ಸಕಾರಾತ್ಮಕ ಆಲೋಚನೆಗಳಿಂದ ಉತ್ತಮ ಭವಿಷ್ಯ: ಡಾ.ವಿಜಯ ಬಲ್ಲಾಳ್

Update: 2022-04-07 14:25 GMT

ಉಡುಪಿ : ಉತ್ತಮ ಆಹಾರ ಪದ್ಧತಿ ಮತ್ತು ಆಚಾರ ವಿಚಾರಗಳೇ ನಮ್ಮನ್ನು ದೈಹಿಕ ಹಾಗೂ ಮಾನಸಿಕವಾಗಿ ಆರೋಗ್ಯವಂತರನ್ನಾಗಿ ಮಾಡುತ್ತದೆ. ಸಕಾರಾತ್ಮಕ ಆಲೋಚನೆಗಳೇ ಉತ್ತಮ ಭವಿಷ್ಯವನ್ನು ನಿರ್ಮಿಸುತ್ತವೆ ಎಂದು ಅಂಬಲಪಾಡಿ ಶ್ರೀಜನಾರ್ದನ ಮತ್ತು ಮಹಾಕಾಳಿ ದೇವಸ್ಥಾನದ ಧರ್ಮದರ್ಶಿ ಡಾ.ನಿ.ಬಿ.ವಿಜಯ ಬಲ್ಲಾಳ್ ಹೇಳಿದ್ದಾರೆ. 

ಗುರುವಾರ ನಗರದ ರೆಡ್‌ಕ್ರಾಸ್ ಭವನದಲ್ಲಿ ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಉಡುಪಿ ಜಿಲ್ಲಾ ಘಟಕದ ವತಿಯಿಂದ ಆಯೋಜಿಸಲಾದ ವಿಶ್ವ ಆರೋಗ್ಯ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಯೋಗ, ಧ್ಯಾನ, ವ್ಯಾಯಾಮದಂತಹ ಸಕಾರಾತ್ಮಕ ಚಿಂತನೆ ಹಾಗೂ ಚಟುವಟಿಕೆಗಳಿಂದ ಮಾತ್ರ ಆರೋಗ್ಯ ವೃದ್ಧಿಯಾಗುತ್ತದೆ. ನಾವು ಆರೋಗ್ಯವಂತ ರಾಗುವ ಜೊತೆಗೆ ನಮ್ಮ ಸುತ್ತಮುತ್ತಲಿನ ಜನ ಕೂಡ ಆರೋಗ್ಯ ವಂತರಾಗಲು ನೆರವಾಗಬೇಕು. ಇಂದಿನ ದಿನಗಳಲ್ಲಿ ಯುವಜನತೆ ಜಂಕ್‌ಫುಡ್‌ಗಳಿಗೆ ಮರುಳಾಗದೇ ಮನೆಯಲ್ಲಿಯೇ ತಯಾರಿಸಿದ ಉತ್ತಮ ಆಹಾರವನ್ನು ಸೇವಿಸುವುದು ಅಗತ್ಯ ಎಂದರು. 

ನಮ್ಮ ದಿನನಿತ್ಯದ ಜೀವನ ಶೈಲಿಯಲ್ಲಿ ಉತ್ತಮ ವಿಚಾರಗಳನ್ನು ಅಳವಡಿಸಿ ಕೊಂಡು ಭವಿಷ್ಯವನ್ನು ಬದಲಾಯಿಸಿಕೊಳ್ಳಬೇಕು. ಸ್ವಾಮೀ ವಿವೇಕಾನಂದರ ವಾಣಿಯಂತೆ ನಮಗೆ ಬೇಕಾಗಿರುವುದು ಕಬ್ಬಿಣದಂತಹ ಸ್ನಾಯುಗಳು ಮತ್ತು ಉಕ್ಕಿನ ನರವ್ಯೆಹ ಹೊಂದಿರುವ ಯುವಕರು ಎಂದು ಅವರು ಹೇಳಿದರು.

ಗೌರವ ಅತಿಥಿಯಾಗಿ ಆಗಮಿಸಿದ ಐಆರ್‌ಸಿಎಸ್ ಬ್ಲಡ್ ಬ್ಯಾಂಕ್‌ನ ಮುಖ್ಯ ನಿರ್ದೇಶಕ ಎಸ್. ಜಯಕರ ಶೆಟ್ಟಿ ಮಾತನಾಡಿ, ಇಂದಿನ ಒತ್ತಡದ ಜೀವನದಿಂದ ಜನರು ಅನಾರೋಗ್ಯಕ್ಕೆ ತುತ್ತಾಗುತ್ತಿದ್ದು, ಆರೋಗ್ಯದ ಕಡೆಗೆ ಗಮನಹರಿಸುವುದು ಅತೀ ಅಗತ್ಯವಾಗಿದೆ ಎಂದು ಹೇಳಿದರು. 

ಜಿಲ್ಲಾ ವಾರ್ತಾಧಿಕಾರಿ ಬಿ. ಮಂಜುನಾಥ್ ಮಾತನಾಡಿ, ಆಧುನಿಕ ಜೀವನ ಶೈಲಿಯಿಂದ ಆರೋಗ್ಯದಲ್ಲಿ ಏರುಪೇರಾಗುತ್ತಿದೆ. ಈ ಬಗ್ಗೆ ಸೂಕ್ತ ಗಮನಹರಿಸಿ ಅನಾರೋಗ್ಯದಿಂದ ಪಾರಾಗಬೇಕು ಎಂದರು. ರೆಡ್‌ಕ್ರಾಸ್ ಸಂಸ್ಥೆಯ ಉಪಾಧ್ಯಕ್ಷ ಡಾ. ಅಶೋಕ್ ವೈ.ಜಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ವಿವಿಧ ಸಂಸ್ಥೆಗಳಿಗೆ ಮಾಸ್ಕ್ ಹಾಗೂ ಬಡಕುಟುಂಬಗಳಿಗೆ ದಿನಸಿ ಕಿಟ್ ವಿತರಿಸಲಾಯಿತು. ರೆಡ್‌ಕ್ರಾಸ್ ಸಂಸ್ಥೆಯ ಖಜಾಂಜಿ ರಮಾದೇವಿ, ಡಾ.ಜಿ. ಶಂಕರ್ ಮಹಿಳಾ ಕಾಲೇಜಿನ ಉಪನ್ಯಾಸಕರು ಹಾಗೂ ವಿದ್ಯಾರ್ಥಿನಿ ಯರು ಉಪಸ್ಥಿತರಿದ್ದರು.

ರೆಡ್‌ಕ್ರಾಸ್ ಸಂಸ್ಥೆಯ ಅಧ್ಯಕ್ಷ ಬಸ್ರೂರು ರಾಜೀವ ಶೆಟ್ಟಿ ಸ್ವಾಗತಿಸಿ, ಪ್ರಾಸ್ತಾವಿಕ ವಾಗಿ ಮಾತನಾಡಿದರು. ವಿ.ಜಿ.ಶೆಟ್ಟಿ ನಿರೂಪಿಸಿ, ರೆಡ್‌ಕ್ರಾಸ್ ಸಂಸ್ಥೆಯ ಕಾರ್ಯದರ್ಶಿ ರತ್ನಾಕರ ಶೆಟ್ಟಿ ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News