ಅಂಬೇಡ್ಕರ್ ಅವರ ಆಶಯಗಳನ್ನಿಟ್ಟುಕೊಂಡು ರಾಜಕಾರಣಕ್ಕೆ ಬಂದಿದ್ದೇನೆ : ಛಲವಾದಿ ನಾರಾಯಣಸ್ವಾಮಿ

Update: 2024-07-24 12:58 GMT

ಬೆಂಗಳೂರು : ನಾನು ಮೂಲತಃ ಅಂಬೇಡ್ಕರ್ ವಾದಿ. ಅವರ ಆಶಯಗಳನ್ನಿಟ್ಟುಕೊಂಡು ರಾಜಕಾರಣಕ್ಕೆ ಬಂದಿದ್ದೇನೆ. ಅವರು, ಹಾಕಿಕೊಟ್ಟ ಮಾರ್ಗದರ್ಶನದಲ್ಲಿ ಮುನ್ನಡೆಯುವ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇನೆ ಎಂದು ವಿಧಾನಪರಿಷತ್‌ನ ಪ್ರತಿಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ತಿಳಿಸಿದ್ದಾರೆ.

ಬುಧವಾರ ಪರಿಷತ್‌ನಲ್ಲಿ ನೂತನ ವಿಪಕ್ಷ ನಾಯಕನ ಸ್ಥಾನವನ್ನು ಅಲಂಕರಿಸಿದ ಬಳಿಕ ಮಾತನಾಡಿದ ಅವರು, ನನಗೆ ಬಂಗಾರಪ್ಪನವರು ರಾಜಕೀಯ ಗುರುಗಳು. ನಾನು ಅಂದೆಯೇ ರಾಜಕೀಯ ಮುನ್ನಲೆಗೆ ಬರಬೇಕಿತ್ತು. ಕೆಲವು ಕಾರಣಗಳಿಂದ ಸಾಧ್ಯವಾಗಲಿಲ್ಲ. ಯೋಗ ಇರಲಿಲ್ಲವೋ ಅಥವಾ ಯೋಗ್ಯತೆ ಇರಲಿಲ್ಲವೋ ಗೊತ್ತಿಲ್ಲ. ನನಗೆ ಪಕ್ಷ ಜವಾಬ್ದಾರಿ ನೀಡಿದೆ. ಅದನ್ನು ಜವಾಬ್ದಾರಿಯುತವಾಗಿ ನಡೆಸುತ್ತೇನೆ ಎಂದರು.

ಜನರ ಆಶಯಕ್ಕೆ ಅನುಗುಣವಾಗಿ ಸದನದ ಗೌರವಕ್ಕೆ ಚ್ಯುತಿ ಬಾರದಂತೆ ಪಕ್ಷದ ಹಿತವನ್ನು ಗಮನದಲ್ಲಿಟ್ಟುಕೊಂಡು ನನಗೆ ನೀಡಿರುವ ಮಹತ್ವದ ಜವಾಬ್ದಾರಿಯನ್ನು ಪ್ರಾಮಾಣಿಕವಾಗಿ ನಿಭಾಯಿಸುತ್ತೇನೆ ಎಂದು ಛಲವಾದಿ ನಾರಾಯಣಸ್ವಾಮಿ ಹೇಳಿದರು.

ವಿಪಕ್ಷ ನಾಯಕನ ಸ್ಥಾನಕ್ಕೆ ನನ್ನ ಜೊತೆ ಸಿ.ಟಿ.ರವಿ, ಎನ್.ರವಿಕುಮಾರ್ ಆಕಾಂಕ್ಷಿಗಳಾಗಿದ್ದರು. ಅಂತಿಮವಾಗಿ ಪಕ್ಷವು ನನಗೆ ಜವಾಬ್ದಾರಿ ನೀಡಿದೆ. ಇದಕ್ಕಾಗಿ ಪ್ರಧಾನಿ ಮೋದಿ, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಕೇಂದ್ರ ಸಚಿವ ಅಮಿತ್ ಶಾ, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸೇರಿದಂತೆ ಎಲ್ಲ ಮುಖಂಡರಿಗೂ ಅಭಿನಂದನೆ ಸಲ್ಲಿಸುತ್ತೇನೆ ಎಂದು ತಿಳಿಸಿದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News