ರಾಜ್ಯದ ನಿಜವಾದ ಸಾಮರ್ಥ್ಯವನ್ನು ನಾವು ಅನಾವರಣಗೊಳಿಸುವ ದಿನಗಳು ಶೀಘ್ರ ಬರಲಿವೆ: ರಾಹುಲ್ ಗಾಂಧಿ

Update: 2022-10-23 07:45 GMT
ಕರ್ನಾಟಕದಲ್ಲಿ ಭಾರತ್ ಜೋಡೋ ಯಾತ್ರೆ ಪೂರ್ಣಗೊಂಡು ತೆಲಂಗಾಣ ಪ್ರವೇಶಿಸುವ ಸಂದರ್ಭ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ರಾಹುಲ್ ಗಾಂಧಿ ಸಮ್ಮುಖದಲ್ಲಿ ತೆಲಂಗಾಣ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ರೇವಂತ್ ಅನುಮೂಲರಿಗೆ ಧ್ವಜ ಹಸ್ತಾಂತರಿಸಿದರು. (Photo credit: Twitter@INCKarnataka)

ಬೆಂಗಳೂರು, ಅ.23: ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ನೇತೃತ್ವದ 'ಭಾರತ್‌ ಜೋಡೊ ಯಾತ್ರೆ'ಯು (Bharat Jodo Yatra) ರಾಜ್ಯದಲ್ಲಿ 22 ದಿನಗಳ ನಡಿಗೆಯನ್ನು ಪೂರ್ಣಗೊಳಿಸಿದೆ. ಈ ಹಿನ್ನೆಲೆಯಲ್ಲಿ ರಾಹುಲ್‌ ಗಾಂಧಿಯವರು ಇಂದು ರಾಯಚೂರಿನ ಯರಮರಸ್‌ ಕೃಷ್ಣಾ ನದಿಯ ತಟದಿಂದ ಕರ್ನಾಟಕದ ಜನತೆಗೆ ಸಂದೇಶವನ್ನು ಬಿಡುಗಡೆ ಮಾಡಿದ್ದಾರೆ. ಕರ್ನಾಟಕದ ಮಹಾಕವಿ ಕುವೆಂಪು ಈ ಭೂಮಿಯನ್ನು "ಸರ್ವ ಜನಾಂಗದ ಶಾಂತಿಯ ತೋಟ" ಎಂದು ಬಣ್ಣಿಸಿದ್ದರು. ಇದು ಖಂಡಿತ ಶಾಂತಿ ಹಾಗೂ ಸಾಮರಸ್ಯದ ನಾಡು. ಭಾರತ ಜೋಡೋ ಯಾತ್ರೆಯ ಮೂಲಕ ಈ ಮಾತು ಮತ್ತೊಮ್ಮೆ ಸಾಬೀತಾಗಿದೆ. ಕರ್ನಾಟಕದ ಜನರು ಈ ಯಾತ್ರೆಗೆ ತಮ್ಮ ಅಭೂತಪೂರ್ವ ಬೆಂಬಲ ನೀಡಿ ಸ್ಪಂದಿಸಿದ್ದಾರೆ. ಅದಕ್ಕಾಗಿ ನಾವು ನಮ್ಮ ಹೃತೂರ್ವಕ ಧನ್ಯವಾದಗಳು ಹಾಗೂ ಕೃತಜ್ಞತೆಗಳನ್ನು ಸಲ್ಲಿಸುತ್ತೇವೆ ಎಂದು ಹೇಳಿದ್ದಾರೆ.

