ಮುಡಾದಲ್ಲಿ ನಡೆಯುತ್ತಿದ್ದ ಭ್ರಷ್ಟಾಚಾರಗಳ ಬಗ್ಗೆ ತಾಂತ್ರಿಕ ಸಮಿತಿ ವರದಿ ಸಲ್ಲಿಸಿತ್ತು : ಬಿ.ವೈ.ವಿಜಯೇಂದ್ರ

Update: 2024-09-03 12:57 GMT

ಬೆಂಗಳೂರು: ಶೇಕಡ 50:50ರ ಅನುಪಾತದಲ್ಲಿ ಪೂರ್ವಾನ್ವಯವಾಗಿ ನಿವೇಶನ ಪಡೆಯುವುದು ನಿಯಮಬಾಹಿರ ಎಂದು ಬಿಜೆಪಿ ಸರಕಾರದ ಅವಧಿಯಲ್ಲಿ ನೇಮಿಸಿದ್ದ ತಾಂತ್ರಿಕ ಸಮಿತಿ 2023ರ ನ.3ರಂದೇ ಕಾಂಗ್ರೆಸ್ ಸರಕಾರಕ್ಕೆ ವಿಸ್ತೃತ ವರದಿ ಸಲ್ಲಿಸಿತ್ತು. ಈ ವರದಿಯಲ್ಲಿ ಮುಡಾದಲ್ಲಿ ನಡೆಯುತ್ತಿದ್ದ ಬ್ರಹ್ಮಾಂ ಡ ಭ್ರಷ್ಟಾಚಾರಗಳ ಬಗ್ಗೆ ಪೂರ್ಣ ಮಾಹಿತಿಯನ್ನು ನೀಡಲಾಗಿತ್ತು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ.

ಈ ಸಂಬಂಧ ಎಕ್ಸ್ ಜಾಲತಾಣದಲ್ಲಿ ಪೋಸ್ಟ್ ಹಾಕಿರುವ ಅವರು, ಕಾಂಗ್ರೆಸ್ ಸರಕಾರದ ಭ್ರಷ್ಟ ಹಗರಣಗಳ ರಕ್ಷಣೆಯ ಪ್ರತೀಕವೆಂಬಂತೆ ಧೂಳು ಹಿಡಿದು ಕುಳಿತಿದ್ದ ತಾಂತ್ರಿಕ ಸಮಿತಿಯ ತನಿಖಾ ವರದಿಯ ಪ್ರತಿಯನ್ನು ನಾವು ಬಿಡುಗಡೆ ಮಾಡಿದ ನಂತರ ಗತ್ಯಂತರವಿಲ್ಲದೆ ಕೈಗೆತ್ತಿಕೊಂಡು ಇದೀಗ ಮುಡಾ ಬ್ರಹ್ಮಾಂಡ ಭ್ರಷ್ಟಾಚಾರದ ರೂವಾರಿಗಳಲ್ಲೊಬ್ಬರಾದ ಹಿಂದಿನ ಆಯುಕ್ತ ಜಿ.ಟಿ.ದಿನೇಶ್ ಕುಮಾರ್‌ ರನ್ನು ಅಮಾನತ್ತು ಗೊಳಿಸಲಾಗಿದೆ ಎಂದು ಹೇಳಿದ್ದಾರೆ.

“ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದಂತೆ" ಕನಿಷ್ಟ ಈಗಲಾದರೂ ಲೂಟಿಕೋರ ಅಧಿಕಾರಿಯೊಬ್ಬರನ್ನು ಅಮಾನತುಗೊಳಿಸಿದೆ. ಸರಕಾರ ಈ ಕೂಡಲೇ 50:50 ಅನುಪಾತದಲ್ಲಿ ಮುಡಾದಲ್ಲಿ ವಿತರಣೆಯಾಗಿರುವ ಸಾವಿರಾರು ನಿವೇಶನಗಳ ಕ್ರಯವನ್ನು ರದ್ದುಗೊಳಿಸಿ ಅಧಿಸೂಚನೆ ಹೊರಡಿಸಲಿ ಎಂದು ವಿಜಯೇಂದ್ರ ಆಗ್ರಹಿಸಿದ್ದಾರೆ.

ಅಮಾನತ್ತಿಗೆ ನೀಡಿರುವ ಕಾರಣಗಳಲ್ಲಿ ಶೇಕಡ 50:50ರ ಅನುಪಾತದಲ್ಲಿ ನಿಯಮ ಬಾಹಿರವಾಗಿ ನಿವೇಶನಗಳನ್ನು ವಿತರಿಸಿರುವ ಅಂಶವನ್ನು ಪ್ರಮುಖವಾಗಿ ಉಲ್ಲೇಖಿಸಲಾಗಿದೆ, ಇದು ಏನು ಹೇಳುತ್ತದೆ ಎಂದರೆ ಶೇಕಡ 50:50ರ ಅನುಪಾತದಲ್ಲಿ ಪೂರ್ವನ್ವಯವಾಗಿ ಸಿದ್ದರಾಮಯ್ಯನವರ ಪತ್ನಿಗೆ ಮಂಜೂರಾಗಿರುವ 14 ನಿವೇಶನಗಳು ಸಂಪೂರ್ಣ ಅಕ್ರಮ ಹಾಗೂ ನಿಯಮಬಾಹಿರ ಎಂಬುದು ಸ್ಪಷ್ಟವಾಗಿದೆ ಎಂದು ಅವರು ತಿಳಿಸಿದ್ದಾರೆ.

ವಿಚಿತ್ರವೆಂದರೆ ಮುಖ್ಯಮಂತ್ರಿಯ ಕುಟುಂಬಕ್ಕೆ 14 ನಿವೇಶನಗಳನ್ನು ಬಳುವಳಿ ನೀಡಿದ ಹಿಂದಿನ ಆಯುಕ್ತರೊಬ್ಬರ ವಿರುದ್ಧ ಯಾವುದೇ ಕ್ರಮ ಜರುಗಿಸದೇ ಋಣ ಸಂದಾಯಮಾಡಲಾಗಿದೆ. ಈ ವಿಷಯಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ನ್ಯಾಯಾಲಯದ ಆದೇಶವನ್ನು ಕಾಯುವ ಅಗತ್ಯವಾದರೂ ಏನಿದೆ? ಎಂದು ಅವರು ಪ್ರಶ್ನಿಸಿದ್ದಾರೆ.

ಸರಕಾರವೇ ನಿಮ್ಮ ಧರ್ಮಪತ್ನಿ ಅವರು ಪಡೆದಿರುವ ನಿವೇಶನಗಳು ಅಕ್ರಮ ಹಾಗೂ ನಿಯಮ ಬಾಹಿರ ಎಂದು ಹೇಳಿರುವಾಗ ಈಗಲಾದರೂ ತಮ್ಮ ಭಂಡತನವನ್ನು ಪಕ್ಕಕ್ಕೆ ಸರಿಸಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ರಾಜ್ಯದ ಮುಖ್ಯಮಂತ್ರಿ ಸ್ಥಾನದ ಘನತೆಗೆ ಬಂದಿರುವ ಚ್ಯುತಿಯನ್ನು ಹೋಗಲಾಡಿಸಿ ಗೌರವ ಉಳಿಸಿಕೊಳ್ಳಿ ಎಂದು ವಿಜಯೇಂದ್ರ ಆಗ್ರಹಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News