ಮುಡಾ ಹಗರಣ | ಮಾಜಿ ಆಯುಕ್ತ ಡಿ.ಬಿ.ನಟೇಶ್ ವಿರುದ್ದ ಮೇಲ್ಮನವಿಯ ಶೀಘ್ರ ವಿಚಾರಣೆಗೆ ಈ.ಡಿ. ಮನವಿ
ಬೆಂಗಳೂರು : 14 ಬದಲಿ ನಿವೇಶನಗಳ ಹಂಚಿಕೆ ಮಾಡಿದ ಪ್ರಕರಣದಲ್ಲಿ ಮುಡಾ ಮಾಜಿ ಆಯುಕ್ತ ಡಾ.ಡಿ.ಬಿ.ನಟೇಶ್ ವಿರುದ್ಧ ಜಾರಿಗೊಳಿಸಿದ್ದ ಸಮನ್ಸ್ ರದ್ದುಪಡಿಸಿರುವ ಹೈಕೋರ್ಟ್ ಏಕಸದಸ್ಯ ಪೀಠ ತೀರ್ಪು ಪ್ರಶ್ನಿಸಿ ಸಲ್ಲಿಸಿರುವ ಮೇಲ್ಮನವಿಯ ಶೀಘ್ರವಾಗಿ ವಿಚಾರಣೆ ಮಾಡುವಂತೆ ಜಾರಿ ನಿರ್ದೇಶನಾಲಯ(ಈ.ಡಿ.) ಮನವಿ ಮಾಡಿದೆ.
ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿ ಜಾರಿ ನಿರ್ದೇಶನಾಲಯ ಸಲ್ಲಿಸಿರುವ ಮೇಲ್ಮನವಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ಅವರ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು. ಈ ವೇಳೆ ಮಾಜಿ ಆಯುಕ್ತ ಡಿ.ಬಿ.ನಟೇಶ್ ಪರ ವಕೀಲರು ಹಾಜರಾಗಿ, ವಾದ ಮಂಡನೆಗೆ ಕಾಲಾವಕಾಶಕ್ಕೆ ಮನವಿ ಮಾಡಿದರು.
ಈ ವೇಳೆ ಈ.ಡಿ. ಪರ ಹಾಜರಿದ್ದ ಕೇಂದ್ರ ಸರಕಾರದ ಹೆಚ್ಚುವರಿ ಸಾಲಿಸಿಟರ್ ಜನರಲ್ ಕೆ.ಅರವಿಂದ ಕಾಮತ್, ಪ್ರಕರಣ ಕುರಿತು ಡಿ.ಬಿ.ನಟೇಶ್ ಅವರನ್ನು ಹೊರತುಪಡಿಸಿ ಉಳಿದ ಆರೋಪಿಗಳ ವಿರುದ್ಧ ತನಿಖೆ ನಡೆಸಲು ಇದೇ ಪೀಠ ಅನುಮತಿ ನೀಡಿದೆ. ಡಿ.ಬಿ.ನಟೇಶ್ ಅವರನ್ನೂ ವಿಚಾರಣೆಗೆ ಒಳಪಡಿಸಬೇಕಿದೆ. ಆದ್ದರಿಂದ ಶೀಘ್ರವಾಗಿ ಮೇಲ್ಮನವಿ ವಿಚಾರಣೆ ಪೂರ್ಣಗೊಳಿಸಬೇಕು ಎಂದು ಮನವಿ ಮಾಡಿದರು. ಹೀಗಾಗಿ ಮೇಲ್ಮನವಿಯ ವಿಚಾರಣೆಯನ್ನು ಎ.21ಕ್ಕೆ ಮುಂದೂಡಿದೆ.