ಉಡುಪಿ ಜಿಲ್ಲೆಯಾದ್ಯಂತ ಸರಳ ರೀತಿಯಲ್ಲಿ ಮೊಂತಿ ಫೆಸ್ತ್ ಆಚರಣೆ

Update: 2021-09-08 15:38 GMT

ಉಡುಪಿ, ಸೆ.8: ಕೊರೋನ ಭೀತಿಯ ಮಧ್ಯೆ ಕನ್ಯಾಮರಿಯಮ್ಮನವರ ಜನ್ಮದಿನವಾದ ಮೊಂತಿ ಫೆಸ್ತ್‌ನ್ನು ಜಿಲ್ಲೆಯಾದ್ಯಂತ ಬುಧವಾರ ಕ್ರೆಸ್ತರು ಭಕ್ತಿ ಭಾವದಿಂದ ಸರಳ ರೀತಿಯಲ್ಲಿ ಆಚರಿಸಿದರು.

ಸರಕಾರದ ಕೋವಿಡ್ ಮಾರ್ಗಸೂಚಿಯಂತೆ ಸಾರ್ವಜನಿಕವಾಗಿ ಹೊಸ ಭತ್ತದ ತೆನೆಯನ್ನು ಆಶೀರ್ವದಿಸಿ ಮೆರವಣಿಗೆಯಲ್ಲಿ ತರುವುದನ್ನು ನೀಷೇಧಿಸಿದ್ದು ಧರ್ಮಗುರುಗಳು ಚರ್ಚಿನಲ್ಲಿಯೇ ಆಯಾ ಊರಿನ ಗುರಿಕಾರರು ತಮ್ಮ ಹೊಲಗಳಿಂದ ಆರಿಸಿ ತಂದ ಹೊಸ ಭತ್ತದ ತೆನೆಯನ್ನು ಆಶೀರ್ವದಿಸಿದರು.

ಪುಟ್ಟ ಮಕ್ಕಳು ಕನ್ಯಾಮರಿಯಮ್ಮನವರ ಮೂರ್ತಿಗೆ ಹೂಗಳನ್ನು ಸಮರ್ಪಿಸಿದ ಬಳಿಕ ಜಿಲ್ಲೆಯ ಎಲ್ಲ ಚರ್ಚುಗಳಲ್ಲಿ ಧರ್ಮಗುರುಗಳು ಭತ್ತದ ತೆನೆಯನ್ನು ಆರ್ಶಿವದಿಸಿ ಪವಿತ್ರ ಬಲಿಪೂಜೆಯಲ್ಲಿ ಪಾಲ್ಗೊಂಡರು. ಪವಿತ್ರ ಬಲಿಪೂಜೆಯಲ್ಲಿ ಧರ್ಮಗುರುಗುಳು ಕುಟುಂಬ ಜೀವನ ಹಾಗೂ ಸಮಾಜದಲ್ಲಿ ಮಹಿಳೆಯ ಸ್ಥಾನಮಾನದ ಕುರಿತು ಪ್ರವಚನ ನೀಡಿದರು.

ಉಡುಪಿ ಕ್ರೆಸ್ತ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಅತಿ ವಂದನೀಯ ಜೆರಾಲ್ಡ್ ಐಸಾಕ್ ಲೋಬೊ ಮೂಡುಬೆಳ್ಳೆ ಸಮೀಪದ ಕುಂತಲನಗರ ಸಂತ ಅಂತೋನಿ ಯವರ ಚರ್ಚಿನಲ್ಲಿ ಹಬ್ಬದ ಬಲಿಪೂಜೆ ಅರ್ಪಿಸಿ ಹೊಸ ತೆನೆಗಳನ್ನು ಆಶೀರ್ವದಿಸಿ ಹಬ್ಬದ ಸಂದೇಶ ನೀಡಿದರು.

ಉಡುಪಿಯ ಶೋಕ ಮಾತಾ ಇಗರ್ಜಿಯಲ್ಲಿ ಜರಗಿದ ಧಾರ್ಮಿಕ ಕಾರ್ಯ ಕ್ರಮದಲ್ಲಿ ಚರ್ಚಿನ ಪ್ರಧಾನ ಧರ್ಮಗುರು ವಂ.ಚಾರ್ಲ್ಸ್ ಮಿನೇಜಸ್ ಹೊಸ ಭತ್ತದ ತೆನೆಯನ್ನು ಆಶೀರ್ವದಿಸಿದರು. ಕಲ್ಯಾಣಪುರ ಮಿಲಾಗ್ರಿಸ್ ಕ್ಯಾಥೆಡ್ರಲ್ ನಲ್ಲಿ ವಂ.ವಲೇರಿಯನ್ ಮೆಂಡೊನ್ಸಾ, ಶಿರ್ವ ಆರೋಗ್ಯ ಮಾತಾ ಇಗರ್ಜಿ ಯಲ್ಲಿ ವಂ.ಡೆನಿಸ್ ಡೆಸಾ, ಬ್ರಹ್ಮಾವರ ಹೋಲಿ ಫ್ಯಾಮಿಲಿ ಚರ್ಚಿನಲ್ಲಿ ಫಾ.ವಿಕ್ಟರ್ ಫೆರ್ನಾಂಡಿಸ್, ಕುಂದಾಪುರ ಹೋಲಿ ರೋಸರಿ ಚರ್ಚಿನಲ್ಲಿ ವಂ.ಸ್ಟಾನಿ ತಾವ್ರೋ, ಕಾರ್ಕಳದ ಅತ್ತೂರು ಸಂತ ಲಾರೆನ್ಸ್ ಬಾಸಿಲಿಕಾದಲ್ಲಿ ವಂ.ಆಲ್ಬನ್ ಡಿಸೋಜಾ ನೇತೃತ್ವದಲ್ಲಿ ಹಬ್ಬ ಪ್ರಯುಕ್ತ ಬಲಿಪೂಜೆ ನಡೆದವು.

ಬಲಿಪೂಜೆಯ ಬಳಿಕ ಧರ್ಮಗುರುಗಳು ಪ್ರತಿ ಕುಟುಂಬಕ್ಕೆ ಆಶೀರ್ವದಿಸಿದ ಹೊಸ ಭತ್ತದ ತೆನೆಯನ್ನು ನೀಡಿ ಹರಸಿದರು. ಇದೇ ವೇಳೆ ಚಿಕ್ಕ ಮಕ್ಕಳಿಗೆ ಸಿಹಿತಿಂಡಿ, ಕಬ್ಬುಗಳನ್ನು ಸಹ ವಿತರಿಸಲಾಯಿತು. ಇಗರ್ಜಿಯಿಂದ ಭಕ್ತಿಯಿಂದ ಕೊಂಡು ಬಂದ ಭತ್ತದ ತೆನೆಯನ್ನು ಕುಟುಂಬದ ಹಿರಿಯರು ಮನೆಗೆ ತಂದು ದೇವರ ಪೀಠದ ಮೇಲಿಟ್ಟು ಪ್ರಾರ್ಥನೆ ಸಲ್ಲಿಸಿ, ಹೊಸ ಭತ್ತದ ತೆನೆಗಳನ್ನು ಸುಲಿದು ಕುಟುಂಬದ ಸದಸ್ಯರೊಂದಿಗೆ ಪಾಯಸ ಅಥವಾ ಹಾಲಿನೊಂದಿಗೆ ಸೇವಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News