ನೈಟ್‌ ಕರ್ಫ್ಯೂ; ಹೊಸ ವರ್ಷಾಚರಣೆ ವಿಶೇಷ ಕಾರ್ಯಕ್ರಮಕ್ಕೆ ಅವಕಾಶವಿಲ್ಲ: ಉಡುಪಿ ಡಿಸಿ ಕೂರ್ಮಾರಾವ್

Update: 2021-12-27 15:05 GMT

ಉಡುಪಿ, ಡಿ.27: ಒಮೈಕ್ರಾನ್ ನಿಯಂತ್ರಣ ಕುರಿತಂತೆ ರಾಜ್ಯ ಸರಕಾರ ಡಿ.28ರಿಂದ ಜ.7ರವರೆಗೆ ಜಾರಿಗೊಳಿಸಿರುವ ನೈಟ್‌ ಕರ್ಫ್ಯೂ ಮತ್ತು ಹೊಸ ವರ್ಷಾಚರಣೆ ಕುರಿತ ಮಾರ್ಗಸೂಚಿಗಳನ್ನು ಜಿಲ್ಲೆಯಲ್ಲಿ ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಲಾಗುವುದು ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದ್ದಾರೆ.

ಮಣಿಪಾಲದ ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್‌ಹಾಲ್‌ನಲ್ಲಿ ಇಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡುತಿದ್ದರು. ಜಿಲ್ಲೆಯಾದ್ಯಂತ ಡಿ.28ರಿಂದ ಜನವರಿ 7ರವರೆಗೆ ರಾತ್ರಿ 10 ಗಂಟೆಯಿಂದ ಬೆಳಗಿನ ಜಾವ 5 ಗಂಟೆಯವರೆಗೆ ನೈಟ್‌ ಕರ್ಫ್ಯೂ ಜಾರಿಗೊಳಿಸಲಾಗುತ್ತಿದ್ದು, ಈ ಅವಧಿಯಲ್ಲಿ ಅಗತ್ಯ ಚಟುವಟಿಕೆಗಳನ್ನು ಹೊರತುಪಡಿಸಿ ಸಾರ್ವಜನಿಕರ ಓಡಾಟವನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ. ವೈದ್ಯಕೀಯ ಮತ್ತು ತುರ್ತು ಸೇವೆಗಳು ಯಥಾ ಪ್ರಕಾರ ಮುಂದುವರೆಯಲಿದ್ದು, ರಾತ್ರಿ ಪಾಳಿಯಲ್ಲಿ ಕಾರ್ಯನಿರ್ವಸುವ ಕೈಗಾರಿಕೆ/ ಕಂಪೆನಿಗಳಿಗೆ ಅನುಮತಿ ನೀಡಿದ್ದು, ಅಲ್ಲಿನ ನೌಕರರು ಸೂಕ್ತ ಗುರುತಿನ ಚೀಟಿ ಸಲ್ಲಿಸುವ ಮೂಲಕ ಸಂಚರಿಸಬಹುದು.

ಬಸ್, ರೈಲು ಮತ್ತು ವಿಮಾನ ಪ್ರಯಾಣಕ್ಕೆ ಅನುಮತಿಸಲಾಗಿದ್ದು, ಪ್ರಯಾಣಿಕರು ಸೂಕ್ತ ಪ್ರಯಾಣದ ದಾಖಲೆಗಳು ಸಲ್ಲಿಸುವುದು ಕಡ್ಡಾಯ ವಾಗಿದೆ. ಎಲ್ಲಾ ತರಹದ ಸರಕು ಸಾಗಾಟ ವಾಹನಗಳ ಓಡಾಟಕ್ಕೆ ಅನುಮತಿ ನೀಡಲಾಗಿದ್ದು, ಇ-ಕಾಮರ್ಸ್ ಮತ್ತು ಹೋಮ್ ಡೆಲಿವರಿ ಕೆಲಸ ಮುಂದುವರೆಸಲು ಅನುಮತಿ ನೀಡಿದೆ ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ತಿಳಿಸಿದರು.

ಅವಕಾಶ ನಿರಾಕರಣೆ

ಹೊಸ ವರ್ಷಾಚರಣೆ ಅಂಗವಾಗಿ ಡಿಸೆಂಬರ್ 30 ರಿಂದ ಜನವರಿ 2ರವರೆಗೆ ಮಾರ್ಗಸೂಚಿಗಳನ್ನು ಹೊರಡಿಸಿದ್ದು, ಕ್ಲಬ್/ಪಬ್/ರೆಸ್ಟೋರೆಂಟ್/ಹೋಟೆಲ್‌ಗಳು ಅಥವಾ ಖಾಸಗಿ ಸ್ಥಳಗಳಲ್ಲಿ ಡಿಜೆ/ಆರ್ಕೆಸ್ಟ್ರಾ/ಸಮೂಹ ನೃತ್ಯ ಮುಂತಾದ ಯಾವುದೇ ವಿಶೇಷ ಕಾರ್ಯಕ್ರಮಗಳನ್ನು ನಡೆಸಲು ಅವಕಾಶವಿರುವುದಿಲ್ಲ ಎಂದವರು ಹೇಳಿದರು.

