ಬೆಂಗಳೂರು | ಗಡುವಿನ ಒಳಗೆ ರಸ್ತೆ ಗುಂಡಿ ಮುಚ್ಚದಿದ್ದರೆ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ : ಡಿ.ಕೆ.ಶಿವಕುಮಾರ್

Update: 2024-09-08 13:03 GMT

ಡಿ.ಕೆ.ಶಿವಕುಮಾರ್

ಬೆಂಗಳೂರು : ನಾನು ಒಂದು ವಾರಗಳ ಕಾಲ ಖಾಸಗಿ ಕೆಲಸದ ಮೇಲೆ ವಿದೇಶ ಪ್ರವಾಸಕ್ಕೆ ಹೋಗುತ್ತಿದ್ದು, ಕೊಟ್ಟಿರುವ ಗಡುವಿನಲ್ಲಿ ನಗರದ ರಸ್ತೆಗಳಲ್ಲಿ ಗುಂಡಿ ಮುಚ್ಚಬೇಕು. ಈ ವಿಚಾರದಲ್ಲಿ ಬೇಜವಾಬ್ದಾರಿ ತೋರುವ ಅಧಿಕಾರಿಗಳನ್ನು ಅಮಾನತುಗೊಳಿಸಿ ನಿರ್ದಾಕ್ಷಿಣ್ಯವಾಗಿ ಕ್ರಮ ಜರುಗಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಎಚ್ಚರಿಕೆ ನೀಡಿದರು.

ರವಿವಾರ ನಗರದಲ್ಲಿರುವ ವೈಯಾಲಿಕಾವಲ್ ಬಿಬಿಎಂಪಿ ಕಚೇರಿಯಲ್ಲಿ ನಡೆದ ಅಧಿಕಾರಿಗಳ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದು ಬಿಬಿಎಂಪಿ ಅಧಿಕಾರಿಗಳ ಸಭೆ ನಡೆಸಿ, ಕೊಟ್ಟಿರುವ 15 ದಿನಗಳ ಗಡುವಿನ ಒಳಗೆ ನಗರದ ರಸ್ತೆಗುಂಡಿಗಳನ್ನು ಮುಚ್ಚುವ ಕೆಲಸ ಆಗಬೇಕು ಎಂದು ನಿರ್ದೇಶನ ನೀಡಿದ್ದೇನೆ ಎಂದು ತಿಳಿಸಿದರು.

ರಸ್ತೆ ಗುಂಡಿ ವಿಚಾರವಾಗಿ ಸಾರ್ವಜನಿಕರಿಂದ ಮತ್ತೆ ದೂರು ಬಂದರೆ ಇದಕ್ಕೆ ಜವಾಬ್ದಾರಿಯಾಗಿರುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕಾಗುತ್ತದೆ. ಎಷ್ಟು ಜನ ಅಮಾನತುಗೊಳ್ಳುತ್ತಾರೋ ಗೊತ್ತಿಲ್ಲ. ಪಾಲಿಕೆಯ ಪ್ರತಿ ಅಧಿಕಾರಿಗಳು ಎಷ್ಟೇ ದೊಡ್ಡವರಿದ್ದರೂ ಪ್ರತಿಯೊಬ್ಬರೂ ರಸ್ತೆಯಲ್ಲಿ ನಿಂತು ಈ ಸಮಸ್ಯೆ ಬಗೆಹರಿಸಬೇಕು. ವಾರ್ಡ್‍ಗಳಲ್ಲಿ ಅಧಿಕಾರಿಗಳೇ ಮುಂದೆ ನಿಂತು ಗುಂಡಿ ಮುಚ್ಚುವ ಕೆಲಸ ಮಾಡಿಸಬೇಕು ಎಂದು ನಿರ್ದೇಶನ ನೀಡಿದ್ದೇನೆ ಎಂದು ಅವರು ತಿಳಿಸಿದರು.

ಸೆಪ್ಟೆಂಬರ್ ತಿಂಗಳಲ್ಲಿ ಮಳೆ ಬೀಳುವ ಸಾಧ್ಯತೆ ಹೆಚ್ಚಾಗಿದ್ದು, ನಾವು ಬಹಳ ಜಾಗರೂಕರಾಗಿ ಇರಬೇಕು. ಮಳೆ ಬೀಳುವ ಸಂದರ್ಭದಲ್ಲಿ ನೀರು ನಿಲ್ಲುವ ಹಾಗೂ ಮನೆಗಳಿಗೆ ನುಗ್ಗುವ ಸಾಧ್ಯತೆ ಇರುವ ಪ್ರದೇಶಗಳಲ್ಲಿ ಎಚ್ಚರಿಕೆ ವಹಿಸಬೇಕು. ಮಳೆಗೆ ಬೀಳಬಹುದಾದ ಮರಗಳನ್ನು ಮೇಲ್ಭಾಗದಲ್ಲಿ ಕತ್ತರಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಡಿ.ಕೆ. ಶಿವಕುಮಾರ್ ಹೇಳಿದರು.

ಮಹಾತ್ಮಾ ಗಾಂಧೀಜಿ ಅವರು ಕಾಂಗ್ರೆಸ್ ಅಧ್ಯಕ್ಷರಾಗಿ ಬೆಳಗಾವಿಯಲ್ಲಿ ಎಐಸಿಸಿ ಅಧಿವೇಶನ ನಡೆಸಿ 100 ವರ್ಷಗಳು ಪೂರೈಸಿರುವ ಸಂದರ್ಭದಲ್ಲಿ ನಗರದ ಎಲ್ಲ ಶಾಲೆಗಳಲ್ಲಿ(ಪಾಲಿಕೆ ಹಾಗೂ ಖಾಸಗಿ ಶಾಲೆಗಳೂ ಸೇರಿ) ಗಾಂಧಿ ಜಯಂತಿ ದಿನದಂದು ಸ್ವಚ್ಛತೆ ಬಗ್ಗೆ ಪ್ರತಿಜ್ಞಾ ಸ್ವೀಕಾರ ಕಾರ್ಯಕ್ರಮ ಮಾಡಬೇಕು. ಆ ಮೂಲಕ ಮಕ್ಕಳಲ್ಲಿ ಸ್ವಚ್ಛತೆ ಬಗ್ಗೆ ಜಾಗೃತಿ ಮೂಡಿಸಲಾಗುವುದು ಎಂದು ಅವರು ತಿಳಿಸಿದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News