ಮಾದಕ ವ್ಯಸನಿಗಳಿಂದ ಅಪರಾಧ ಪ್ರಕರಣಗಳು ಹೆಚ್ಚಳ : ಜಿ.ಪರಮೇಶ್ವರ್

Update: 2024-06-26 15:29 GMT

ಬೆಂಗಳೂರು : ದೇಶದಲ್ಲಿ ಐದು ಕೋಟಿಗೂ ಹೆಚ್ಚು ಮಂದಿ ಮಾದಕ ವ್ಯಸನಕ್ಕೆ ಅಂಟಿಕೊಂಡಿದ್ದು, ಇದರಿಂದಾಗಿ ಅಪರಾಧ ಪ್ರಕರಣಗಳು ಹೆಚ್ಚಾಗುತ್ತಿವೆ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ಆತಂಕ ವ್ಯಕ್ತಪಡಿಸಿದ್ದಾರೆ.

ಬುಧವಾರ ನಗರದ ಕಂಠೀರವ ಕ್ರೀಡಾಂಗಣದಲ್ಲಿ ರಾಜ್ಯ ಪೊಲೀಸ್ ಇಲಾಖೆಯು ವಿವಿಧ ಶಿಕ್ಷಣ ಸಂಸ್ಥೆಗಳೊಂದಿಗೆ ಜಂಟಿಯಾಗಿ ಆಯೋಜಿಸಿದ್ದ ಅಂತಾರಾಷ್ಟ್ರೀಯ ಮಾದಕವಸ್ತು ವ್ಯಸನ ಮತ್ತು ಮಾನವ ಕಳ್ಳ ಸಾಗಾಣಿಕೆ ವಿರೋಧಿ ದಿನದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ವಿಶ್ವದೆಲ್ಲೆಡೆ ಮಾದಕ ದ್ರವ್ಯ ಆಧುನಿಕ ಪಿಡುಗಾಗಿದ್ದು, ಯುವ ಸಮುದಾಯವನ್ನೇ ಹಾಳು ಮಾಡುತ್ತಿದೆ. ವಿಶ್ವಸಂಸ್ಥೆಯು 1987ರಲ್ಲಿ ಮಾದಕ ವಸ್ತು ವಿರೋಧಿ ದಿನವನ್ನು ಜೂ.26ರಂದು ಆಚರಿಸಲು ನಿರ್ಣಯಿಸಿತು. ಮಾದಕ ದ್ರವ್ಯ ಸಮಾಜಕ್ಕೆ ದೊಡ್ಡ ರೋಗವಾಗಿ ಅಂಟಿಕೊಳ್ಳುತ್ತಿದ್ದು, ಯುವ ಪೀಳಿಗೆ ಸಂಕಷ್ಟಕ್ಕೆ ಸಿಲುಕದಂತೆ ಜಾಗೃತಿ ಮೂಡಿಸಬೇಕಿದೆ ಎಂದು ಜಿ.ಪರಮೇಶ್ವರ್ ಹೇಳಿದರು.

ಭಾರತವು ಮಾದಕ ವಸ್ತುಗಳ ಸಮಸ್ಯೆಯಲ್ಲಿ ಸಿಲುಕುತ್ತಿದೆ. 5 ಕೋಟಿ ಜನ ಮಾದಕ ವ್ಯಸನಕ್ಕೆ ಅಂಟಿಕೊಂಡಿದ್ದಾರೆ. ಯುವಕರು ಹಾಳಾದರೆ, ದೇಶ ಸಂಕಷ್ಟಕ್ಕೆ ಸಿಲುಕಿದಂತಾಗುತ್ತದೆ. ಭಾರತ ಅತಿ ಹೆಚ್ಚು ಯುವಕರನ್ನು ಹೊಂದಿರುವ ದೇಶ. ಬಹಳ ಎಚ್ಚರಿಕೆಯಿಂದ ದೇಶದ ಮುಂದಿನ ಭವಿಷ್ಯವನ್ನು ನೋಡಿಕೊಳ್ಳಬೇಕಿದೆ ಎಂದು ಪರಮೇಶ್ವರ್ ತಿಳಿಸಿದರು.

