ಬಸವಣ್ಣನವರ ವಿಚಾರಧಾರೆಗಳಿಂದ ಜಾತಿ-ಧರ್ಮಗಳ ನಡುವೆ ವಿಷಬೀಜ ಬಿತ್ತುವುದನ್ನು ತಡೆಗಟ್ಟಲು ಸಾಧ್ಯ : ಸಚಿವ ತಂಗಡಗಿ

Update: 2025-04-29 22:26 IST
ಬಸವಣ್ಣನವರ ವಿಚಾರಧಾರೆಗಳಿಂದ ಜಾತಿ-ಧರ್ಮಗಳ ನಡುವೆ ವಿಷಬೀಜ ಬಿತ್ತುವುದನ್ನು ತಡೆಗಟ್ಟಲು ಸಾಧ್ಯ : ಸಚಿವ ತಂಗಡಗಿ
  • whatsapp icon

ಬಾಗಲಕೋಟೆ : ಸಮಾಜದಲ್ಲಿಂದು ಧರ್ಮ ಹಾಗೂ ಜಾತಿಗಳ ನಡುವೆ ವಿಷಬೀಜ ಬಿತ್ತುವ ಕೆಲಸ ನಡೆಯುತ್ತಿದ್ದು, ಬಸವಣ್ಣನವರ ವಿಚಾರಧಾರೆಗಳಿಂದ ಇದನ್ನು ತಡೆಗಟ್ಟಲು ಸಾಧ್ಯವಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ಎಸ್.ತಂಗಡಗಿ ಅಭಿಪ್ರಾಯಪಟ್ಟಿದ್ದಾರೆ.

ಮಂಗಳವಾರ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಬಾಗಲಕೋಟೆ ಜಿಲ್ಲಾಡಳಿತದ ವತಿಯಿಂದ ಕೂಡಲಸಂಗಮದಲ್ಲಿ ‘ಅನುಭವ ಮಂಟಪ-ಬಸವಾದಿ ಶರಣರ ವೈಭವ' ಕಾರ್ಯಕ್ರಮದ ವೇದಿಕೆಯಲ್ಲಿ ಆಯೋಜಿಸಿದ್ದ ‘ವಚನ ಸಾಹಿತ್ಯ ಸಮಕಾಲೀನ ಸಂವೇದನೆ' ವಿಚಾರಗೋಷ್ಠಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಇಂದು ಯುವಕರಿಗೆ ಧರ್ಮದ ಹೆಸರಿನಲ್ಲಿ ಇಲ್ಲ-ಸಲ್ಲದನ್ನು ಅವರ ತಲೆಗೆ ತುಂಬಿ, ತಪ್ಪು ಹಾದಿಯಲ್ಲಿ ಕರೆದೊಯ್ಯುವ ಕೆಲಸಗಳು ನಡೆಯುತ್ತಿವೆ. ಅದಕ್ಕೆ ನಾವು ಆಸ್ಪದ ಕೊಡಬಾರದು. ವಿಷಬೀಜ ಬಿತ್ತುವವರ ನಡುವೆ ನಾವು ಬಸವಣ್ಣ ಸೇರಿದಂತೆ ಮಹಾನ್ ಚಿಂತಕರ ಆಚಾರ-ವಿಚಾರಗಳನ್ನು ರಾಜ್ಯವ್ಯಾಪಿ ಪ್ರಚಾರ ಮಾಡಬೇಕಿದೆ ಎಂದು ಅವರು ಸಲಹೆ ನೀಡಿದರು.

‘ಸರ್ವಧರ್ಮ ಸಂಸತ್ತು’ ಹೆಸರಿನಲ್ಲಿ ಕಾರ್ಯಕ್ರಮ ನಡೆಸಲು ಬಜೆಟ್‍ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದರು. ಆದರೆ ಆ ಹೆಸರಿನಿಂದ ಯಾರೊಬ್ಬರಿಗೂ ಭಾವನಾತ್ಮಕವಾಗಿ ಧಕ್ಕೆಯಾಗಬಾರದೆಂಬ ಕಾರಣಕ್ಕೆ ಹಲವು ಸಾಹಿತಿ, ಚಿಂತಕರು ಹಾಗೂ ಸ್ವಾಮೀಜಿಗಳ ಜತೆ ಹಲವು ಬಾರಿ ಸಭೆ ನಡೆಸಿ, ಚರ್ಚಿಸಿ ಅನುಭವ ಮಂಟಪ-ಬಸವಾದಿ ಶರಣರ ವೈಭವ ಎಂಬ ಹೆಸರಿನಲ್ಲಿ ಕಾರ್ಯಕ್ರಮ ಆಯೋಜನೆ ಮಾಡಿದ್ದೇವೆ ಎಂದು ಅವರು ತಿಳಿಸಿದರು.

ಆಡಳಿತ ವ್ಯವಸ್ಥೆ ಕಲಿಸಿಕೊಟ್ಟ ಬಸವಣ್ಣ: ಬುದ್ಧ, ಬಸವ, ಅಂಬೇಡ್ಕರ್ ಅವರು ಯಾವುದೇ ಜಾತಿಗೆ ಸೀಮಿತವಾಗಿರದೇ ಇಡೀ ಜಗತ್ತಿಗೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ. ಬಸವಣ್ಣ ತಮ್ಮ ವಚನಗಳ ಮೂಲಕ ನಮಗೆ ಆಡಳಿತ ವ್ಯವಸ್ಥೆಯನ್ನು ಕಲಿಸಿಕೊಟ್ಟಿದ್ದಾರೆ. ಅವರ ಹುಟ್ಟುಹಾಕಿದ ಅನುಭವ ಮಂಟಪದ ಮಾದರಿಯಲ್ಲೇ ನಮ್ಮ ಸಂಸತ್ತು ನಡೆಯುತ್ತಿದೆ ಎಂದು ಹೇಳಿದರು.

