ಬೆಂಗಳೂರು | ಒಂದೇ ಕುಟುಂಬದ ಮೂವರ ಮೃತದೇಹ ಸುಟ್ಟ ಸ್ಥಿತಿಯಲ್ಲಿ ಪತ್ತೆ : ಪ್ರಕರಣ ದಾಖಲು

Update: 2024-03-20 12:07 GMT

ಬೆಂಗಳೂರು: ಇಲ್ಲಿನ ಜೆ.ಪಿ.ನಗರದ ಮೂರನೇ ಹಂತದಲ್ಲಿರುವ ಮನೆಯೊಂದಲ್ಲಿ ಒಂದೇ ಕುಟುಂಬದ ಮೂವರ ಮೃತದೇಹ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಈ ಸಂಬಂಧ ಜೆ.ಪಿ.ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುವುದು ಬುಧವಾರ ವರದಿಯಾಗಿದೆ.

ಮೃತರನ್ನು ತಾಯಿ ಸುಕನ್ಯಾ(48), ಮಕ್ಕಳಾದ ನಿಖಿತ್(28)ಹಾಗೂ ನಿಶ್ಚಿತ್(28) ಎಂದು ಗುರುತಿಸಲಾಗಿದೆ. ಆರ್ಥಿಕ ಸಂಕಷ್ಟ ತಾಳಲಾರದೇ ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆಗೆ ಶರಣಾಗಿರಬಹುದು ಎಂಬ ಶಂಕೆ ವ್ಯಕ್ತವಾಗಿದ್ದು, ಈ ಬಗ್ಗೆ ತನಿಖೆ ಕೈಗೊಳ್ಳಲಾಗಿದೆ ಎಂದು ದಕ್ಷಿಣ ವಿಭಾಗದ ಡಿಸಿಪಿ ಶಿವಪ್ರಕಾಶ್ ದೇವರಾಜು ತಿಳಿಸಿದ್ದಾರೆ.

ಉಡುಪಿಯ ಅಂಬಲಪಾಡಿ ಮೂಲದ ಈ ಕುಟುಂಬ ಬೆಂಗಳೂರಿನ ಜೆ.ಪಿ.ನಗರದ ಮೂರನೇ ಹಂತದಲ್ಲಿ ವಾಸವಿದ್ದರು. ಮನೆಯಲ್ಲಿ ಸುಕನ್ಯಾ, ಪತಿ ಜಯಾನಂದ, ಅವಳಿ ಮಕ್ಕಳಾದ ನಿಶ್ಚಿತ್ ಹಾಗೂ ನಿಖಿತ್ ವಾಸವಿದ್ದರು ಎಂದು ಹೇಳಲಾಗಿದೆ.

ಸ್ವಂತ ಉದ್ಯಮ ನಡೆಸುತ್ತಿದ್ದ ಜಯಾನಂದ್ ಅವರಿಗೆ ಕೋವಿಡ್ ಲಾಕ್‍ಡೌನ್ ಸಂದರ್ಭದಲ್ಲಿ ನಷ್ಟವಾಗಿತ್ತು ಎನ್ನಲಾಗಿದೆ. ಆ ನಂತರ ಕುಟುಂಬ ನಿರ್ವಹಣೆಗಾಗಿ ಸಾಕಷ್ಟು ಸಾಲ ಮಾಡಿಕೊಂಡಿದ್ದರಿಂದ, ಸುಕನ್ಯಾ ಮಕ್ಕಳಿಗೆ ಟ್ಯೂಷನ್ ಹೇಳಿಕೊಡುತ್ತಿದ್ದರು. ಮಕ್ಕಳ ಪೈಕಿ ಓರ್ವ ಮಗ ಮನೆಯಿಂದಲೇ ಕೆಲಸ ಮಾಡುತ್ತಿದ್ದು, ನಾಲ್ಕೈದು ತಿಂಗಳ ಹಿಂದೆ ಕೆಲಸ ಬಿಟ್ಟಿದ್ದರು. ತೀವ್ರ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದುದರಿಂದ ಜಯಾನಂದ್ ಸಹ ಅನಾರೋಗ್ಯದಿಂದ ಹಾಸಿಗೆ ಹಿಡಿದಿದ್ದರು ಎನ್ನಲಾಗಿದೆ.

ಬುಧವಾರ ಬೆಳಗ್ಗೆ ಪತಿಗೆ ಹಾಲು, ದಿನಪತ್ರಿಕೆ ಕೊಟ್ಟು ಮನೆಯ ಕೊಠಡಿ ಬಾಗಿಲು ಲಾಕ್ ಮಾಡಿದ್ದ ಸುಕನ್ಯಾ ಹಾಲ್‍ನಲ್ಲಿ ಮಕ್ಕಳ ಜೊತೆ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಶಂಕಿಸಲಾಗಿದೆ. ಮೂರು ಶವಗಳ ಮೈ-ಕೈಗೆ ಎಲೆಕ್ಟ್ರಿಕ್ ಕೇಬಲ್ ಸುತ್ತಿರುವುದು ಪತ್ತೆಯಾಗಿದ್ದು, ಸಾಕಷ್ಟು ಅನುಮಾನ ಕಂಡುಬಂದಿದೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ರವಾನಿಸಲಾಗಿದೆ. ಘಟನೆಯ ಸಂದರ್ಭದಲ್ಲಿ ಜಯಾನಂದ ಅವರು ಮನೆಯಲ್ಲಿಯೇ ಇದ್ದುದಾಗಿ ಹೇಳಿದ್ದಾರೆ. ಆದ್ದರಿಂದ ಸಾವಿಗೆ ನಿಖರ ಕಾರಣದ ಕುರಿತು ತನಿಖೆ ಮಾಡಲಾಗುತ್ತಿದೆ. ಮರಣೋತ್ತರ ಪರೀಕ್ಷೆಯ ನಂತರವಷ್ಟೇ ಇದು ಆತ್ಮಹತ್ಯೆಯೇ ಎಂಬುದನ್ನು ಖಚಿತಪಡಿಸಲು ಸಾಧ್ಯವಾಗುತ್ತದೆ ಎಂದು ದಕ್ಷಿಣ ವಿಭಾಗದ ಡಿಸಿಪಿ ಶಿವಪ್ರಕಾಶ್ ದೇವರಾಜು ಮಾಹಿತಿ ನೀಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News