ಗಾಂಧೀಜಿ ನೇತೃತ್ವಕ್ಕೆ ನೂರು ವರ್ಷ | ಕಾಂಗ್ರೆಸ್ ಪಕ್ಷದಿಂದ ‘ಗಾಂಧಿ ನಡಿಗೆ’ ಕಾರ್ಯಕ್ರಮ: ಡಿಸಿಎಂ ಡಿ.ಕೆ.ಶಿವಕುಮಾರ್

Update: 2024-09-30 16:56 GMT

ಬೆಂಗಳೂರು : ಮಹಾತ್ಮಗಾಂಧಿ ಬೆಳಗಾವಿಯಲ್ಲಿ ಕಾಂಗ್ರೆಸ್ ಮಹಾಧಿವೇಶನದ ಅಧ್ಯಕ್ಷತೆ ಜತೆಗೆ ದೇಶದ ಸ್ವಾತಂತ್ರ್ಯ ಹೋರಾಟದ ನೇತೃತ್ವ ವಹಿಸಿಕೊಂಡು 100 ವರ್ಷಗಳಾಗಿವೆ. ಈ ನೆನಪಿಗೆ ರಾಜ್ಯಾದ್ಯಂತ ‘ಗಾಂಧಿ ನಡಿಗೆ’, ‘ಸ್ವಚ್ಚತಾ ಪ್ರತಿಜ್ಞಾವಿಧಿ’ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಜತೆಗೆ ಇಡೀ ವರ್ಷ ನಾನಾ ಕಾರ್ಯಕ್ರಮಗಳನ್ನು ನಡೆಸಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು.

ಸೋಮವಾರ ನಗರದ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಅವರು, ‘ಕಾಂಗ್ರೆಸ್ ಪಕ್ಷದಿಂದ ರಾಜ್ಯದ ಉದ್ದಗಲಕ್ಕೂ ಅ.2ರ ಬೆಳಗ್ಗೆ 11 ಗಂಟೆಗೆ ಎಂ.ಜಿ ರಸ್ತೆಯ ಗಾಂಧಿ ಪ್ರತಿಮೆಯಿಂದ, ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯ ಭಾರತ್ ಜೋಡೋ ಭವನದ ತನಕ ‘ಗಾಂಧಿ ಜ್ಯೋತಿ ಪಾದಯಾತ್ರೆ’ ನಡೆಸಲಾಗುವುದು ಎಂದರು.

ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲಿ ಕಾರ್ಯಕ್ರಮ: ಪಾದಯಾತ್ರೆ ಕಾರ್ಯಕ್ರಮದಲ್ಲಿ ಬೆಂಗಳೂರಿನ ಶಾಸಕರು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ವಿವಿಧ ಸಂಸ್ಥೆಗಳ ಸದಸ್ಯರು ಭಾಗವಹಿಸಲಿದ್ದಾರೆ. ಅಲ್ಲದೇ ರಾಜ್ಯದ ಎಲ್ಲ ಜಿಲ್ಲಾ, ತಾಲೂಕು ಮತ್ತು ಬ್ಲಾಕ್ ಮಟ್ಟದಲ್ಲಿ ‘ಗಾಂಧಿ ನಡಿಗೆ' ಕಾರ್ಯಕ್ರಮ ನಡೆಯುತ್ತದೆ ಎಂದು ಅವರು ಮಾಹಿತಿ ನೀಡಿದರು.

ಎಲ್ಲ ಕೇಂದ್ರಗಳ ಕಾರ್ಯಕ್ರಮ ಝೂಮ್ ಮೂಲಕ ಏಕಕಾಲದಲ್ಲಿ ಬಿತ್ತರಗೊಳ್ಳಲಿದೆ. ನೇರವಾಗಿ ಹಾಗೂ ಝೂಮ್ ಮೂಲಕ ಸ್ವಚ್ಚತೆ ಹಾಗೂ ಗಾಂಧೀಜಿ ವಿಚಾರಗಳ ಬಗ್ಗೆ ಪ್ರತಿಜ್ಞಾ ವಿಧಿ ಭೋದನೆ ಮಾಡಲಾಗುವುದು ಎಂದು ಶಿವಕುಮಾರ್ ಹೇಳಿದರು.

