ಲೈಂಗಿಕ ಕಿರುಕುಳ ತಡೆಗೆ ಆಂತರಿಕ ದೂರು ಸಮಿತಿ ರಚನೆ ಕಡ್ಡಾಯ: ಜಿಲ್ಲಾಧಿಕಾರಿ ಜಿ.ಜಗದೀಶ್

Update: 2021-08-31 16:09 GMT

ಉಡುಪಿ, ಆ.31: ಉದ್ಯೋಗಸ್ಥ ಮಹಿಳೆಯರು ನಿರ್ಭಿತರಾಗಿ ಸುರಕ್ಷಿತ ವಾತಾವರಣದಲ್ಲಿ ಕಾರ್ಯ ನಿರ್ವಹಿಸಲು ಹಾಗೂ ಲೈಂಗಿಕ ಕಿರುಕುಳ ತಡೆಗೆ ಆಂತರಿಕ ದೂರು ಸಮಿತಿಗಳನ್ನು ಕಡ್ಡಾಯವಾಗಿ ರಚಿಸಬೇಕು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ.

ಮಂಗಳವಾರ ಮಣಿಪಾಲದ ಜಿಪಂನ ಡಾ. ಎಸ್.ಆಚಾರ್ಯ ಸಭಾಂಗಣ ದಲ್ಲಿ ಜಿಲ್ಲಾಡಳಿತ, ಜಿಪಂ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗಳ ಸಯುಕ್ತಶ್ರಾಯದಲ್ಲಿ ನಡೆದ ಕೆಲಸದ ಸ್ಥಳಗಳಲ್ಲಿ ಮಹಿಳೆಯರ ಮೇಲೆ ಲೈಂಗಿಕ ಕಿರುಕುಳ (ತಡೆಗಟ್ಟುವಿಕೆ, ನಿಷೇಧಿಸುವಿಕೆ, ನಿವಾರಿಸುವಿಕೆ) ಅಧಿನಿಯಮ-2013ರ ಜಿಲ್ಲಾ ಮಟ್ಟದ ಅಧಿಕಾರಿಗಳ ಕಾರ್ಯಗಾರವನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.

ಸರಕಾರಿ, ಖಾಸಗಿ ಕೈಗಾರಿಕೆಗಳು ಸೇರಿದಂತೆ ಇತರೆ ವಾಣಿಜ್ಯ ಸಂಸ್ಥೆಗಳಲ್ಲಿ ನಿರ್ವಹಿಸುವಾಗ 10ಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಕಾರ್ಯ ನಿರ್ವಹಿಸುತ್ತಿದ್ದಲ್ಲಿ, ಆಂತರಿಕ ದೂರು ನಿರ್ವಹಣಾ ಸಮಿತಿಯನ್ನು ತಪ್ಪದೇ ರಚಿಸಬೇಕು. ಮಹಿಳೆಯರು ತಮ್ಮ ವೃತ್ತಿ ನಿರ್ವಹಿಸುವ ಸ್ವ-ಉದ್ಯೋಗಿಗಳಿಂದ ಲೈಂಗಿಕ ಕಿರುಕುಳಗಳು ಉಂಟಾದಲ್ಲಿ ಸಂತ್ರಸ್ಥೆ ಸಮಿತಿಗೆ ದೂರನ್ನು ನೀಡಿ ತಮ್ಮ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳವುದರ ಜೊತೆಗೆ ತಮ್ಮಗಾದ ಅನ್ಯಾಯದ ಬಗ್ಗೆ ನ್ಯಾಯ ದೊರಕಿಸಿಕೊಳ್ಳಬೇಕು ಎಂದರು.

ಕೆಲಸದ ಸ್ಥಳಗಳಲ್ಲಿ ಮಹಿಳೆಯ ಲೈಂಗಿಕ ಕಿರುಕುಳ ಅಧಿನಿಯಮ-2013 ಜಾರಿಗೆ ಬಂದರೂ ಹಲವಾರು ವರ್ಷಗಳಾದರೂ ಅವುಗಳ ಅನುಷ್ಠಾನ ಸಮರ್ಪಕವಾಗಿ ಆಗುತ್ತಿಲ್ಲ. ಕೆಲವು ಕಚೇರಿಗಳಲ್ಲಿ ದೂರು ನಿರ್ವಹಣಾ ಸಮಿತಿ ರಚನೆಯಾಗದಿರುವುದು ಕಂಡು ಬಂದಿದೆ ಎಂದ ಅವರು, ಶೀಘ್ರದಲ್ಲಿಯೇ ಸಮಿತಿಗಳ್ನು ರಚಿಸುವುದರೊಂದಿಗೆ ಮಹಿಳೆಯರಿಗೆ ಅನ್ಯಾಯ ಆಗದಂತೆ ನೋಡಿಕೊಳ್ಳಬೇಕೆಂದು ಹೇಳಿದರು.

