ಕಳವು ಪ್ರಕರಣ: ಆರೋಪಿಗೆ ಮೂರು ವರ್ಷ ಜೈಲು ಶಿಕ್ಷೆ, ದಂಡ
Update: 2021-11-30 16:41 GMT
ಉಡುಪಿ, ನ.30: ಏಳು ವರ್ಷಗಳ ಹಿಂದೆ ಕಳವು ಪ್ರಕರಣದ ಆರೋಪಿಗೆ ಉಡುಪಿ ನಗರದ ಒಂದನೇ ಹೆಚ್ಚುವರಿ ಸಿಜೆ ಮತ್ತು ಜೆಎಂಎಫ್ಸಿ ನ್ಯಾಯಾಲಯ ಜೈಲುಶಿಕ್ಷೆ ವಿಧಿಸಿ ತೀರ್ಪು ನೀಡಿದೆ.
ಪಡುತೋನ್ಸೆ ಗ್ರಾಮದ ಗುಜ್ಜರಬೆಟ್ಟು ನಿವಾಸಿ ಗಿರೀಶ್ ಶಿಕ್ಷೆಗೆ ಗುರಿಯಾಗಿರುವ ಆರೋಪಿ. ಈತ 2014ರ ಫೆ.23ರಂದು ಮಧ್ಯರಾತ್ರಿ ಪಡುತೋನ್ಸೆ ಗ್ರಾಮದ ಕೆಮ್ಮಣ್ಣುವಿನ ಕಾವ್ಯಾ ಎಂಬವರ ಮನೆಗೆ ನುಗ್ಗಿ ಲ್ಯಾಪ್ಟಾಪ್, ಮೊಬೈಲ್ ಹಾಗೂ 700ರೂ. ನಗದು ಕಳವು ಮಾಡಿರುವ ಬಗ್ಗೆ ಪ್ರಕರಣ ದಾಖಲಾಗಿತ್ತು.
ಆರೋಪಿ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರ ಸಲ್ಲಿಸಲಾಗಿತ್ತು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯದ ನ್ಯಾಯಾಧೀಶ ಶ್ಯಾಮ್ ಪ್ರಕಾಶ್ ಆರೋಪಿ ಮೇಲಿನ ಆರೋಪ ಸಾಬೀತಾಗಿದೆ ಎಂದು ಅಭಿಪ್ರಾಯ ಪಟ್ಟು, ಆರೋಪಿಗೆ 3 ವರ್ಷ ಕಾರಾಗೃಹ ಶಿಕ್ಷೆ ಹಾಗೂ 10,000 ರೂ. ದಂಡ ವಿಧಿಸಿ ತೀರ್ಪು ನೀಡಿದರು. ಸರಕಾರದ ಪರವಾಗಿ ಸಹಾಯಕ ಸರಕಾರಿ ಅಭಿಯೋಜಕಿ ಮೋಹಿನಿ ಕೆ. ವಾದ ಮಂಡಿಸಿದ್ದಾರೆ.