 ಚಾಮರಾಜನಗರದ ಬಂಡೀಪುರ ಅರಣ್ಯದ ಹೊರವಲಯದಿಂದ ಹೊರಟ ಭಾರತ ಜೋಡೋ ಯಾತ್ರೆಯು ಸಾಂಸ್ಕೃತಿಕ ರಾಜಧಾನಿ ಮೈಸೂರು ಮೂಲಕ ಸಾಗಿ, ಕಾವೇರಿ, ತುಂಗಭದ್ರಾ, ಕೃಷ್ಣಾ ನದಿಗಳನ್ನು ದಾಟುತ್ತಾ ರಾಯಚೂರಿನ ಹತ್ತಿ ಗದ್ದೆಗಳ ಬಳಿ ಕರ್ನಾಟಕದಲ್ಲಿ ಸುದೀರ್ಘ 22ನೇ ದಿನದಂದು ತನ್ನ ಪಯಣವನ್ನು ಪೂರ್ಣಗೊಳಿಸಿದೆ. ಈ ಯಾತ್ರೆಯು ಕರ್ನಾಟಕದ ಮೂಲಕ ಸಾಗುವ ವೇಳೆ, ಇಲ್ಲಿನ ಜನರ ಅಪರಿಮಿತ ಸಾಮರ್ಥ್ಯವನ್ನು ದುರ್ಬಲಗೊಳಿಸಲಾಗುತ್ತಿದೆ ಎನ್ನುವುದು ಸ್ಪಷ್ಟವಾಯಿತು. ವಿವಿಧ ಬೆಳೆ ಬೆಳೆಯುವ ಪ್ರತಿಯೊಂದು ಪ್ರದೇಶದ ರೈತರೂ ಹೆಚ್ಚುತ್ತಿರುವ ವೆಚ್ಚಗಳು, ಅನಿಶ್ಚಿತ ಇಳುವರಿ ಹಾಗೂ ಬೆಲೆ ಏರಿಳಿತದಿಂದ ತಮ್ಮ ಕುಟುಂಬಗಳನ್ನ ನಿರ್ವಹಿಸಲು ಕಷ್ಟಪಡುತ್ತಿದ್ದಾರೆ ಎಂದರು.

ನಾಡಿನ ಯುವಕರು ಎಷ್ಟೇ ಪ್ರಯತ್ನಿಸಿದರೂ, ತಮ್ಮ ಆಕಾಂಕ್ಷೆಗಳನ್ನು ಪೂರೈಸುವ ಉದ್ಯೋಗಾವಕಾಶಗಳನ್ನು ಕಂಡುಕೊಳ್ಳಲು ಸಾಧ್ಯವಾಗುತ್ತಿಲ್ಲಾ. ಸಣ್ಣ ಉದ್ಯಮಿಗಳು ಅಸಮರ್ಪಕ ಸಹಕಾರ ಅಥವಾ ಬೆಂಬಲವೇ ಇಲ್ಲದೇ ಉದ್ಯಮವನ್ನು ಮುಚ್ಚುತ್ತಿದ್ದಾರೆ, ಹಾಗೇ ಮಾರುಕಟ್ಟೆಯನ್ನೂ ಸಹ ಈ ಸರ್ಕಾರ ಕೇವಲ ಕೆಲವೇ ಕೆಲವು ಉದ್ಯಮಿಗಳ ಪರವಾಗಿ ಮಾಡಿದೆ. ಉದ್ಯೋಗ ಖಾತ್ರಿ ಯೋಜನೆಯ ಕಾರ್ಮಿಕರು, ಮಹಿಳಾ ಕಾರ್ಮಿಕರು, ನೇಕಾರರು ಸೇರಿದಂತೆ ವಿವಿಧ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿರುವ ಜನರು ಆದಾಯ ಗಳಿಕೆಯಲ್ಲಿ ಸೋಲುತ್ತಿದ್ದಾರೆ. ಸಮಾಜದ ಶೋಷಿತ, ಹಿಂದುಳಿದ ವರ್ಗಗಳು ಹಾಗೂ ಅಲ್ಪಸಂಖ್ಯಾತರು ದ್ವೇಷ ಮತ್ತು ಹಿಂಸೆಯನ್ನು ಎದುರಿಸುತ್ತಿದ್ದಾರೆ. ರಾಜ್ಯದ ಭಾಷೆಗಳನ್ನ, ವೈವಿಧ್ಯಮಯ ಸಂಸ್ಕೃತಿಯನ್ನ ಹಾಗೂ ಇತಿಹಾಸವನ್ನ ತಿರುಚಿ ನಾಶಪಡಿಸಲಾಗುತ್ತಿದೆ ಎಂದವರು ವಾಗ್ದಾಳಿ ನಡೆಸಿದರು.

