ಹೆಣ್ಣುಮಕ್ಕಳಿಗೆ ಸುರಕ್ಷಿತ ವಾತಾವರಣ ನಿರ್ಮಾಣಗೊಳ್ಳಬೇಕು: ನ್ಯಾ. ಶರ್ಮಿಳಾ

Update: 2022-01-24 15:15 GMT

ಉಡುಪಿ, ಜ.24: ಹೆಣ್ಣು ಮಕ್ಕಳ ಬೆಳವಣಿಗೆಗೆ ಸುರಕ್ಷಿತ ವಾತಾವರಣ ನಿರ್ಮಿಸುವುದರ ಮೂಲಕ ಸಮಾಜದಲ್ಲಿರುವ ಲಿಂಗ ತಾರತಮ್ಯ ಸಮಸ್ಯೆಯನ್ನು ಸರಿಪಡಿಸಲು ಸಾಧ್ಯವಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾಯದರ್ಶಿ ಶರ್ಮಿಳಾ ಅಭಿಪ್ರಾಯಪಟ್ಟಿದ್ದಾರೆ.

ಸೋಮವಾರ ನಗರದ ಸರಕಾರಿ ಬಾಲಕಿಯರ ಪ್ರೌಢಶಾಲೆಯಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಚೈಲ್ಡ್‌ಲೈನ್-1098 ಉಡುಪಿ ಮತ್ತು ಶ್ರೀಕೃಷ್ಣ ರೋಟರ್ಯಾಕ್ಟ್ ಕ್ಲಬ್ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ರಾಷ್ಟ್ರೀಯ ಹೆಣ್ಣುಮಕ್ಕಳ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.

ಪ್ರತೀ ಹೆಣ್ಣು ಕೂಡಾ ಸಾಧಕಿ. ಪ್ರಸ್ತುತ ಹೆಣ್ಣು ಮಕ್ಕಳು ಎಲ್ಲಾ ಕ್ಷೇತ್ರದಲ್ಲೂ ಗಮನಾರ್ಹ ಸಾಧನೆ ಮಾಡಿದ್ದಾರೆ. ಆರೋಗ್ಯ, ಪೋಷಣೆ, ಶಿಕ್ಷಣದಲ್ಲಿ ಹೆಣ್ಣು ಮಕ್ಕಳಿಗೂ ಸಮಾನ ಅವಕಾಶ ನೀಡಬೇಕು ಹಾಗೂ ಅವರ ಸುರಕ್ಷತೆ ಬಗ್ಗೆ ಸಮಾಜದಲ್ಲಿ ಗರಿಷ್ಠ ಜಾಗೃತಿ ಮೂಡಿಸಬೇಕು ಎಂದು ಅವರು ಕರೆ ನೀಡಿದರು.

ಹೆಣ್ಣು ಮಕ್ಕಳು ತಮಗೆ ಸಿಕ್ಕ ಅವಕಾಶಗಳನ್ನು ಬಳಸಿಕೊಂಡು ವಿವಿಧ ಕ್ಷೇತ್ರಗಳಲ್ಲಿ ಉನ್ನತ ಸಾಧನೆ ಮಾಡಬೇಕು. ಮಹಿಳಾ ಸಾಧಕಿಯರ ಬಗ್ಗೆ ತಿಳಿದು ಅವರಿಂದ ಪ್ರೇರೇಪಣೆ ಪಡೆಯಬೇಕು. ಕಾನೂನಿನಲ್ಲಿ ತಮಗೆ ನೀಡಿರುವ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಶರ್ಮಿಳಾ ಹೆಣು್ಣ ಮಕ್ಕಳಿಗೆ ಕಿವಿಮಾತು ಹೇಳಿದರು.

ಉಡುಪಿ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಕಿರಣ್ ಪೆಡ್ನೇಕರ್ ಮಾತನಾಡಿ, ಹೆಣ್ಣು ಮಕ್ಕಳು ತಮ್ಮ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು. ಕೇಂದ್ರ ಹಾಗೂ ರಾಜ್ಯ ಸರಕಾರಗಳು ನಿಮಗಾಗಿಯೇ ಜಾರಿಗೊಳಿಸುವ ಹಲವಾರು ಯೋಜನೆಗಳ ಬಗ್ಗೆ ಅರಿತು ಅವುಗಳ ಪ್ರಯೋಜನ ಪಡೆಯಬೇಕು ಎಂದರು.

ಕಾರ್ಯಕ್ರಮದಲ್ಲಿ ಹೆಣ್ಣುಮಕ್ಕಳಿಗೆ ಸ್ಯಾನಿಟರಿ ನ್ಯಾಪ್‌ಕಿನ್‌ಗಳನ್ನು ವಿತರಿಸಲಾಯಿತು. ಸಾರ್ವಜನಿಕ ಶಿಕ್ಷಣ ಇಲಾಖೆಯ ಶೋಭಾ ಶೆಟ್ಟಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಮಹೇಶ್, ಉಡುಪಿ ಸರಕಾರಿ ಬಾಲಕಿಯರ ಪ್ರೌಢಶಾಲೆಯ ಮುಖ್ಯೋಪಾಧ್ಯಾಯನಿ ಜಯಲಕ್ಷ್ಮಿ ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ ಮಕ್ಕಳ ಸಹಾಯವಾಣಿ 1098ರ ಪ್ರಯೋಜನಗಳ ಕುರಿತು ಮಾಹಿತಿಗಳನ್ನು ನೀಡಲಾಯಿತು. ದೊಡ್ಡಣಗುಡ್ಡೆ ಡಾ.ಎ.ವಿ.ಬಾಳಿಗಾ ಆಸ್ಪತ್ರೆಯ ಆಡಳಿತಾಧಿಕಾರಿ ಸೌಜನ್ಯ ಶೆಟ್ಟಿ ವಿಶೇಷ ಉಪನ್ಯಾಸ ನೀಡಿದರು. ಉಡುಪಿ ಚೈಲ್ಡ್‌ಲೈನ್-1098ರ ನಿರ್ದೇಶಕ ರಾಮಚಂದ್ರ ಉಪಾಧ್ಯಾಯ ಸ್ವಾಗತಿಸಿದರು. ಜ್ಯೋತಿ ಕಾರ್ಯಕ್ರಮ ನಿರೂಪಿಸಿ ರೋಟರ್ಯಾಕ್ಟ್ ಕ್ಲಬ್‌ನ ಕಾರ್ಯದರ್ಶಿ ತನ್ವಿ ವಿಶಿಷ್ಠ ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News