‘ಬಸವಣ್ಣವರನ್ನ ಸಾಂಸ್ಕೃತಿಕ ನಾಯಕ’ ಎಂದು ಘೋಷಿಸಲು ಈ ರಾಜ್ಯದಲ್ಲಿ ಮತ್ತೊಮ್ಮೆ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ ಆಗಿ ಬರಬೇಕಾಯಿತು. ಈ ಹಿಂದೆ ಹಲವರು ಮುಖ್ಯಮಂತ್ರಿಗಳಾಗಿ ಜವಾಬ್ದಾರಿ ನಿರ್ವಹಿಸಿದ್ದಾರೆ. ಆದರೆ ಯಾರೂ ಬಸವಣ್ಣವರನ್ನು ಸಾಂಸ್ಕೃತಿಕ ನಾಯಕ ಎಂದು ಘೋಷಣೆ ಮಾಡುವ ಪ್ರಯತ್ನ ಮಾಡಲಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯನವರಿಂದ ಮಾತ್ರ ಇದು ಸಾಧ್ಯವಾಯಿತು ಎಂದು ವರು ಮೆಚ್ಚುಗೆ ವ್ಯಕ್ತಪಡಿಸಿದರು.

ಮೊದಲಿಗೆ ನಾನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೇಡ ಎಂದು ಸಿಎಂ ಬಳಿ ಹೇಳಿದ್ದೆ. ಆದರೆ ನನಗೆ ಈಗ ಅನಿಸುತ್ತಿದೆ, ಬಸವಣ್ಣ ಅವರನ್ನು ಸಾಂಸ್ಕೃತಿಕ ನಾಯಕ ಎಂದು ಘೋಷಣೆ ಮಾಡಿದ ಸಂದರ್ಭದಲ್ಲಿ ನಾನು ಇಲಾಖೆಯ ಜವಾಬ್ದಾರಿ ಹೊತ್ತಿರುವುದು ನನ್ನ ಪುಣ್ಯ ಎಂದು ಭಾವಿಸಿದ್ದೇನೆ ಎಂದು ಅವರು ನುಡಿದರು.

ಬಸವಣ್ಣ ಅವರ ಆಚಾರ, ವಿಚಾರ ಹಾಗೂ ಚಿಂತನೆಗಳನ್ನು ಇಡೀ ಸಮಾಜಕ್ಕೆ ಪ್ರಚಾರ ಮಾಡುವ ಕೆಲಸ ಆಗಬೇಕಿದೆ. ಹೀಗಾಗಿ ರಾಜ್ಯಾದ್ಯಂತ ಕಾರ್ಯಕ್ರಮಗಳನ್ನು ಆಯೋಜಿಲು ತೀರ್ಮಾನಿಸಿ ಬಾಗಲಕೋಟೆ ಜಿಲ್ಲೆಯ ಕೂಡಲಸಂಗಮದಲ್ಲಿ ಈ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದೇವೆ ಎಂದು ಶಿವರಾಜ್ ತಂಗಡಗಿ ತಿಳಿಸಿದರು.

ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪೂರ ಮಾತನಾಡಿ, ಮಾನವನನ್ನು ಮಾನವನನ್ನಾಗಿ ಕಾಣದ ಧರ್ಮ ಯಾವುದು. ಬಸವಣ್ಣನವರು ಹಾಕಿಕೊಟ್ಟ ಹಾದಿಯಲ್ಲಿ ನಾವೆಲ್ಲರೂ ನಡೆಯಬೇಕೆಂಬ ಉದ್ದೇಶದಿಂದ ಅವರ ತತ್ವಾದರ್ಶಗಳನ್ನು ಪರಿಚಯಿಸುವ ಕಾರ್ಯ ಕಾರ್ಯಕ್ರಮದ ಮೂಲಕ ಮಾಡಲಾಗುತ್ತಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಶಾಸಕ ವಿಜಯಾನಂದ ಕಾಶಪ್ಪನವರ್,ನಿಜಗುಣಾನಂದ ಸ್ವಾಮೀಜಿ, ಜ್ಞಾನಪ್ರಕಾಶ್ ಸ್ವಾಮೀಜಿ,  ಗುರುಮಹಾಂತ ಸ್ವಾಮೀಜಿ, ಡಾ.ಶ್ರೀಶಿವಕುಮಾರ ಸ್ವಾಮೀಜಿ, ಅನ್ನದಾನಿ ಸ್ವಾಮೀಜಿ, ಕನ್ನಡ ಅಭಿವೃದ್ಧಿ ಪ್ರಧಿಕಾರದ ಅಧ್ಯಕ್ಷ ಡಾ.ಪುರುಷೋತ್ತಮ್ ಬಿಳಿಮಲೆ, ಸಾಹಿತಿಗಳಾದ ರಂಜಾನ್ ದರ್ಗಾ, ಡಾ.ಮೀನಾಕ್ಷಿ ಬಾಳಿ, ಮಾಜಿ ಸಚಿವೆ ಬಿ.ಟಿ.ಲಲಿತಾನಾಯಕ್, ಸಂಸ್ಕೃತಿ ಇಲಾಖೆ ನಿರ್ದೇಶಕಿ ಕೆ.ಎಂ.ಗಾಯತ್ರಿ, ಜಿಲ್ಲಾಧಿಕಾರಿ ಕೆ.ಎಮ್.ಜಾನಕಿ, ಸಿಇಓ ಶಶಿಧರ ಕುರೇರ ಹಾಗೂ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News