ಎರಡು ಕುಟುಂಬಗಳ ನಡುವೆ ಘರ್ಷಣೆ: ಗುಂಡಿನ ದಾಳಿಗೆ ಇಬ್ಬರು ಸಾವು, ಓರ್ವ ಗಂಭೀರ

Update: 2023-06-11 13:47 GMT

ಭೋಪಾಲ್: ಹಳೆಯ ವಿವಾದಕ್ಕೆ ಸಂಬಂಧಿಸಿದಂತೆ ಎರಡು ಕುಟುಂಬಗಳ ನಡುವಿನ ಘರ್ಷಣೆಯಲ್ಲಿ ಇಬ್ಬರು ವ್ಯಕ್ತಿಗಳು ಸಾವನ್ನಪ್ಪಿದ್ದು, ಒಬ್ಬರು ಗಂಭೀರವಾಗಿರುವ ಘಟನೆ ಮಧ್ಯಪ್ರದೇಶದ ದೇವಾಸ್ ಜಿಲ್ಲೆಯಲ್ಲಿ ರವಿವಾರ ನಡೆದಿದೆ. 

ಗೋಲಾ ಗುಥಾನ್ ಗ್ರಾಮದಲ್ಲಿ ಬೆಳಗ್ಗೆ ಗೋದಾರ ಮತ್ತು ದೇದಾದ್ ಕುಟುಂಬಗಳ ನಡುವೆ ಘರ್ಷಣೆ ನಡೆದಿದ್ದು, ಜಗಳದ ವೇಳೆ ಗುಂಡಿನ ದಾಳಿ ನಡೆಸಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಸಂಪತ್ ಉಪಾಧ್ಯಾಯ ತಿಳಿಸಿದ್ದಾರೆ.

"ಗೋದರ ಕುಟುಂಬಕ್ಕೆ ಸೇರಿದ ಮೂವರ ಮೇಲೆ ಗುಂಡು ಹಾರಿಸಲಾಗಿದ್ದು, ಇದರ ಪರಿಣಾಮವಾಗಿ ರಾಜೇಶ್ ಗೋದಾರ ಮತ್ತು ಕೈಲಾಶ್ ಗೋದಾರ ಎಂಬವರು ಮೃತಪಟ್ಟಿದ್ದಾರೆ. ಕಾನೂನು ಸುವ್ಯವಸ್ಥೆ ಕಾಪಾಡಲು ಗ್ರಾಮದಲ್ಲಿ ಬಂದೋಬಸ್ತ್‌ ಮಾಡಲಾಗಿದೆ” ಎಂದು ಎಸ್ಪಿ ತಿಳಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದ್ದು, ಜಗಳಕ್ಕೆ ಕಾರಣವನ್ನು ಕಂಡುಹಿಡಿಯಲು ತನಿಖೆ ನಡೆಯುತ್ತಿದೆ ಎಂದು ಅವರು ಹೇಳಿದ್ದಾರೆ. ಗುಂಡಿನ ದಾಳಿಯಲ್ಲಿ ಮೃತಪಟ್ಟಿರುವ ಕೈಲಾಶ್ ಗೋದಾರ ಅವರು, ಭಾರತೀಯ ಜನತಾ ಯುವ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅನಿಲ್ ಗೋದಾರ ಅವರ ತಂದೆ ಎಂದು ಮೂಲಗಳು ತಿಳಿಸಿರುವುದಾಗಿ indianexpress.com ವರದಿ ಮಾಡಿದೆ.

Similar News