ಬೆಂಗಳೂರು| ಮಲಗುವ ಜಾಗದ ವಿಚಾರಕ್ಕೆ ವ್ಯಕ್ತಿಯೊಬ್ಬನ ಹತ್ಯೆ: ಇಬ್ಬರು ಬಂಧನ

Update: 2023-12-14 14:44 GMT

ಬೆಂಗಳೂರು: ಮಲಗುವ ಜಾಗದ ವಿಚಾರಕ್ಕೆ ವ್ಯಕ್ತಿಯೊಬ್ಬನನ್ನು ಹತ್ಯೆ ಮಾಡಿರುವ ಇಬ್ಬರು ಆರೋಪಿಗಳನ್ನು ಇಲ್ಲಿನ ಆರ್.ಟಿ ನಗರ ಠಾಣಾ ಪೊಲೀಸರು ಬಂಧಿಸಿರುವುದಾಗಿ ವರದಿಯಾಗಿದೆ.

ಸೈಯದ್ ಕಮ್ರಾನ್ ಹಾಗೂ ವಿಶಾಲ್ ಅಹಿವದಾಸ್ ಬಂಧಿತ ಆರೋಪಿಗಳು ಎಂದು ಗುರುತಿಸಲಾಗಿದೆ.

ಡಿ.11ರಂದು ರಾತ್ರಿ ಆರ್.ಟಿ.ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಕೃಷ್ಣಪ್ಪ ಕಾಂಪ್ಲೆಕ್ಸ್ ಬಿಲ್ಡಿಂಗ್ ತಳಮಹಡಿಯಲ್ಲಿ ಸುಮಾರು 55-60 ವರ್ಷ ವಯಸ್ಸಿನ ಅಪರಿಚಿತ ವ್ಯಕ್ತಿಯ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ ಮಾಡಲಾಗಿತ್ತು. ಘಟನಾ ಸ್ಥಳದ ಸುತ್ತಮುತ್ತಲಿನ ಸಿಸಿಟಿವಿ ದೃಶ್ಯಗಳನ್ನು ಆಧರಿಸಿ ಪ್ರಕರಣದ ತನಿಖೆ ಕೈಗೊಂಡ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಆರೋಪಿಗಳು ಮತ್ತು ಕೊಲೆಯಾದ ವ್ಯಕ್ತಿ ಪ್ರತಿ ದಿನ ಆರ್.ಟಿ.ನಗರ ಕೃಷ್ಣಪ್ಪ ಕಾಂಪ್ಲೆಕ್ಸ್ ಬಿಲ್ಡಿಂಗ್‍ನ ತಳಮಹಡಿಯಲ್ಲಿ ಮಲಗಿಕೊಳ್ಳುತ್ತಿದ್ದರು. ಡಿ.11ರಂದು ರಾತ್ರಿ ತಾವು ಮಲಗಿಕೊಳ್ಳುತ್ತಿದ್ದ ಜಾಗದಲ್ಲಿ ಕೊಲೆಯಾದ ವ್ಯಕ್ತಿಯು ಮಲಗಿದ್ದಕ್ಕೆ ಗಲಾಟೆ ಮಾಡಿಕೊಂಡು ಆತನ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ ಮಾಡಿದ್ದರು ಎಂಬುದು ತನಿಖೆಯಿಂದ ತಿಳಿದು ಬಂದಿದೆ.

ಆರೋಪಿಗಳ ಪೈಕಿ ಒಬ್ಬ ಈ ಹಿಂದೆ ಆರ್.ಟಿ.ನಗರ ಪೊಲೀಸ್ ಠಾಣೆಯಲ್ಲಿ ದರೋಡೆಗೆ ಸಂಚು, ಕಳವು ಪ್ರಕರಣದಲ್ಲಿ ಭಾಗಿಯಾಗಿದ್ದಾನೆ. ಮತ್ತೊಬ್ಬ ಆರೋಪಿಯ ವಿರುದ್ಧ ಹೆಬ್ಬಾಳ ಪೊಲೀಸ್ ಠಾಣೆಯಲ್ಲಿ ಕೌಟುಂಬಿಕ ಕಿರುಕುಳ ಪ್ರಕರಣ ದಾಖಲಾಗಿರುವುದಾಗಿ ತಿಳಿದು ಬಂದಿದೆ. ಕೊಲೆಯಾದ ಅಪರಿಚಿತ ವ್ಯಕ್ತಿಯ ಮಾಹಿತಿಯ ಪತ್ತೆಕಾರ್ಯ ಮುಂದುವರೆದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News