ಜಂಟಿ ಅಧಿವೇಶನ ಹಾಗೂ ಶತಾಬ್ದಿ ಕಾರ್ಯಕ್ರಮ: ಬೆಳಗಾವಿಯಲ್ಲಿ 1924ರ ಡಿಸೆಂಬರ್ ನಲ್ಲಿ ನಡೆದ ಕಾಂಗ್ರೆಸ್ ಮಹಾಧಿವೇಶನದಲ್ಲಿ ಮಹಾತ್ಮ ಗಾಂಧಿ ಅವರು ಸ್ವಾತಂತ್ರ್ಯ ಹೋರಾಟದ ಜವಾಬ್ದಾರಿ ತೆಗದುಕೊಂಡರು. ಆದ ಕಾರಣಕ್ಕೆ ಡಿಸೆಂಬರ್ ಕೊನೆ ವಾರದಲ್ಲಿ ಸರಕಾರದಿಂದ ವಿಧಾನಸಭೆ ಜಂಟಿ ಅಧಿವೇಶನ ನಡೆಸಲಾಗುವುದು ಎಂದು ಉಪ ಮುಖ್ಯಮಂತ್ರಿ ತಿಳಿಸಿದರು.

ಬೆಳಗಾವಿ ಕಾಂಗ್ರೆಸ್ ಅಧಿವೇಶನ 100 ವರ್ಷಗಳ ಹಿಂದೆ ನಡೆದ ರೂಪುರೇಷೆಯಲ್ಲೆ ಪಕ್ಷದ ಅಧಿವೇಶನವನ್ನೂ ಪ್ರತ್ಯೇಕವಾಗಿ ನಡೆಸಲಾಗುವುದು. ಗಾಂಧೀಜಿ ಅವರ ತತ್ವ, ಸಿದ್ಧಾಂತ, ಸಂದೇಶ, ಕೊಡುಗೆಗಳನ್ನು ಮೆಲುಕು ಹಾಕುವ ಶತಾಬ್ದಿ ಕಾರ್ಯಕ್ರಮವನ್ನು ನಡೆಸಬೇಕು ಎಂದು ಸಮಿತಿ ಸಲಹೆ ನೀಡಿದೆ ಎಂದು ಅವರು ಹೇಳಿದರು.

ಶಾಸಕರ ಭಾಗವಹಿಸುವಿಕೆ ಕಡ್ಡಾಯ: 136 ಕಾಂಗ್ರೆಸ್ ಶಾಸಕರು ತಮ್ಮ ಕ್ಷೇತ್ರದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಕಡ್ಡಾಯವಾಗಿ ಭಾಗವಹಿಸಬೇಕು. ಶಾಸಕರು ಇಲ್ಲದ ಕ್ಷೇತ್ರಗಳಲ್ಲಿ ವಿಧಾನಪರಿಷತ್ ಸದಸ್ಯರು, ಜಿಲ್ಲಾ ಅಧ್ಯಕ್ಷರು, ಉಪಾಧ್ಯಕ್ಷರು, ಪದಾಧಿಕಾರಿಗಳು ಕಾಯಕ್ರಮ ನಡೆಸಿಕೊಡಬೇಕು. ಕೇಂದ್ರ ಕಚೇರಿಯಿಂದ ಸೂಕ್ತ ಮಾರ್ಗದರ್ಶನ ನೀಡಲಾಗುವುದು ಎಂದು ಶಿವಕುಮಾರ್ ಸೂಚಿಸಿದರು.

