ಬೆಂಗಳೂರು | ಕೈಗಾರಿಕೆಗಳಿಗೆ ಪ್ರತ್ಯೇಕ ಪೈಪ್‍ಲೈನ್ ಮೂಲಕ ಸಂಸ್ಕರಿಸಿದ ನೀರು ಪೂರೈಕೆಗೆ ಚಿಂತನೆ

Update: 2024-04-06 15:04 GMT

ಬೆಂಗಳೂರು : ಸಂಸ್ಕರಿಸಿದ ನೀರಿನ ಬಳಕೆಯನ್ನು ಮತ್ತಷ್ಟು ಉತ್ತೇಜಿಸುವ ನಿಟ್ಟಿನಲ್ಲಿ ದೇಶದಲ್ಲೇ ಮೊದಲ ಬಾರಿಗೆ ಕೈಗಾರಿಕೆಗಳಿಗೆ ಪ್ರತ್ಯೇಕ ಪೈಪ್‍ಲೈನ್ ಮೂಲಕ ಸಂಸ್ಕರಿಸಿದ ನೀರು ಸರಬರಾಜು ಮಾಡುವ ನಿಟ್ಟಿನಲ್ಲಿ ಜಲಮಂಡಳಿ ಚಿಂತನೆ ನಡೆಸುತ್ತಿದೆ ಎಂದು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಅಧ್ಯಕ್ಷ ಡಾ.ವಿ.ರಾಮ್ ಪ್ರಸಾದ್ ಮನೋಹರ್ ತಿಳಿಸಿದರು.

ಶನಿವಾರ ನಗರದಲ್ಲಿರುವ ಬೆಂಗಳೂರು ಜಲಮಂಡಳಿಯ ಕೇಂದ್ರ ಕಚೇರಿಯಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಮಾತನಾಡಿದ ಅವರು, ಬೆಂಗಳೂರು ನಗರದಲ್ಲಿ 1,480 ಎಂ.ಎಲ್.ಡಿ ತ್ಯಾಜ್ಯ ನೀರು ಉತ್ಪಾದನೆ ಆಗುತ್ತದೆ. ಪ್ರಸ್ತುತ 1,212 ಎಂ.ಎಲ್.ಡಿ ನೀರನ್ನು ಶುದ್ದೀಕರಿಸಲಾಗುತ್ತಿದೆ. ಇದರ ಬಳಕೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಜಲಮಂಡಳಿ ಈಗಾಗಲೇ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ ಎಂದರು.

ಸಂಸ್ಕರಿಸಿದ ನೀರಿನ ಬಳಕೆಯನ್ನು ಮತ್ತಷ್ಟು ಹೆಚ್ಚಿಸುವ ಮೂಲಕ ಕಾವೇರಿ ನೀರಿನ ಮೇಲಿನ ಅವಲಂಬನೆಯನ್ನು ಕಡಿಮೆಗೊಳಿಸುವುದು ನಮ್ಮ ಗುರಿಯಾಗಿದ್ದು, ಈ ಹಿನ್ನಲೆಯಲ್ಲಿ ಪೀಣ್ಯ ಕೈಗಾರಿಕಾ ಪ್ರದೇಶದಲ್ಲಿ ಪ್ರತ್ಯೇಕ ಪೈಪ್ ಲೈನ್ ಮೂಲಕ ಕೈಗಾರಿಕೆಗಳಿಗೆ ಸಂಸ್ಕರಿಸಿದ ನೀರನ್ನು ಪೂರೈಸುವ ನಿಟ್ಟಿನಲ್ಲಿ ಚಿಂತನೆ ನಡೆಸಲಾಗುತ್ತಿದೆ. ಇದು ದೇಶದಲ್ಲೇ ಮೊದಲು ಎಂದು ಅವರು ಹೇಳಿದರು.

ಅಂತರ್ಜಲ ಕುಸಿತದಿಂದ ಎದುರಾಗಿರುವ ನೀರಿನ ಕೊರತೆಯ ಸಮಯದಲ್ಲೂ ಪೀಣ್ಯ ಸೇರಿದಂತೆ ನಗರದ ಪ್ರಮುಖ ಕೈಗಾರಿಕಾ ಪ್ರದೇಶಗಳಲ್ಲಿ ಸಮರ್ಪಕವಾಗಿ ನೀರು ಪೂರೈಸುತ್ತಿರುವ ಜಲಮಂಡಳಿಯ ಶ್ರಮಕ್ಕೆ ಕೈಗಾರಿಕಾ ಸಂಸ್ಥೆಗಳ ಪದಾಧಿಕಾರಿಗಳು ಪ್ರಶಂಸೆ ವ್ಯಕ್ತಪಡಿಸಿದರು.ಇರುವಂತಹ ಕೈಗಾರಿಕೆಗಳಿಗೆ ಸಮರ್ಪಕ ರೀತಿಯಲ್ಲಿ ನೀರಿನ ಲಭ್ಯತೆಯನ್ನು ಜಲಮಂಡಳಿ ಪೂರೈಸುತ್ತಿದೆ ಎಂದು ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘದ ಅಧ್ಯಕ್ಷ ಶಶಿಧರ ಶೆಟ್ಟಿ ತಿಳಿಸಿದರು.