'ಕಳಬೇಡ ಕೊಲಬೇಡ, ಹುಸಿಯ ನುಡಿಯಲು ಬೇಡ, ಮುನಿಯಬೇಡ, ಅನ್ಯರಿಗೆ ಅಸಹ್ಯ ಪಡಬೇಡ' ಎಂದು ಗುರು ಬಸವಣ್ಣನವರು ಹೇಳಿದ್ದರು. ಕರ್ನಾಟಕದಲ್ಲಿ ಅವರ ಬೋಧನೆಗಳಿಗೆ ತದ್ವಿರುದ್ಧವಾಗಿ ಬಿಜೆಪಿ ನಡೆದುಕೊಳ್ಳುತ್ತಿದೆ. ಇಡೀ ದೇಶಕ್ಕೆ ಬೆಳವಣಿಗೆಯ

ದಾರಿದೀಪವಾಗಿದ್ದ ಕರ್ನಾಟಕ ರಾಜ್ಯ ಇಂದು 40% ಕಮಿಷನ್' ಸರ್ಕಾರಕ್ಕೆ ಕುಖ್ಯಾತಿ ಗಳಿಸಿದ್ದು, ಬಿಜೆಪಿಯ "ಸೂಟು-ಬೂಟಿನ ಲೂಟಿ ಸರ್ಕಾರ"ಕ್ಕೆ ತಕ್ಕ ಉದಾಹರಣೆಯಾಗಿದೆ. ಉದ್ಯೋಗಕ್ಕಾಗಿ ಲಂಚ, ಗುತ್ತಿಗೆಗೆ ಲಂಚ, ಜನ ಸಾಮಾನ್ಯರ ಕೆಲಸಕ್ಕೆ ಲಂಚ, ಕರ್ನಾಟಕದಲ್ಲಿ ಬಿಜೆಪಿಗೆ ಮಾರಾಟವಾಗದ ಉಳಿದ ಯಾವುದೇ ಸರ್ಕಾರಿ ಸೇವೆ ಇಲ್ಲ. ಸಾಮಾಜಿಕ ಸೌಹಾರ್ದ ಮತ್ತು ಸಾರ್ವಜನಿಕ ವಲಯದ ಬೆಳವಣಿಗೆ ಕುಂಠಿತವಾಗಿದ್ದು, ಅದು ಬಡವರು ಹಾಗೂ ದುರ್ಬಲರನ್ನು ಹೆಚ್ಚು ಭಾದಿಸುತ್ತಿದೆ ಮತ್ತು ಆರ್ಥಿಕ ಪ್ರಗತಿಗೆ ಪಾರ್ಶ್ವವಾಯು ಹಿಡಿಯುವಂತೆ ಮಾಡಿದೆ ಎಂದವರು ಆರೋಪಿಸಿದ್ದಾರೆ.

ಶಾಂತಿಯ ತೋಟವಾದ ಕರ್ನಾಟಕವನ್ನು ಬಿಜೆಪಿಯ ದ್ವೇಷ ಮತ್ತು ದುರಾಡಳಿತದ ಪ್ರಯೋಗಾಲಯವನ್ನಾಗಿ ಮಾಡಲು ಕಾಂಗ್ರೆಸ್ ಪಕ್ಷ ಎಂದಿಗೂ ಬಿಡುವುದಿಲ್ಲ. ನಮ್ಮ ರಾಜ್ಯ ನಾಯಕರು, ಕರ್ನಾಟಕದ ಶ್ರೀಮಂತ ಸಂಸ್ಕೃತಿ ಮತ್ತು ಕೋಟ್ಯಂತರ ಕನ್ನಡಿಗರ ಬೆಂಬಲದಿಂದ, ಅವಿರತ ಪ್ರಯತ್ನಗಳ ಮೂಲಕ ಪ್ರೀತಿ, ಶಾಂತಿ ಹಾಗೂ ಸೌಹಾರ್ದದ ಹಾದಿಯಲ್ಲಿ ಈ ಅದ್ಭುತ ರಾಜ್ಯದ ನಿಜವಾದ ಸಾಮರ್ಥ್ಯವನ್ನು ನಾವು ಅನಾವರಣಗೊಳಿಸುವ ದಿನಗಳು ಶೀಘ್ರದಲ್ಲೇ ಬರಲಿವೆ ಎಂದು ರಾಹುಲ್ ಗಾಂಧಿ ಆಶಾವಾದ ವ್ಯಕ್ತಪಡಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News