ಸ್ವಾತಂತ್ರ್ಯ ತಂದುಕೊಟ್ಟಿದ್ದು ಜಾತಿ-ಧರ್ಮದ ಹೆಸರಲ್ಲಿ ಕಚ್ಚಾಡುವುದಕ್ಕಲ್ಲ : ಕೆ.ವಿ.ಪ್ರಭಾಕರ್

Update: 2024-08-15 16:05 GMT

ಬೆಂಗಳೂರು : ಪೂರ್ವಜರು ನಮಗೆ ಸ್ವಾತಂತ್ರ್ಯವನ್ನು ತಂದುಕೊಟ್ಟಿರುವುದು ಇಂದು ನಾವು ಜಾತಿ-ಧರ್ಮದ ಹೆಸರಲ್ಲಿ ಕಚ್ಚಾಡುವುದಕ್ಕಾಗಿ ಅಲ್ಲ, ಬದಲಾಗಿ ಭಾರತದಲ್ಲಿ ಒಗ್ಗಟ್ಟಿನಿಂದ ಬಾಳಲಿ ಎಂದಾಗಿದೆ. ಹೀಗಾಗಿ ಸ್ವಾತಂತ್ರ್ಯ ಹೋರಾಟಗಾರರ ಕನಸಿನ ಭಾರತ ನಿರ್ಮಿಸಲು ನಾವೆಲ್ಲರೂ ಒಂದಾಗಿ ಶ್ರಮಿಸೋಣ ಎಂದು ಸಿಎಂ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಕರೆ ನೀಡಿದ್ದಾರೆ.

ಗುರುವಾರ ನಗರದ ಬಾಲಭವನ ನಡೆದ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಬಳಿಕ ಮಕ್ಕಳಿಗೆ ಪ್ರತಿಭಾ ಪುರಸ್ಕಾರಗಳನ್ನು ವಿತರಿಸಿ ಮಾತನಾಡಿದ ಅವರು, ಸಾಮರಸ್ಯದಿಂದ ಬಾಳಿದರೆ ಮಾತ್ರ ನಾವು ಶತ್ರುಗಳನ್ನು ಸದೆಬಡಿಯಲು ಸಾಧ್ಯವಿದೆ ಎನ್ನುವುದು ನಮ್ಮ ಸ್ವಾತಂತ್ರ್ಯ ಹೋರಾಟದ ಸಂದೇಶವಾಗಿದೆ ಎಂದರು.

ಬಾಲಭವನದಲ್ಲಿ ಎಲ್ಲಾ ಜಾತಿ, ಧರ್ಮದ ಮಕ್ಕಳು ಒಟ್ಟಾಗಿ ಆಟವಾಡುತ್ತಾ ಸಂಭ್ರಮಿಸುತ್ತಿದ್ದೀರೋ ಹಾಗೆಯೇ ಸ್ವಾತಂತ್ರ್ಯ ಹೋರಾಟದಲ್ಲಿ ಎಲ್ಲಾ ಜಾತಿ-ಧರ್ಮದವರು ಒಟ್ಟಾಗಿದ್ದರಿಂದಲೇ ಬ್ರಿಟಿಷರನ್ನು ನಮ್ಮ ದೇಶದಿಂದ ಓಡಿಸಲು ಸಾಧ್ಯವಾಯಿತು ಎಂದು ಅವರು ತಿಳಿಸಿದರು.

ಸ್ವಾತಂತ್ರ್ಯ ದಿನವಾದ ಇಂದು ನಾವು ದೇಶದಲ್ಲಿ ಏಕತೆ, ಶಾಂತಿ ಹಾಗೂ ಅಭಿವೃದ್ಧಿಯನ್ನು ಸಾಧಿಸಲು ಒಂದಾಗಿ ಪ್ರತಿಜ್ಞೆ ಮಾಡೋಣ. ನಾವೆಲ್ಲ ಎಂದಿಗೂ ಪರಸ್ಪರರ ಧರ್ಮ, ಭಾಷೆ ಹಾಗೂ ಸಂಸ್ಕೃತಿಯನ್ನು ಗೌರವಿಸುವ ಅಭ್ಯಾಸವನ್ನು ರೂಢಿಸಿಕೊಳ್ಳಬೇಕು ಎಂದು ಕೆ.ವಿ.ಪ್ರಭಾಕರ್ ಹೇಳಿದರು. ಕಾರ್ಯಕ್ರಮದಲ್ಲಿ ಬಾಲ ಭವನ ಅಧ್ಯಕ್ಷ ಬಿ.ಆರ್.ನಾಯ್ಡು, ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸಾಧುಕೋಕಿಲಾ ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News