700ಕೋಟಿ ರೂ.ಮೌಲ್ಯದ ಅರಣ್ಯ ಭೂಮಿ ಒತ್ತುವರಿ ; ಮರುವಶಕ್ಕೆ ಸಚಿವ ಈಶ್ವರ್ ಖಂಡ್ರೆ ಸೂಚನೆ
ಬೆಂಗಳೂ : ರಾಜಧಾನಿ ಬೆಂಗಳೂರು ಪೂರ್ವ ತಾಲೂಕು, ಕೆ.ಆರ್.ಪುರ ಹೋಬಳಿ ಕೊತ್ತನೂರಿನ ಸರ್ವೆ ನಂ.48ರಲ್ಲಿ ಅರಣ್ಯ ಇಲಾಖೆಗೆ ವಹಿಸಲಾದ 22.08ಎಕರೆ ಜಮೀನಿನ ಮರುವಶಕ್ಕೆ ಪ್ರಕ್ರಿಯೆ ಆರಂಭಿಸಬೇಕು ಎಂದು ಅರಣ್ಯ ಸಚಿವ ಈಶ್ವರ್ ಬಿ. ಖಂಡ್ರೆ ಸೂಚನೆ ನೀಡಿದ್ದಾರೆ.
ಶುಕ್ರವಾರ ಈ ಸಂಬಂಧ ಪ್ರಕಟಣೆ ನೀಡಿರುವ ಅವರು, ‘ಬೆಂಗಳೂರು ನಗರದಲ್ಲಿ ಹಸಿರು ಹೊದಿಕೆ ಹೆಚ್ಚಿಸಲು 1999-2000ರ ಸಾಲಿನಲ್ಲಿ ಕೊತ್ತನೂರು ಗ್ರಾಮದ ಸರ್ವೆ ನಂ.48ರಲ್ಲಿ 22.08 ಎಕರೆ ಜಮೀನಿನಲ್ಲಿ ನೆಡುತೋಪು ಅಭಿವೃದ್ಧಿಪಡಿಸುವ ಸಲುವಾಗಿ ಈ ಭೂಮಿಯನ್ನು ಅರಣ್ಯ ಇಲಾಖೆಗೆ ವಹಿಸಲಾಗಿದೆ. ಆದರೆ, ಈ ಜಮೀನು ವಶಕ್ಕೆ ಪಡೆದು ಅರಣ್ಯ ಬೆಳೆಸುವಲ್ಲಿ ವಿಫಲವಾಗಿರುವ ಇಲಾಖೆಯ ಹಿಂದಿನ ಅಧಿಕಾರಿಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಅರಣ್ಯ ಇಲಾಖೆಗೆ ಮಂಜೂರಾದ 22.08 ಎಕರೆ ಭೂಮಿಯ ಪೈಕಿ 13 ಎಕರೆ ಜಮೀನನ್ನು ಅರಣ್ಯ ಇಲಾಖೆಗೆ ವಹಿಸಲಾಗಿದೆ ಎಂದು ಅಂದಿನ ಬೆಂಗಳೂರು ನಗರ ಜಿಲ್ಲಾಧಿಕಾರಿಗಳ ಆದೇಶದಂತೆ ಪಹಣಿ (ಆರ್ಟಿಸಿ)ಯಲ್ಲಿ ನಮೂದಾಗಿದೆ. ಈ ಜಮೀನಿನ ನಕ್ಷೆ ಪಡೆದು ಉಳಿದ 9 ಎಕರೆಯ ದಾಖಲೆಗಳನ್ನೂ ಮಾಡಿಸಿ, ಸುಮಾರು 700ಕೋಟಿ ರೂ.ಬೆಲೆ ಬಾಳುವ ಜಮೀನು ಒತ್ತುವರಿಯಾಗಿದ್ದರೆ ಅದನ್ನು ಅರಣ್ಯ ಇಲಾಖೆಯ ವಶಕ್ಕೆ ಪಡೆಯಲು 64(ಎ) ಪ್ರಕ್ರಿಯೆ ಆರಂಭಿಸುವಂತೆ ಅಧಿಕಾರಿಗಳಿಗೆ ಸಚಿವರು ಸೂಚನೆ ನೀಡಿದ್ದಾರೆ.