ಹೊಸವರ್ಷ ಆಚರಿಸಲು ಸಾರ್ವಜನಿಕ ಸ್ಥಳಗಳು ಸೇರಿದಂತೆ ರಸ್ತೆಗಳು, ಉದ್ಯಾನವನಗಳು, ಆಟದ ಮೈದಾನಗಳು ಇತ್ಯಾದಿಗಳನ್ನು ಬಳಸುವಂತಿಲ್ಲ. ರೆಸ್ಟೋರೆಂಟ್‌ಗಳು/ ಹೋಟೆಲ್‌ಗಳು/ ಕ್ಲಬ್‌ಗಳು / ಪಬ್‌ಗಳು ಕೋವಿಡ್- 19 ಸಮುಚಿತ ವರ್ತನೆಯೊಂದಿಗೆ, ಸಿಬ್ಬಂದಿಗಳು ಆರ್‌ಟಿಪಿಸಿಆರ್ ನೆಗೆಟಿವ್ ಮತ್ತು 2 ಡೋಸ್ ಕೋವಿಡ್ ಲಸಿಕೆಯನ್ನು ಕಡ್ಡಾಯವಾಗಿ ಪಡೆದಿರಬೇಕು. ಇಲ್ಲಿಗೆ ಆಗಮಿಸುವ ಸಾರ್ವಜನಿಕರು ಕಡ್ಡಾಯವಾಗಿ 2 ಡೋಸ್ ಕೋವಿಡ್ ಲಸಿಕೆ ಪಡೆದಿರುವ ಕುರಿತು ಪತ್ರವನ್ನು ಪ್ರದರ್ಶಿಸಿದ ನಂತರವೇ ಪ್ರವೇಶ ನೀಡಬೇಕು ಹಾಗೂ ಕೋವಿಡ್-19 ಸಮುಚಿತ ವರ್ತನೆಯೊಂದಿಗೆ ಶೇ.50 ರಷ್ಟು ಆಸನ ಸಾಮರ್ಥ್ಯದೊಂದಿಗೆ ಕಾರ್ಯನಿರ್ವಹಿಸಬೇಕು ಎಂದರು.

ಡಿಸೆಂಬರ್ 28ರಿಂದ ಜಿಲ್ಲೆಯಲ್ಲಿ ಎಲ್ಲಾ ಸಭೆ, ಸಮಾರಂಭ, ಸಮ್ಮೇಳನ, ಮದುವೆ ಇತ್ಯಾದಿಗಳಲ್ಲಿ ಭಾಗವಹಿಸುವವರ ಸಂಖ್ಯೆಯನ್ನು 300ಕ್ಕೆ ಸೀಮಿತ ಗೊಳಿಸಿದ್ದು, ಈ ಕಾರ್ಯಕ್ರಮಗಳಲ್ಲಿ ಕೋವಿಡ್-19 ಸಮುಚಿತ ವರ್ತನೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವುದು ಸಂಘಟಕರ/ವ್ಯವಸ್ಥಾಪಕರ ಜವಾಬ್ದಾರಿ ಯಾಗಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಉಡುಪಿ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ನವೀನ್ ಭಟ್, ಅಪರ ಜಿಲ್ಲಾಧಿಕಾರಿ ಬಾಲಕೃಷ್ಣಪ್ಪ, ಎಎಸ್ಪಿ ಕುಮಾರಚಂದ್ರ ಉಪಸ್ಥಿತರಿದ್ದರು.

10ಗಂಟೆಯೊಳಗೆ ಎಲ್ಲಾ ಕಾರ್ಯಕ್ರಮ ಮುಗಿಯಬೇಕು

ಮಂಗಳವಾರದಿಂದ ರಾಜ್ಯಾದ್ಯಂತ ರಾತ್ರಿ 10ರಿಂದ ಬೆಳಗಿನ ಜಾವ 5 ರವರೆಗೆ ರಾತ್ರಿ ಕರ್ಫ್ಯೂ ಜಾರಿಗೊಳ್ಳಲಿದ್ದು, ಜ.7ರವರೆಗೆ ಎಲ್ಲಾ ಕಾರ್ಯಕ್ರಮ ಗಳು 10ಗಂಟೆಗೆ ಮುಕ್ತಾಯಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸ್ಪಷ್ಟಪಡಿಸಿದರು.

