ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಆರೋಪ; 8 ಮಂದಿ ಬಾಂಗ್ಲಾ ವಲಸಿಗರು ಎನ್‍ಐಎ ವಶಕ್ಕೆ

Update: 2023-11-08 11:54 GMT

ಸಾಂದರ್ಭಿಕ ಚಿತ್ರ Photo - PTI

ಬೆಂಗಳೂರು, ನ.8: ನಗರದ ವಿವಿಧೆಡೆಗಳಲ್ಲಿ ವಾಸಿಸುತ್ತಿರುವ ಬಾಂಗ್ಲಾ ವಲಸಿಗರ ಮೇಲೆ ರಾಷ್ಟ್ರೀಯ ತನಿಖಾ ದಳ(ಎನ್‍ಐಎ)ದ ಅಧಿಕಾರಿಗಳು ಬುಧವಾರ ದಾಳಿ ನಡೆಸಿ 8 ಮಂದಿಯನ್ನು ವಶಕ್ಕೆ ಪಡೆದಿರುವುದು ವರದಿಯಾಗಿದೆ.

ನಗರದಲ್ಲಿ ಅಕ್ರಮವಾಗಿ ಬಾಂಗ್ಲಾ ವಲಸಿಗರು ನೆಲೆ ಕಂಡುಕೊಳ್ಳ ತೊಡಗಿದ್ದು, ಅವರಿಗೆ ಬೇಕಾದ ದಾಖಲೆಗಳನ್ನು ಒದಗಿಸಲು ಕೆಲವರು ಸಹಾಯ ಮಾಡುತ್ತಿದ್ದಾರೆ ಎಂಬ ಆರೋಪದ ಬೆನ್ನಲ್ಲೇ ಎನ್‍ಐಎ ಅಧಿಕಾರಿಗಳು ದಾಳಿ ಕೈಗೊಂಡಿದ್ದಾರೆ.

ಅಕ್ರಮ ಬಾಂಗ್ಲಾ ವಲಸಿಗರು ಮಾನವ ಕಳ್ಳಸಾಗಾಣಿಕೆ ಮತ್ತು ಭಯೋತ್ಪಾದಕ ಚಟುವಟಿಕೆಗಳಲ್ಲಿ ಭಾಗಿಯಾಗಿರುವ ಸಂಬಂಧ ಎನ್‍ಐಎ ವಿಶೇಷ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಈ ಪ್ರಕರಣದ ಆಧಾರದ ಮೇಲೆ ಎನ್‍ಐಎ 15 ತಂಡಗಳಿಂದ ಏಕಕಾಲಕ್ಕೆ ದಾಳಿ ನಡೆಸಲಾಗಿದ್ದು, ನಗರದ ಸೋಲದೇವನಹಳ್ಳಿ, ಕೆ.ಆರ್.ಪುರಂ, ಬೆಳ್ಳಂದೂರು ಸೇರಿದಂತೆ 15ಕ್ಕೂ ಅಧಿಕ ಕಡೆ ದಾಳಿ ನಡೆಸಿರುವ ಎನ್‍ಐಎ ಅಧಿಕಾರಿಗಳು ಎಂಟು ಮಂದಿ ಬಾಂಗ್ಲಾ ವಲಸಿಗರನ್ನು ವಶಕ್ಕೆ ಪಡೆದು ವಿಚಾರಣೆ ಕೈಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಬಾಂಗ್ಲಾ ದೇಶದಿಂದ ನೂರಾರು ಮಂದಿಯನ್ನು ಭಾರತಕ್ಕೆ ಅಕ್ರಮವಾಗಿ ಕರೆ ತರುವುದು, ಇಲ್ಲಿ ಅವರನ್ನು ಉಗ್ರಗಾಮಿ ಚಟುವಟಿಕೆಗಳಿಗೆ ಬಳಸುವುದು ಇವರ ಮೇಲಿನ ಪ್ರಧಾನ ಆರೋಪವಾಗಿದೆ. ಉದ್ಯೋಗದ ಆಮಿಷವೊಡ್ಡಿ ಅವರನ್ನು ಇಲ್ಲಿಗೆ ಕರೆತಂದು ಬಳಿಕ ಅವರಿಗೆ ಉಗ್ರ ತರಬೇತಿ ನೀಡಿ ದುಷ್ಕೃತ್ಯಗಳಿಗೆ ಬಳಸುವ ವಿದ್ಯಮಾನಗಳು ನಡೆಯುತ್ತಿರುವ ಬಗ್ಗೆ ದೂರುಗಳು ದಾಖಲಾಗಿದ್ದವು ಎಂದು ತಿಳಿದುಬಂದಿದೆ.

ನಾನಾ ಭಾಗಗಳಲ್ಲಿ ದೊಡ್ಡ ಸಂಖ್ಯೆಯಲ್ಲಿ ಅಕ್ರಮ ಬಾಂಗ್ಲಾ ವಲಸಿಗರು ಇರುವ ಬಗ್ಗೆ ಕಾಲಕಾಲಕ್ಕೆ ವರದಿಗಳಿದ್ದು, ಆದರೆ, ರಾಜಕಾರಣಿಗಳು ಕೂಡಾ ಇವರನ್ನು ಮತ ಬ್ಯಾಂಕ್ ಆಗಿ ಬಳಸುತ್ತಿರುವುದರಿಂದ ಅದರ ಬಗ್ಗೆ ಯಾರೂ ಹೆಚ್ಚಿನ ಗಮನ ನೀಡುತ್ತಿಲ್ಲ. ಅವರಲ್ಲಿ ಕೆಲವರು ಅಪಾಯಕಾರಿ ದುಷ್ಕೃತ್ಯಗಳಲ್ಲಿ ಭಾಗಿಯಾಗುತ್ತಿರುವ ಮಾಹಿತಿ ಇದೆ. ಕೆಲವರು ಕಳ್ಳತನ, ದರೋಡೆ ಕೃತ್ಯಗಳಲ್ಲಿ ಶಾಮೀಲಾದರೆ ಇನ್ನು ಕೆಲವರು ಕೊಲೆ, ಉಗ್ರ ಕೃತ್ಯಗಳಲ್ಲೂ ಭಾಗಿಯಾಗುತ್ತಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News