸೋಜ, ರಾಜಶೇಖರ ಕೋಟ್ಯಾನ್, ಪ್ರಭಾಕರ ಶ್ರೀಯಾನ್, ಗಣೇಶ್ ಪೂಜಾರಿ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News