ಪೀಣ್ಯ ಕೈಗಾರಿಕಾ ಸಂಘದ ಅಧ್ಯಕ್ಷ ಆರಿಫ್ ಎಚ್.ಎಂ ಮಾತನಾಡಿ, ನಮ್ಮಲ್ಲಿ ಸುಮಾರು 15 ಸಾವಿರಕ್ಕೂ ಹೆಚ್ಚು ಕೈಗಾರಿಕೆಗಳಿವೆ. ಇದರಲ್ಲಿ ಹೆಚ್ಚು ಸೂಕ್ಷ್ಮ ಮತ್ತು ಸಣ್ಣ ಕೈಗಾರಿಕೆಗಳಿವೆ. ಮಾರ್ಚ್ ತಿಂಗಳ ಮೊದಲ ವಾರದಲ್ಲೇ ಜಲಮಂಡಳಿ ವತಿಯಿಂದ ಅಧಿಕಾರಿಗಳು ಪೀಣ್ಯ ಕೈಗಾರಿಕಾ ಸಂಘದ ಜೊತೆ ಸಭೆ ನಡೆಸಿ ಅಗತ್ಯ ಪೂರೈಕೆಗೆ ವ್ಯವಸ್ಥೆಯನ್ನು ಮಾಡಿದ್ದಾರೆ ಎಂದರು.

ಬೆಂಗಳೂರು ನಗರದಲ್ಲಿರುವಂತಹ ಕೈಗಾರಿಕೆಗಳು ಹಾಗೂ ಕೈಗಾರಿಕಾ ಪ್ರದೇಶಗಳಿಗೆ ಅಗತ್ಯ ನೀರು ಪೂರೈಸಲು ಜಲಮಂಡಳಿ ಸಿದ್ದವಿದೆ. ಅದರಲ್ಲೂ, ಜಲಮಂಡಳಿಯ ಬಳಿ ಉತ್ತಮ ಗುಣಮಟ್ಟದ ಸಂಸ್ಕರಿಸಿದ ನೀರು ಲಭ್ಯವಿದೆ. ಭಾರತೀಯ ವಿಜ್ಞಾನ ಸಂಸ್ಥೆಯಿಂದ ಪ್ರಮಾಣೀಕೃತವಾದ ಸಂಸ್ಕರಿಸಿದ ನೀರನ್ನು ಕುಡಿಯಲು ಹೊರತುಪಡಿಸಿ ಸ್ವಚ್ಚತೆ ಸೇರಿದಂತೆ ಬಹಳಷ್ಟು ಕಾರ್ಯಗಳಿಗೆ ಉಪಯೋಗಿಸಬಹುದಾಗಿದೆ ಎಂದು ರಾಮ್ ಪ್ರಸಾದ್ ಮನೋಹರ್ ಹೇಳಿದರು.

ಗ್ರೀನ್ ಸ್ಟಾರ್’ ಸವಾಲು ಸ್ವೀಕರಿಸಿದ ಉದ್ಯಮಿಗಳು: ನೀರಿನ ಉಳಿತಾಯ ಮಾಡುವಂತಹ ತಂತ್ರಜ್ಞಾನಗಳನ್ನು ಅಳವಡಿಸಿಕೊಳ್ಳುವುದು, ಸಂಸ್ಕರಿಸಿದ ನೀರಿನ ಬಳಕೆಯನ್ನು ಹೆಚ್ಚಿಸಿಕೊಳ್ಳುವುದು, ಕೊಳವೆ ಬಾವಿಗಳ ಬಳಕೆಯಲ್ಲಿ ತಂತ್ರಜ್ಞಾನದ ಅಳವಡಿಕೆ ಮಾಡಿಕೊಳ್ಳುವುದು, ಮಳೆ ನೀರು ಇಂಗು ಗುಂಡಿಗಳನ್ನ ಅಳವಡಿಸಿಕೊಳ್ಳುವುದು ಹಾಗೂ ಈ ಎಲ್ಲ ಹೊಸ ಅನುಷ್ಠಾನಗಳ ಬಗ್ಗೆ ಬಳಕೆದಾರರಿಗೆ ಮಾಹಿತಿಯನ್ನು ಕೊಡುವ ಮೂಲಕ ನೀರಿನ ಉಳಿತಾಯದ ಮಹತ್ವವನ್ನು ಸಾರುವುದು. ಈ ಪಂಚ ಸೂತ್ರಗಳನ್ನು ಅಳವಡಿಸಿಕೊಳ್ಳುವ ಮೂಲಕ ಜನಾಂದೋಲನದಲ್ಲಿ ಭಾಗಿಯಾಗುವುದಾಗಿ ಕೈಗಾರಿಕೋದ್ಯಮಿಗಳು ತಿಳಿಸಿದರು.

ಸಭೆಯಲ್ಲಿ ಕೈಗಾರಿಕೋದ್ಯಮಿಗಳು, ಕೈಗಾರಿಕಾ ಸಂಸ್ಥೆಗಳಾದ ಪೀಣ್ಯ ಕೈಗಾರಿಕಾ ಸಂಸ್ಥೆ, ಎಫ್‍ಕೆಸಿಸಿಐ, ಕಾಸಿಯಾ ಪದಾಧಿಕಾರಿಗಳು, ಎಂಎಸ್‍ಎಂಇ ನಿರ್ದೇಶಕ ಡಾ.ವಿಜಯಮಹಾಂತೇಶ್, ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ನಿರ್ದೇಶಕ ಕುಮಾರ್ ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News