ಸಾಗರದ ಸಹಕಾರಿ ಧುರೀಣ, ಮಾಜಿ ಶಾಸಕ ಎಲ್.ಟಿ.ತಿಮ್ಮಪ್ಪ ಹೆಗಡೆ ನಿಧನ

Update: 2023-01-17 03:29 GMT

ಸಾಗರ, ಜ.17: ಸಾಗರದ ಮಾಜಿ ಶಾಸಕ, ಸಹಕಾರಿ ಧುರೀಣ ಎಲ್.ಟಿ.ತಿಮ್ಮಪ್ಪ ಹೆಗಡೆ(94) ಮಂಗಳವಾರ ಬೆಳಗ್ಗೆ ನಿಧನರಾಗಿದ್ದಾರೆ.

ಮೃತರು ಪತ್ನಿ, ಇಬ್ಬರು ಪುತ್ರರು ಸೇರಿದಂತೆ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.

ತಿಮ್ಮಪ್ಪ ಹೆಗಡೆ ಸಾಗರ ಪ್ರಾಂತ್ಯ ಅಡಿಕೆ ಬೆಳೆಗಾರರ ಸಂಘ ಸ್ಥಾಪನೆ ಸೇರಿದಂತೆ ಅಂತಾರಾಜ್ಯ ಸಂಸ್ಥೆ ಕ್ಯಾಂಪ್ಕೋ, ಸಾಗರದ ಆಪ್ಸ್‌ಕೋಸ್‌ನಂತಹ ಸಂಸ್ಥೆಗಳನ್ನು ಹುಟ್ಟುಹಾಕುವಲ್ಲಿ ಅತ್ಯಂತ ಮುಖ್ಯ ಪಾತ್ರ ವಹಿಸಿದ್ದರು. ಸಾಗರದ ಆಪ್ಸ್‌ಕೋಸ್, ತೋಟಗಾರ್ಸ್, ಅಡಿಕೆ ಬೆಳೆಗಾರರ ಸಂಘಗಳ ಸಂಸ್ಥಾಪಕ ಅಧ್ಯಕ್ಷರಾಗಿದ್ದ ಇವರು ಕ್ಯಾಂಪ್ಕೋ ಸಂಸ್ಥೆಯ ಸಂಸ್ಥಾಪಕ ನಿರ್ದೇಶಕರಾಗಿಯೂ ಕಾರ್ಯ ನಿರ್ವಹಿಸಿದ್ದರು.

1978-83ರಲ್ಲಿ ಸಾಗರ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಶಾಸಕರಾಗಿ ಆಯ್ಕೆಯಾಗಿದ್ದ ಇವರು, ಹಟ್ಟಿಯಂಗಡಿಯ ಸಿದ್ಧಿವಿನಾಯಕ ಕ್ಷೇತ್ರಾಭಿವೃದ್ಧಿ ಟ್ರಸ್ಟ್ ಹಾಗೂ ಸಿದ್ಧಿ ಶಿಕ್ಷಣ ಪ್ರತಿಷ್ಠಾನ ಸಂಸ್ಥೆಗಳ ಸ್ಥಾಪಕ ಅಧ್ಯಕ್ಷರಾಗಿ ಹಟ್ಟಿಯಂಗಡಿ ಗಣಪತಿ ದೇವಸ್ಥಾನ ಹಾಗೂ ಶಿಕ್ಷಣ ಸಂಸ್ಥೆಗಳ ಬೆಳವಣಿಗೆಯಲ್ಲಿ ಮಹತ್ವದ ಪಾತ್ರ ವಹಿಸಿದ್ದರು.  ಕೇಂದ್ರ ಸಾಂಬಾರು ಮಂಡಳಿಯ ನಿರ್ದೇಶಕರಾಗಿ, ಭೂ ನ್ಯಾಯ ಮಂಡಳಿ, ಲ್ಯಾಂಡ್ ಗ್ರಾಂಟ್ ಸಮಿತಿಗಳಲ್ಲಿ ಸದಸ್ಯರಾಗಿಯೂ ಅವರು ಕಾರ್ಯನಿರ್ವಹಿಸಿದ್ದರು.

Similar News