ಪುತ್ತೂರು: 15 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿ ಸೆರೆ
ಪುತ್ತೂರು: 15 ವರ್ಷಗಳ ಹಿಂದಿನ ಪ್ರಕರಣವೊಂದಕ್ಕೆ ಸಂಬಂಧಿಸಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಪುತ್ತೂರು ಗ್ರಾಮಾಂತರ ಪೊಲೀಸರು ಪತ್ತೆ ಹಚ್ಚಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ನ್ಯಾಯಾಲಯ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.
ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯ ಕೊಲ್ಲಂಬಾಡಿ ನಿವಾಸಿ ಮಹಮ್ಮದ್ ರಫೀಕ್ ಎಂ.ಎಂ. ಬಂಧಿತ ಆರೋಪಿ.
2006ರಲ್ಲಿ ಆರೋಪಿ ರಫೀಕ್ ಸೇರಿದಂತೆ ನಾಲ್ವರು ಆರೋಪಿಗಳು ಕಾರೊಂದರಲ್ಲಿ ಶ್ರೀಗಂಧದ ಎಣ್ಣೆಯನ್ನು ಕೇರಳಕ್ಕೆ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವೇಳೆ ಪುತ್ತೂರು ಗ್ರಾಮಾಂತರ ಪೊಲೀಸರು ಕಾರ್ಯಾಚರಣೆ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಈ ಪೈಕಿ ರಫೀಕ್ ಬಳಿಕ ನ್ಯಾಯಾಯಕ್ಕೆ ವಿಚಾರಣೆಗೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ. ಆರೋಪಿಯ ಪತ್ತೆಗಾಗಿ ನ್ಯಾಯಾಲಯ ವಾರೆಂಟ್ ಜಾರಿ ಮಾಡಿತ್ತು.
ಇದೀಗ ಪುತ್ತೂರು ಡಿವೈಎಸ್ಪಿ ಗಾನ ಪಿ. ಕುಮಾರ್, ಗ್ರಾಮಾಂತರ ವೃತ್ತ ನಿರೀಕ್ಷಕ ಉಮೇಶ್ ಉಪ್ಪಳಿಕೆ ಅವರ ಮಾರ್ಗದರ್ಶನದಲ್ಲಿ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯ ಎಸ್ಐ ಉದಯರವಿ ಎಂ.ವೈ ಮತ್ತು ಎಸ್ಐ ಅಮೀನಸಾಬ ಎಂ ಅತ್ತಾರ ಮತ್ತು ಸಿಬ್ಬಂದಿ ಕೇರಳದ ಕಣ್ಣೂರು ಎಂಬಲ್ಲಿ ಬಂಧಿಸಿ ಕರೆತಂದು ಪುತ್ತೂರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.