‘ಬಾಗಿಲಿಗೆ ಬಂತು ಸರಕಾರ, ಸೇವೆಗೆ ಇರಲಿ ಸಹಕಾರ’ ಕಾರ್ಯಕ್ರಮದಲ್ಲಿ 2,600 ಅರ್ಜಿ ಸ್ವೀಕಾರ: ಡಿ.ಕೆ.ಶಿವಕುಮಾರ್

Update: 2024-01-05 13:55 GMT

ಬೆಂಗಳೂರು: ಸಾರ್ವಜನಿಕರ ಅಹವಾಲುಗಳನ್ನು ಕಾಲಮಿತಿಯೊಳಗೆ ವಿಲೇವಾರಿ ಮಾಡಲು ಪಾಲಿಕೆ ಅಧಿಕಾರಿಗಳಿಗೆ ಸೂಚನೆ ನೀಡಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಬಾಗಿಲಿಗೆ ಬಂತು ಸರಕಾರ, ಸೇವೆಗೆ ಇರಲಿ ಸಹಕಾರ’ ಕಾರ್ಯಕ್ರಮದ ಎರಡನೇ ದಿನದಂದು 2600 ಅರ್ಜಿಗಳು ನೋಂದಣಿ ಆಗಿದ್ದು, ಅರ್ಜಿಗಳನ್ನು ವಿಂಗಡಿಸಿ ಅವುಗಳ ತ್ವರಿತ ವಿಲೇವಾರಿಗೆ ವಾರ್ಡ್ ಮಟ್ಟದ ಅಧಿಕಾರಿಗಳಿಗೆ ಸಮಯ ನಿಗದಿ ಮಾಡುತ್ತೇವೆ ಎಂದರು.

ಅರ್ಜಿ ಸಲ್ಲಿಸಿರುವ ಪ್ರತಿಯೊಬ್ಬರ ದೂರವಾಣಿ ಸಂಖ್ಯೆ ಪಡೆದಿದ್ದೇವೆ. ಎಲ್ಲ ದೂರುಗಳನ್ನು ಬಗೆಹರಿಸಲು ಪ್ರತ್ಯೇಕ ತಂಡ ಮಾಡುತ್ತೇವೆ. ಜನರ ಅರ್ಜಿ ಸರಿ ಇಲ್ಲದಿದ್ದರೆ, ಅವರನ್ನು ಸಂಪರ್ಕಿಸಿ ಮತ್ತೆ ಸರಿಯಾದ ಅರ್ಜಿ ಪಡೆಯುತ್ತೇವೆ. ನಿವೇಶನ, ರಸ್ತೆ ಮುಚ್ಚಿರುವ ಬಗ್ಗೆ ದೂರಿನ ಹಿನ್ನೆಲೆಯಲ್ಲಿ ಅಧಿಕಾರಿಗಳು ಸ್ಥಳಕ್ಕೆ ಹೋಗಿ ಪರಿಶೀಲನೆ ಮಾಡಿ ಪರಿಹಾರ ನೀಡಲು ಮಾರ್ಗದರ್ಶನ ನೀಡಿದ್ದೇನೆ. ಈ ಕಾರ್ಯಕ್ರಮಗಳು ಮುಗಿದ ನಂತರ ಅಧಿಕಾರಿಗಳ ಜೊತೆ ಮತ್ತೊಂದು ಸುತ್ತಿನ ಸಭೆ ಮಾಡಿ ಜನರ ಸಮಸ್ಯೆಗೆ ಹೇಗೆ ಪರಿಹಾರ ನೀಡಬೇಕು ಎಂದು ಚರ್ಚಿಸುತ್ತೇವೆ ಎಂದರು.

ಜನರಿಗೆ ತೊಂದರೆ ನೀಡಬಾರದು ಎಂಬುದು ಅಧಿಕಾರಿಗಳಿಗೂ ತಿಳಿಯಬೇಕು. ಹೀಗಾಗಿ ಅವರಿಗೆ ಸಂದೇಶ ನೀಡುತ್ತೇವೆ. ಕಷ್ಟ ಇದ್ದವರು ಮಾತ್ರ ಶಾಸಕರು ಹಾಗು ಮಂತ್ರಿಗಳ ಮನೆ ಕಚೇರಿಗೆ ಹೋಗುತ್ತಾರೆ. ಜನ ಈ ರೀತಿ ಅಲೆದಾಡುವಂತೆ ಆಗಬಾರದು. ಜನರಿಗೆ ನ್ಯಾಯ ಸಿಗುವಂತೆ ಮಾಡುತ್ತೇವೆ. ಹಕ್ಕುಪತ್ರ ವಿತರಣೆ ಸಮಯದಲ್ಲಿ ಎಲ್ಲ ದಾಖಲೆ ಪರಿಶೀಲಿಸುತ್ತೇವೆ ಎಂದು ಅವರು ಹೇಳಿದರು.

ಕಂದಾಯ ಇಲಾಖೆ, ಬಿಬಿಎಂಪಿಗೆ ಸಂಬಂಧಿಸಿದ ದೂರುಗಳು ಹೆಚ್ಚಾಗಿದ್ದು, ಖಾತೆ ವಿಚಾರವಾಗಿಯೂ ದೂರುಗಳು ಬಂದಿವೆ. ಮನೆಗಳು ಬೇಕು ಎಂಬ ಬೇಡಿಕೆ ಹೆಚ್ಚಾಗಿದ್ದು, ಉಚಿತವಾಗಿ ಮನೆ ನೀಡಲು ರಾಜ್ಯ ಸರಕಾರ ಹಾಗೂ ಕೇಂದ್ರ ಸರಕಾರಕ್ಕೆ ಅವಕಾಶ ಇಲ್ಲ. ಇವರಿಗೆ ಕಡಿಮೆ ದರದಲ್ಲಿ ಮನೆ ನೀಡಲಾಗುತ್ತಿದ್ದು, ವಸತಿ ಇಲಾಖೆ ಜತೆ ಚರ್ಚೆ ಮಾಡಿ ಎಷ್ಟು ವಿನಾಯಿತಿ ನೀಡಬಹುದೋ ಅಷ್ಟು ನೀಡುತ್ತೇವೆ ಎಂದು ಅವರು ತಿಳಿಸಿದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News