ಕಾನೂನು ಸೇವಾ ಪ್ರಾಧಿಕಾರದ ಸದಸ್ಯೆ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶೆ ಶರ್ಮಿಳಾ ಪ್ರಾಸ್ತಾವಿಕವಾಗಿ ಮಾತನಾಡಿ. ಕೆಲಸದ ಸ್ಥಳಗಳಲ್ಲಿ ಮಹಿಳೆಯರ ಮೇಲೆ ಲೈಂಗಿಕ ಕಿರುಕುಳ ನೀಡಿದ್ದಲ್ಲಿ ಐಪಿಸಿ ಕಲಂ 509 ರ ಅಡಿ ಅಪರಾಧಿಗೆ 3 ವರ್ಷಗಳ ಕಾಲ ಜೈಲು ಶಿಕ್ಷೆ ಜೊತೆಗೆ ದಂಡ ವಿಧಿಸಲಾಗುತ್ತದೆ. ಹಾಗೇ ಮಹಿಳೆಯರನ್ನು ಅನುಚಿತವಾಗಿ ಸ್ಪರ್ಶಿಸುವ ಅಪರಾಧಕ್ಕೆ ಕ್ರಿಮಿನಲ್ ಕಾನೂನು ಕಾಯ್ದೆಯಡಿ 1ರಿಂದ 5 ವರ್ಷಗಳ ಜೈಲು ಹಾಗೂ ದಂಡ ವಿಧಿಸಲಾಗುತ್ತದೆ ಎಂದರು. ಮಹಿಳೆಯರಿಗೆ ಅಶ್ಲೀಲ ಚಿತ್ರಗಳನ್ನು ಹಾಗೂ ಮೆಸೇಜ್ ಕಳುಹಿಸುವವರಿಗೆ ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿ ಜೈಲು ಶಿಕ್ಷೆ ವಿಧಿಸಲಾಗುತ್ತದೆ ಎಂದರು.

ಮಹಿಳೆಯರು ಉದ್ಯೋಗ ನಿರ್ವಹಿಸುವ ಕಚೇರಿ ಅಥವಾ ಸಂಸ್ಥೆಗಳಲ್ಲಿ ಅನುಚಿತವಾಗಿ ವರ್ತಿಸುವುದು, ಅಸಹ್ಯಕರವಾದ ಕಾಮೆಂಟ್‌ಗಳನ್ನು ಮಾಡುವುದು, ಲೈಂಗಿಕ ದೌರ್ಜನ್ಯವೆನಿಸಿಕೊಳ್ಳುತ್ತದೆ ಎಂದ ಅವರು, ನಮ್ಮ ದೇಶದಲ್ಲಿ ಕೆಲಸದ ಸ್ಥಳಗಳಲ್ಲಿ ಮಹಿಳೆಯರ ಮೇಲೆ ಲೈಂಗಿಕ ಕಿರುಕುಳ ಎಂಬ ವಿಶೇಷವಾದ ಕಾನೂನು ಪ್ರಬಲ ಹೊಂದಿದ್ದರೂ ಸಹ ಲೈಂಗಿಕ ಕಿರುಕುಳ ಕೃತ್ಯಗಳು ಕೇಳಿಬರುತ್ತಿವೆ ಎಂದರು.

ನ್ಯಾಯವಾದಿ ರೇಖಾ ಹೆಗ್ಡೆ ‘ಮಹಿಳೆಯರ ಮೇಲೆ ಲೈಂಗಿಕ ಕಿರುಕುಳ ತಡೆಗಟ್ಟುವಿಕೆ’ ಎಂಬ ವಿಷಯದ ಕುರಿತು ಉಪನ್ಯಾಸವನ್ನು ನೀಡಿದರು. ಕಾರ್ಯ ಕ್ರಮದಲ್ಲಿ ಜಿಪಂ ಉಪಕಾರ್ಯದರ್ಶಿ ಕಿರಣ್ ಫಡ್ನೇಕರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಆರ್.ಶೇಷಪ್ಪ ಹಾಗೂ ಜಿಲ್ಲಾ ವುಟ್ಟದ ಅಧಿಕಾರಿಗಳು ಉಪಸ್ಥಿತರಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News