ಕಾಂತರಾಜು ವರದಿಯ ಸಾಧಕ-ಬಾಧಕಗಳ ಬಗ್ಗೆ ಸಂಪುಟದಲ್ಲಿ ಚರ್ಚೆ ನಡೆಸಲಾಗುವುದು : ಸಚಿವ ತಂಗಡಗಿ

Update: 2024-07-02 18:36 GMT

Photo: fb.com/Shivarajtangadagi

ಬೆಂಗಳೂರು : ‘ಗಟ್ಟಿತನವಿದ್ದ ಕಾರಣಕ್ಕೆ ನಾವು ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ಕಾಂತರಾಜು ವರದಿಯನ್ನು ಸ್ವೀಕಾರ ಮಾಡಿದ್ದು, ಈ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬದ್ಧತೆ ಪ್ರದರ್ಶಿಸಿದ್ದಾರೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ತಿಳಿಸಿದ್ದಾರೆ.

ಮಂಗಳವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂತರಾಜು ಅವರ ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ವರದಿಯ ಸಾಧಕ ಬಾಧಕಗಳ ಬಗ್ಗೆ ಸಂಪುಟದಲ್ಲಿ ಚರ್ಚೆ ನಡೆಸಲಾಗುವುದು. ಯಾವುದೇ ಸಮುದಾಯಕ್ಕೂ ನೋವಾಗದಂತೆ ವರದಿಯನ್ನು ಅನುಷ್ಠಾನಗೊಳಿಸಲಾಗುವುದು. ರಾಜ್ಯದ ಹಿಂದುಳಿದ ವರ್ಗಗಳ ಆಶಯದ ಬಗ್ಗೆ ಮುