ರಿಕ್ಕಿ ರೈ ಕೊಲೆ ಯತ್ನ ಪ್ರಕರಣ | ಅನುರಾಧ ರೈ ವಿರುದ್ಧ ಯಾವುದೇ ಕ್ರಮ ತೆಗೆದುಕೊಳ್ಳದಂತೆ ಆದೇಶ
ಬೆಂಗಳೂರು : ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮೇಲೆ ನಡೆದ ಕೊಲೆ ಯತ್ನ ಆರೋಪದಡಿ ಮಲತಾಯಿ ಅನುರಾಧ ರೈ ವಿರುದ್ಧ ಮುಂದಿನ ವಿಚಾರಣೆವರೆಗೂ ಯಾವುದೇ ಬಲವಂತದ ಕ್ರಮಕ್ಕೆ ಮುಂದಾಗದಂತೆ ತನಿಖಾಧಿಕಾರಿಗಳಿಗೆ ಹೈಕೋರ್ಟ್ ಸೂಚಿಸಿ ಆದೇಶಿದೆ.
ತಮ್ಮ ವಿರುದ್ಧ ದಾಖಲಿಸಿರುವ ಪ್ರಕರಣ ರದ್ದು ಕೋರಿ ಮುತ್ತಪ್ಪ ರೈ ಎರಡನೇ ಪತ್ನಿ ಅನುರಾಧ ಮತ್ತಪ್ಪ ರೈ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಹೇಮಂತ್ ಚಂದನಗೌಡರ್ ಅವರಿದ್ದ ಏಕಸದಸ್ಯ ಪೀಠ ಮೇಲಿನ ಆದೇಶ ನೀಡಿದೆ.
ಅರ್ಜಿದಾರರ ಪರ ವಕೀಲರು ವಾದ ಮಂಡಿಸಿ ಘಟನೆಗೂ ಅರ್ಜಿದಾರರಿಗೂ ಯಾವುದೇ ತೆರನಾದ ಸಂಬಂಧವಿಲ್ಲ. ವಿನಾಕಾರಣ ಪ್ರಕರಣದಲ್ಲಿ ಅವರ ಹೆಸರನ್ನು ಎಳೆದು ತರಲಾಗಿದೆ. ರಿಕ್ಕಿ ರೈ ಹಾಗೂ ಅರ್ಜಿದಾರರ ನಡುವೆ ಆಸ್ತಿ ವಿವಾದ ಇತ್ತು ಎಂದು ಎಲ್ಲೆಡೆ ಸುದ್ದಿಯಾಗಿದೆ. ಆದರೆ ಈ ವಿಚಾರ ಆರು ತಿಂಗಳ ಹಿಂದೆಯೇ ಇತ್ಯರ್ಥವಾಗಿದೆ. ಹೀಗಾಗಿ ರಾಮನಗರ ವಿಚಾರಣಾ ನ್ಯಾಯಾಲಯದ ಮುಂದಿರುವ ಪ್ರಕರಣದ ವಿಚಾರಣೆಗೆ ತಡೆ ನೀಡಬೇಕು ಎಂದು ಅರ್ಜಿದಾರರ ಪರ ವಕೀಲರು ಮನವಿ ಮಾಡಿದರು.
ವಾದ ಆಲಿಸಿದ ನ್ಯಾಯಪೀಠ ಅರ್ಜಿದಾರರ ವಿರುದ್ಧ ಮುಂದಿನ ವಿಚಾರಣೆವರೆಗೂ ಬಲವಂತದ ಕ್ರಮಕ್ಕೆ ಮುಂದಾಗದಂತೆ ತನಿಖಾಧಿಕಾರಿಗಳಿಗೆ ಹೈಕೋರ್ಟ್ ಸೂಚನೆ ನೀಡಿ ವಿಚಾರಣೆಯನ್ನು ಮುಂದೂಡಿದೆ.