ಯಾವುದೇ ರೀತಿಯ ಪಿತೂರಿ-ಷಡ್ಯಂತ್ರಕ್ಕೆ ಭಯ ಪಡುವವನಲ್ಲ ನಾನು : ಮುಖ್ಯಮಂತ್ರಿ ಸಿದ್ದರಾಮಯ್ಯ

Update: 2024-08-30 15:20 GMT

ಬೆಂಗಳೂರು : ‘ನಾನು ಯಾವುದೇ ರೀತಿಯ ಪಿತೂರಿ-ಷಡ್ಯಂತ್ರಕ್ಕೆ ಭಯ ಪಡುವವನಲ್ಲ. ಸಂಗೊಳ್ಳಿ ರಾಯಣ್ಣನನ್ನು ಬ್ರಿಟಿಷರಿಗೆ ಮೋಸದಿಂದ ಹಿಡಿದುಕೊಟ್ಟವರು ನಮ್ಮವರೇ. ಇಂತಹ ದೇಶದ್ರೋಹಿಗಳು ನಮ್ಮೊಳಗೆ ಈಗಲೂ ಇದ್ದಾರೆ. ತಂತಹ ದೇಶದ್ರೋಹಿಗಳು ಎಲ್ಲ ಕಾಲದಲ್ಲೂ ಇರುತ್ತಾರೆ. ಇಂತಹವರನ್ನು ನಾವು ಒಗ್ಗಟ್ಟಿನಿಂದ ಎದುರಿಸಿ, ಸೋಲಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಗುಡುಗಿದ್ದಾರೆ.

ಶುಕ್ರವಾರ ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ದೇವರಗುಡ್ಡದಲ್ಲಿ ಸಂಗೊಳ್ಳಿರಾಯಣ್ಣ ಕಂಚಿನ ಪುತ್ಥಳಿ ಲೋಕಾರ್ಪಣೆ, ಕನಕಭವನ ಉದ್ಘಾಟಿಸಿ ಮಾತನಾಡಿದ ಅವರು, ಸಂಗೊಳ್ಳಿ ರಾಯಣ್ಣನವರ ದೇಶಪ್ರೇಮ, ಹೋರಾಟ ಮನೋಭಾವವನ್ನು ನಾವು ರೂಢಿಸಿಕೊಂಡಾಗ ಮಾತ್ರ ರಾಯಣ್ಣನ ಆಶಯ ಈಡೇರುತ್ತದೆ ಎಂದು ನುಡಿದರು.

ಷಡ್ಯಂತ್ರ ಸಹಿಸಬೇಡಿ: ನನ್ನ ವಿರುದ್ಧ ನಡೆಯುತ್ತಿರುವ ಷಡ್ಯಂತ್ರವನ್ನು ಸಹಿಸುತ್ತೀರಾ? ಎಂದು ನೆರೆದಿದ್ದ ಜನಸ್ತೋಮ ಪ್ರಶ್ನಿಸಿದ ಸಿದ್ದರಾಮಯ್ಯರಿಗೆ, ‘ನಾವು ಸಹಿಸಲ್ಲ. ರೊಚ್ಚೆಗೇಳ್ತೇವೆ’ ಎಂದು ಜನಸ್ತೋಮ ಪ್ರತಿಕ್ರಿಯಿಸಿತು. ಮಾಲತೇಶ ದೇವರ ಆಶೀರ್ವಾದ-ನಿಮ್ಮ ಪ್ರೀತಿ ನನ್ನ ಮೇಲಿರಲಿ, ದೇವರಗುಡ್ಡದಲ್ಲಿ ಪೂಜೆ ಸಲ್ಲಿಸಿದ ಬಳಿಕ ಅವರು ಮನವಿ ಮಾಡಿದರು.

‘ನಾನು ಜನರ ಆಶೀರ್ವಾದದಿಂದ ಮುಖ್ಯಮಂತ್ರಿಯಾಗಿ ಜನರಿಗೆ ಕೊಟ್ಟ ಮಾತನ್ನು ಈಡೇರಿಸುತ್ತಿದ್ದೇವೆ. ಮೊದಲ ಬಾರಿ ಸಿಎಂ ಆಗಿದ್ದಾಗಲೂ ಹಲವು ಭಾಗ್ಯಗಳನ್ನು ಜನರ ಮಡಿಲಿಗೆ ಹಾಕುವ ಮೂಲಕ ನುಡಿದಂತೆ ನಡೆದಿದ್ದೇನೆ. ಎರಡನೆ ಬಾರಿ ಸಿಎಂ ಆಗಿ ವರ್ಷದಲ್ಲೇ ಐದೂ ಗ್ಯಾರಂಟಿಗಳನ್ನೂ ಜಾರಿ ಮಾಡಿದ್ದೇನೆ ಎಂದು ಅವರು ಹೇಳಿದರು.

‘ನಾನು ಅಸೂಯೆ ಮಾಡುವವರಿಂದ ದ್ವೇಷದ ರಾಜಕಾರಣ ಮಾಡುವವರಿಂದ ಅಧಿಕಾರಕ್ಕೆ ಬರಲಿಲ್ಲ. ಜನರ ಆಶೀರ್ವಾದದಿಂದ ಹಿಂದುಳಿದ ಸಮಾಜದ ಈ ಸಿದ್ದರಾಮಯ್ಯ ಸಿಎಂ ಆಗಿರೋದು. ಜನರ ಆಶೀರ್ವಾದ ಇರುವವರೆಗೂ ನನಗೆ ಯಾರೂ ಏನೂ ಮಾಡಲಾಗುವುದಿಲ್ಲ ಎಂದು ಪ್ರತಿಪಕ್ಷಗಳಿಗೆ ಸಿದ್ದರಾಮಯ್ಯ ಎಚ್ಚರಿಕೆ ನೀಡಿದರು.

ಜಾತಿ ವ್ಯವಸ್ಥೆಯ ಈ ಸಮಾಜದಲ್ಲಿ ಕಟ್ಟಕಡೆಯ ವ್ಯಕ್ತಿಗೂ ಅವಕಾಶ ಸಿಗಬೇಕು ಎಂದು ಗಾಂಧೀಜಿ ಹೇಳಿದ್ದರು. ಇದರಲ್ಲಿ ನಂಬಿಕೆ ಇಟ್ಟು ಕಾರ್ಯಕ್ರಮ ರೂಪಿಸುತ್ತಿದ್ದೇನೆ. ಇದೇ ಜೆಡಿಎಸ್-ಬಿಜೆಪಿಯವರಿಗೆ ಹೊಟ್ಟೆಕಿಚ್ಚು. ಈ ಹೊಟ್ಟೆಕಿಚ್ಚಿನಿಂದ ಅವರೇ ನಾಶ ಆಗುತ್ತಾರೆಯೇ ಹೊರತು ನನ್ನನ್ನು ಅಲುಗಾಡಿಸಲು ಸಾಧ್ಯವಿಲ್ಲ ಎಂದು ಸಿದ್ದರಾಮಯ್ಯ ಎಚ್ಚರಿಸಿದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News