ಸರಕಾರದಿಂದ ‘ಗಾಂಧಿ ನಡಿಗೆ' ಕಾರ್ಯಕ್ರಮ: ಅ.2ರಂದು ಬೆಳಗ್ಗೆ ಗಾಂಧಿ ಭವನದಿಂದ ವಿಧಾನಸೌಧದ ಗಾಂಧಿ ಪ್ರತಿಮೆಯ ತನಕ ಸುಮಾರು 1.5 ಕಿಮೀ ದೂರ ‘ಗಾಂಧಿ ನಡಿಗೆ’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ನಂತರ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಸುಮಾರು 500ಕ್ಕೂ ಹೆಚ್ಚು ಶಾಲಾ ವಿದ್ಯಾರ್ಥಿಗಳಿಗೆ ಹಾಗೂ ಝೂಮ್ ಮೂಲಕ ಇತರೇ ವಿದ್ಯಾರ್ಥಿಗಳಿಗೆ ಸ್ವಚ್ಚತಾ ಅಭಿಯಾನದ ಬಗ್ಗೆ ಪ್ರತಿಜ್ಞಾ ವಿಧಿ ಬೋಧಿಸಲಾಗುವುದು ಎಂದು ಅವರು ಹೇಳಿದರು.

ಬಿಳಿ ಟೋಪಿ, ವಸ್ತ್ರ ಬಳಸಲು ಮನವಿ: ಗಾಂಧಿ ಅವರು ಜವಾಬ್ದಾರಿ ತೆಗೆದುಕೊಂಡ ನಂತರ ದೇಶದ ಸ್ವಾತಂತ್ಯ ಹೋರಾಟಕ್ಕೆ ಹೊಸ ರೂಪುರೇಷೆ, ಹುರುಪು ಬಂದಿತು. ಅವರ ತತ್ವ, ಆದರ್ಶಗಳ ಬಗ್ಗೆ ಅರಿವನ್ನು ಮೂಡಿಸಬೇಕು. ಪಾದಯಾತ್ರೆಯಲ್ಲಿ ಭಾಗವಹಿಸುವವರು ಬಿಳಿ ಟೋಪಿ ಹಾಗೂ ವಸ್ತ್ರವನ್ನು ತೊಟ್ಟು ಹೆಜ್ಜೆ ಹಾಕಬೇಕು ಎಂದು ಮನವಿ ಮಾಡಲಾಗಿದೆ ಎಂದು ಶಿವಕುಮಾರ್ ತಿಳಿಸಿದರು.

ರಾಷ್ಟ್ರಧ್ವಜ ಬಳಕೆಗೆ ಸೂಚನೆ: ಸರಕಾರಿ ಕಾರ್ಯಕ್ರಮವಾದ ಕಾರಣಕ್ಕೆ ಚರಕವಿರುವ ಕಾಂಗ್ರೆಸ್ ಧ್ವಜ, ಕನ್ನಡ ಧ್ವಜ, ಇತರೇ ಪಕ್ಷಗಳ ಧ್ವಜಗಳ್ನು ಬಳಸದೆ ರಾಷ್ಟ್ರಧ್ವಜ ಮಾತ್ರ ಬಳಸಬೇಕು ಎಂದು ಸೂಚನೆ ನೀಡಲಾಗಿದೆ ಎಂದು ಉಪ ಮುಖ್ಯಮಂತ್ರಿ ಹೇಳಿದರು.

