ಕುಂದಾಪುರ | ಪತ್ನಿಯನ್ನು ಕೊಲೆಗೈದು ಆತ್ಮಹತ್ಯೆ ಮಾಡಿಕೊಂಡ ಪತಿ

Update: 2022-08-22 07:18 GMT

ಕುಂದಾಪುರ, ಆ.22: ಪತ್ನಿಯನ್ನು ಕುಡಿದ ಮತ್ತಿನಲ್ಲಿ ಕೊಲೆಗೈದ (Murder) ಪತಿ ಬಳಿಕ ತಾನೂ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಂದಾಪುರ ಗ್ರಾಮಾಂತರ ಠಾಣಾ ವ್ಯಾಪ್ತಿಯ ದೇವಲ್ಕುಂದ ಶಾಲೆ ಸಮೀಪ ನಡೆದಿದ್ದು, ಸೋಮವಾರ ಬೆಳಗ್ಗೆ ಬೆಳಕಿಗೆ ಬಂದಿದೆ.

ಸೊರಬ ನಿವಾಸಿ ಪೂರ್ಣಿಮಾ ಆಚಾರ್ಯ(38) ಕೊಲೆಯಾದ ಮಹಿಳೆ. ಮೂಲತಃ ಕೋಗಾರ್ ನಿವಾಸಿ,‌ ಪ್ರಸಕ್ತ ದೇವಲ್ಕುಂದದಲ್ಲಿ ವಾಸವಿರುವ ರವಿ ಆಚಾರ್ಯ (42) ಕೊಲೆ ಆರೋಪಿಯಾಗಿದ್ದು, ಆತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆ ವಿವರ: ಪೂರ್ಣಿಮಾ ಆಚಾರ್ಯ ಅವರು ಹದಿನಾರು ವರ್ಷಗಳ‌ ಹಿಂದೆ ಕೋಗಾರ್ ಮೂಲದ ರವಿ ಆಚಾರ್ಯ ಅವರೊಂದಿಗೆ ವಿವಾಹವಾಗಿದ್ದರು‌. ರವಿ ಹೆಮ್ಮಾಡಿ ಸಮೀಪದ ಬಗ್ವಾಡಿಯಲ್ಲಿ ಟಿಪ್ಪರ್ ಚಾಲಕನಾಗಿ ದುಡಿಯುತ್ತಿದ್ದು, ಪತಿ ಹಾಗೂ ಪತ್ನಿ ತಮ್ಮ ಎರಡು ಮಕ್ಕಳೊಂದಿಗೆ ಮೊದಲು ಇಲ್ಲಿಯೇ ನೆಲೆಸಿದ್ದರು. ವಿಪರೀತ ಕುಡಿತದ ಚಟ ಹೊಂದಿದ್ದ ರವಿ ಕುಡಿದು ಆಗಾಗ್ಗೆ ಗಲಾಟೆ ಮಾಡುತ್ತಿದ್ದು, ಪತ್ನಿಗೂ ಕಿರುಕುಳ ನೀಡುತ್ತಿದ್ದನೆನ್ನಲಾಗಿದೆ. ಈ ಹಿನ್ನೆಲೆ ಮನೆಯವರು ಮಾತುಕತೆ ನಡೆಸಿ ಆ ಬಳಿಕ ಪತಿಯಿಂದ‌ ದೂರ ಉಳಿದುಕೊಂಡಿದ್ದ ಪೂರ್ಣಿಮಾ ತಮ್ಮ ಇಬ್ಬರು ಮಕ್ಕಳೊಂದಿಗೆ ತಾಯಿಯ ಮನೆ ಸೊರಬದಲ್ಲಿ ನೆಲೆಸಿದ್ದರು.

ಇದನ್ನೂ ಓದಿ: ನಿರುದ್ಯೋಗ, ಭ್ರಷ್ಟಾಚಾರ, ಹಣದುಬ್ಬರ ಸಮಸ್ಯೆ ಇರುವ ತನಕವೂ ಹೋರಾಟ ಮುಂದುವರಿಸುವೆ: ವರುಣ್ ಗಾಂಧಿ

ರವಿವಾರ ಹೆಮ್ಮಾಡಿ ಸಮೀಪ ಸಂಬಂಧಿಕರ ಸೀಮಂತ ಕಾರ್ಯಕ್ರಮಕ್ಕೆ ಪೂರ್ಣಿಮಾ ಬಂದಿದ್ದು ಪತಿ ಕರೆ ಮಾಡಿ ಮನೆಗೆ ಬರುವಂತೆ ಕೇಳಿಕೊಂಡಿದ್ದ. ಅದರಂತೆ ಪೂರ್ಣಿಮಾ ಕಾರ್ಯಕ್ರಮ‌ ಮುಗಿದ ಬಳಿಕ ಪತಿ ನೆಲೆಸಿದ್ದ ಬಾಡಿಗೆ ಮನೆಗೆ ತೆರಳಿ ತಮ್ಮ‌ತಾಯಿಗೆ ಮಾಹಿತಿ‌ ನೀಡಿದ್ದರು. ರಾತ್ರಿ ಪತಿ-ಪತ್ನಿ ಮಧ್ಯೆ ಜಗಳವಾಗಿ ಈ ಕೃತ್ಯ ನಡೆದಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

ಸೊರಬದಲ್ಲಿದ್ದ ಮಕ್ಕಳು ರವಿವಾರ ರಾತ್ರಿಯಿಂದ ತಾಯಿ ಮೊಬೈಲ್ ಕರೆ ಮಾಡಿದರೆ ಕರೆ ಸ್ವೀಕರಿಸುತ್ತಿರಲಿಲ್ಲ. ಹೀಗಾಗಿ ಅನುಮಾನಗೊಂಡ ಪೂರ್ಣಿಮಾರ ತಾಯಿ ಹೆಮ್ಮಾಡಿಯಲ್ಲಿರುವ ತಮ್ಮ ಸಂಬಂಧಿಕರಿಗೆ ಮಾಹಿತಿ ನೀಡಿದ್ದಾರೆ. ಸಂಬಂಧಿಕರು ಕಳೆದ ರಾತ್ರಿಯೇ ರವಿ ಮನೆ ಬಳಿ ಹೋಗಿ ನೋಡಿದಾಗ ಲೈಟ್ ಆಫ್ ಇದ್ದ ಕಾರಣ ಮಲಗಿರಬಹುದು ಎಂದು ಭಾವಿಸಿ ವಾಪಾಸಾಗಿದ್ದರು. ಆದರೆ ಬೆಳಿಗ್ಗೆಯೂ ಪೂರ್ಣಿಮಾ ಕರೆ ಸ್ವೀಕರಿಸದ ಹಿನ್ನೆಲೆಯಲ್ಲಿ ಮತ್ತೆ ಮನೆಗೆ ಹೋಗಿ ನೋಡಿದಾಗ ಕೃತ್ಯ ಬೆಳಕಿಗೆ ಬಂದಿದೆ.

ಕುಂದಾಪುರ ಡಿವೈಎಸ್ಪಿ ಶ್ರೀಕಾಂತ್ ಕೆ, ಸಿಪಿಐ ಗೋಪಿಕೃಷ್ಣ, ಠಾಣಾಧಿಕಾರಿ ಪವನ್ ನಾಯ್ಕ್ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿ ತನಿಖೆ ನಡೆಸುತ್ತಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News