ಇಡೀ ರಾಜ್ಯದ ಜನರ ಹಿತದೃಷ್ಟಿಯಲ್ಲಿಟ್ಟುಕೊಂಡು ಸರಕಾರ ರಾತ್ರಿ ಕರ್ಫ್ಯೂ ಜಾರಿಗೊಳಿಸಿದೆ. ಹೀಗಾಗಿ ತಿಂಗಳ ಹಿಂದಷ್ಟೇ ಪ್ರದರ್ಶನ ಪ್ರಾರಂಭಿಸಿರುವ ಜಿಲ್ಲೆಯ ಯಕ್ಷಗಾನ ಮೇಳಗಳೂ 10 ಗಂಟೆಯೊಳಗೆ ತಮ್ಮ ಪ್ರದರ್ಶನವನ್ನು ಮುಕ್ತಾಯಗೊಳಿಸಬೇಕು. ಜಿಲ್ಲೆಯಲ್ಲಿ ರಾತ್ರಿ ವೇಳೆ ನಡೆಯುವ ಭೂತಕೋಲ ದಂಥ ಧಾರ್ಮಿಕ ಕಾರ್ಯಕ್ರಮಗಳಿಗೂ ಇದು ಅನ್ವಯಿಸುತ್ತದೆ ಎಂದರು.

ಜಿಲ್ಲೆಯಲ್ಲಿ ಎರಡನೇ ಡೋಸ್ ಶೇ.83

ಜಿಲ್ಲೆಯಲ್ಲಿ ಇದುವರೆಗೆ ಶೇ.96.03 (9,59,341 ಮಂದಿ) ಜನರಿಗೆ ಪ್ರಥಮ ಡೋಸ್ ಹಾಗೂ ಶೇ.82.97 (8,28,826) ಜನರಿಗೆ ಎರಡೂ ಡೋಸ್ ಕೋವಿಡ್-19 ಲಸಿಕೆ ನೀಡಿದ್ದು, 15-18 ವರ್ಷ ವಯಸ್ಸಿನವರಿಗೆ ಹಾಗೂ ಬೂಸ್ಟರ್ ಡೋಸ್ ನೀಡುವ ಕುರಿತಂತೆ ಕೇಂದ್ರ ಮತ್ತು ರಾಜ್ಯದ ಮಾರ್ಗಸೂಚಿ ಬಂದ ತಕ್ಷಣ ಸೂಕ್ತ ಕ್ರಮಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಕೂರ್ಮಾ ರಾವ್ ಎಂ. ತಿಳಿಸಿದರು.

ಜಿಲ್ಲೆಯಲ್ಲಿ ಪ್ರಸ್ತುತ 55 ಸಕ್ರಿಯ ಪ್ರಕರಣಗಳು ಮಾತ್ರ ಇದ್ದು, ಪಾಸಿಟಿಟಿ ಪ್ರಮಾಣ ಶೇ.0.2 ಇದೆ. ಕಳೆದ ಡಿ.1ರಿಂದ 26ರವರೆಗೆ ಜಿಲ್ಲೆಯಲ್ಲಿ ಒಟ್ಟು 82,950 ಮಂದಿಯ ಸ್ಯಾಂಪಲ್ ಪರೀಕ್ಷೆ ನಡೆದಿದ್ದು, 137 ಮಂದಿಯಲ್ಲಿ ಕೋವಿಡ್-19 ಸೋಂಕು ಪತ್ತೆಯಾಗಿದೆ. ಈ ಅವಧಿಯಲ್ಲಿ ಮಣಿಪಾಲದ ವಿದ್ಯಾಸಂಸ್ಥೆಗಳಲ್ಲಿ 10,733 ಮಂದಿಯ ಕೋವಿಡ್ ಪರೀಕ್ಷೆ ನಡೆದು 35 ಮಂದಿ ಪಾಸಿಟಿವ್ ಬಂದಿದ್ದಾರೆ ಎಂದರು.

ಜಿಲ್ಲೆಯಲ್ಲಿ ಒಮೈಕ್ರಾನ್‌ಗಾಗಿ 180 ಮಂದಿಯ ಸ್ಯಾಂಪಲ್‌ನ್ನು ಬೆಂಗಳೂರಿಗೆ ಕಳುಹಿಸಿದ್ದು, ಇವರಲ್ಲಿ ಇಬ್ಬರಲ್ಲಿ ಮಾತ್ರ ಈ ವೈರಸ್ ಕಂಡುಬಂದಿದೆ. 58 ಸ್ಯಾಂಪಲ್‌ ಗಳ ವರದಿ ಇನ್ನಷ್ಟೇ ಬರಬೇಕಿದೆ ಎಂದು ಕೂರ್ಮಾರಾವ್ ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News