ನಾನು ಕೆಪಿಸಿಸಿ ಅಧ್ಯಕ್ಷನಾದ ನಂತರ ಅನೇಕ ಐತಿಹಾಸಿಕ ಕಾರ್ಯಕ್ರಮಗಳನ್ನು ರೂಪಿಸುತ್ತಾ ಬಂದಿದ್ದೇವೆ. ಚುನಾವಣಾ ಮುಂಚಿತವಾಗಿ ಭಾರತ್ ಜೋಡೋ ಯಾತ್ರೆಯನ್ನು ಕರ್ನಾಟಕದಲ್ಲಿ ಯಶಸ್ವಿಯಾಗಿ ಸಂಘಟಿಸಲಾಯಿತು. ನಂತರ ಬೆಳಗಾವಿಯ ಗಾಂಧಿ ಬಾವಿಯಿಂದ ನೀರನ್ನು ತೆಗೆದು ಈ ರಾಜ್ಯಕ್ಕೆ ಅಂಟಿದ್ದ ಕೊಳೆಯನ್ನು ಗುಡಿಸಲಾಯಿತು. ಆ ನಂತರ ಈ ರಾಜ್ಯದ ಜನರು ವಿಧಾನಸಭಾ ಚುನಾವಣೆಯಲ್ಲಿ ನಮಗೆ ಆಶೀರ್ವಾದ ಮಾಡಿದ್ದು ಇತಿಹಾಸ ಎಂದು ಅವರು ಸ್ಮರಿಸಿದರು.

ನಾನು, ವೀರಪ್ಪ ಮೊಯ್ಲಿ, ಎಚ್.ಕೆ.ಪಾಟೀಲ್ ಹಾಗೂ ಬಿ.ಎಲ್.ಶಂಕರ್ ಅವರನ್ನು ಒಳಗೊಂಡ 60 ಜನ ಸದಸ್ಯರು ಇರುವ ತಂಡವನ್ನು ರಚಿಸಲಾಯಿತು. 100 ವರ್ಷಗಳ ಸಂಭ್ರಮಾಚರಣೆ ರೂಪುರೇಷೆಗಳ ಬಗ್ಗೆ ಸರಕಾರಕ್ಕೆ ಹಾಗೂ ಪಕ್ಷಕ್ಕೆ ಈ ಸಮಿತಿ ಸಲಹೆ, ಸೂಚನೆಗಳನ್ನು ನೀಡಿದೆ. ಮುಖ್ಯಮಂತ್ರಿ ಹತ್ತಾರು ಸಭೆ ನಡೆಸಿ ಕಾರ್ಯಕ್ರಮ ರೂಪುರೇಷೆ ತಯಾರಿಸಿದ್ದಾರೆ. ಪಕ್ಷ ಬೇದ ಮರೆತು ಸರಕಾರದ ಕಾರ್ಯಕ್ರಮದಲ್ಲಿ ಎಲ್ಲರೂ ಭಾಗವಹಿಸಬೆಕು ಎಂದು ಮನವಿ ಮಾಡಲಾಗಿದೆ ಎಂದು ಅವರು ತಿಳಿಸಿದರು.

ಯತ್ನಾಳ್ ಹೇಳಿಕೆ ಕುರಿತು ಪೊಲೀಸ್ ಹಾಗೂ ಐಟಿಗೆ ದೂರು: ರಾಜ್ಯದ ಕಾಂಗ್ರೆಸ್ ಸರಕಾರ ಬೀಳಿಸಲು 1 ಸಾವಿರ ಕೋಟಿ ರೂ.ಮೀಸಲಿಡಲಾಗಿದೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ನೀಡಿರುವ ಹೇಳೀಕೆ ಕುರಿತು ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕಾಂಗ್ರೆಸ್ ಸರಕಾರ ಉರುಳಿಸಲು ಮಾಡುತ್ತಿರುವ ಈ ಕೃತ್ಯದ ಬಗ್ಗೆ ಯಾವ ರೀತಿಯ ಹೋರಾಟ ನಡೆಸಬೇಕು ಎಂದು ಪಕ್ಷದ ನಾಯಕರ ಜೊತೆ ಚರ್ಚೆ ನಡೆಸಲಾಗುವುದು. ಪೊಲೀಸ್ ಹಾಗೂ ಐಟಿಯವರಿಗೆ ದೂರು ನೀಡಲಾಗುವುದು ಎಂದು ಹೇಳಿದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News