ಕೆಎಸ್ಎಂಸಿಎ ನೂತನ ಅಧ್ಯಕ್ಷರಾಗಿ ಸತೀಶ್ ಸೈಲ್ ಅಧಿಕಾರ ಸ್ವೀಕಾರ
ಬೆಂಗಳೂರು: ದೇಶದ ಜಾಹೀರಾತು ಕ್ಷೇತ್ರದಲ್ಲಿ ರಾಜ್ಯ ಸರಕಾರದ ಏಕೈಕ ಸಂಸ್ಥೆಯಾದ ಕರ್ನಾಟಕ ಸ್ಟೇಟ್ ಮಾರ್ಕೆಟಿಂಗ್ ಕಮ್ಯೂನಿಕೇಷನ್ ಅಂಡ್ ಅಡ್ವರ್ಟೈಸಿಂಗ್ ಲಿ.ಸಂಸ್ಥೆಯ ನೂತನ ಅಧ್ಯಕ್ಷರಾಗಿ ಕಾರವಾರ ವಿಧಾನಸಭಾ ಕ್ಷೇತ್ರದ ಶಾಸಕ ಸತೀಶ್ ಕೃಷ್ಣ ಸೈಲ್ ಅವರು ಸೋಮವಾರ ಅಧಿಕಾರ ಸ್ವೀಕಾರ ಮಾಡಿದರು.
ಈ ಸಂಬಂಧಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸತೀಶ್ ಸೈಲ್, ‘ಈ ಹೆಮ್ಮೆಯ ಸಂಸ್ಥೆಗೆ ನನ್ನನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಿರುವುದಕ್ಕೆ ರಾಜ್ಯ ಸರಕಾರಕ್ಕೆ ಕೃತಜ್ಞತೆ ಸಲ್ಲಿಸುತ್ತೇನೆ. ಈ ಸಂಸ್ಥೆಯನ್ನು ಸರ್ವರೀತಿಯಲ್ಲೂ ಪ್ರಗತಿಪರವಾಗಿ ಮುನ್ನಡೆಸಲು ಸರಕಾರವು ತಮಗೆ ವಹಿಸಿರುವ ಈ ಜವಾಬ್ದಾರಿಯನ್ನು ನಾನು ಅತ್ಯಂತ ಸಮರ್ಥವಾಗಿ ನಿರ್ವಹಿಸುತ್ತೇನೆ’ ಎಂದು ಹೇಳಿದರು.
‘ಸಂಸ್ಥೆಯ ಅಭಿವೃದ್ಧಿಗೆ ರಾಜ್ಯ ಸರಕಾರದಿಂದ ಆಗಬೇಕಾಗಿರುವ ಎಲ್ಲ ಸ್ಥರದ ಕಾರ್ಯಗಳನ್ನು ಸಕಾಲದಲ್ಲಿ ಮಾಡಿಸುವುದರ ಜೊತೆ ಸರಕಾರದ ಮಟ್ಟದ ಸಂಸ್ಥೆಗೆ ಎಲ್ಲ ರೀತಿಯ ಅಗತ್ಯ ಬೆಂಬಲವನ್ನು ಪಡೆಯಲು ನಾನು ಅತ್ಯಂತ ಪ್ರಾಮಾಣಿಕವಾಗಿ ಪ್ರಯತ್ನ ಮಾಡುತ್ತೇನೆ, ಇದು ನನ್ನ ಗುರಿ ಎಂದು ಸತೀಶ್ ಸೈಲ್ ತಿಳಿಸಿದರು. ಈ ವೇಳೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಸಿದ್ದಲಿಂಗಪ್ಪ ಬಿ.ಪೂಜಾರಿ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.