ಕೊಲೆ ಪ್ರಕರಣಗಳನ್ನು ಪತ್ತೆ ಹಚ್ಚುವಾಗ 17ರಿಂದ 20 ವರ್ಷದೊಳಗಿನವರೇ ಭಾಗಿಯಾಗುತ್ತಿರುವುದು ಬೆಳಕಿಗೆ ಬರುತ್ತಿದೆ. ತಪ್ಪಿತಸ್ಥರನ್ನು ತಪಾಸಣೆಗೆ ಒಳಪಡಿಸಿದಾಗ ಮಾದಕ ವ್ಯಸನಿಯಾಗಿದ್ದರು ಎಂಬುದು ಗೊತ್ತಾಗುತ್ತಿದೆ. ಮಾದಕ ವ್ಯಸನದಿಂದ ಸಮಾಜಕ್ಕೆ ಅಪಾಯವಿದ್ದು, ಪಾಲಕರು ತಮ ಮಕ್ಕಳ ಚಟುವಟಿಕೆಗಳ ಮೇಲೆ ನಿಗಾವಹಿಸಬೇಕು ಎಂದು ಪರಮೇಶ್ವರ್ ಹೇಳಿದರು.

ರಾಜ್ಯ ಸರಕಾರವು ಡ್ರಗ್ಸ್ ಮುಕ್ತ ಕರ್ನಾಟಕ ನಿರ್ಮಾಣದ ಘೋಷಣೆ ಮಾಡಿದೆ. ಸಂಪೂರ್ಣವಾಗಿ ಡ್ರಗ್ಸ್ ಮಟ್ಟ ಹಾಕುವ ನಿಟ್ಟಿನಲ್ಲಿ ಇಲಾಖೆಯು ಯುದ್ಧವನ್ನೇ ಸಾರಿದೆ. ಇತ್ತೀಚೆಗೆ 40 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶಪಡಿಸಲಾಗಿದ್ದು, 10 ಟನ್ ಗಾಂಜಾ ಸುಟ್ಟು ಹಾಕಲಾಗಿದೆ. ಇಷ್ಟೊಂದು ಪ್ರಮಾಣದ ಡ್ರಗ್ಸ್ ಯುವಕರ ಕೈ ಸೇರಿದ್ದರೆ ಎಷ್ಟು ಕುಟುಂಬಗಳು ಹಾಳಾಗುತ್ತಿದ್ದವೋ ಎಂದು ಪರಮೇಶ್ವರ್ ಆತಂಕ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ಮಾದಕ ವ್ಯಸನದ ವಿರುದ್ಧವಾಗಿ ಜಾಗೃತಿ ಪ್ರಾತಿಕ್ಷಿಕೆಗಳು ನಡೆದವು. ನಿರಂತರ ಕಾರ್ಯಾಚರಣೆಯಿಂದಾಗಿ ವಶಪಡಿಸಿಕೊಳ್ಳಲಾಗಿರುವ 42 ಕೋಟಿ ರೂ. ಮೌಲ್ಯದ 1,227 ಕೆ.ಜಿ. ಪ್ರಮಾಣದ ಗಾಂಜಾ, ಕೊಕೈನ್‍ನಂತಹ ಮಾದಕ ವಸ್ತುಗಳನ್ನು ನಾಶಪಡಿಸುವ ಕಾರ್ಯಕ್ಕೆ ಚಾಲನೆ ನೀಡಲಾಯಿತು.

ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಡಾ.ಕೆ.ಗೋವಿಂದರಾಜ್, ಶಾಸಕ ರಿಝ್ವಾನ್ ಅರ್ಷದ್, ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್, ಸಿಐಡಿ ವಿಭಾಗದ ಡಿಜಿಪಿ ಡಾ.ಎಂ.ಎ.ಸಲೀಂ, ಎಡಿಜಿಪಿ ಪ್ರಣಬ್ ಮೋಹಾಂತಿ, ಆದರ್ಶ ಡೆವಲಪರ್ಸ್‍ನ ವ್ಯವಸ್ಥಾಪಕ ನಿರ್ದೇಶಕ ಜಯಶಂಕರ್ ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News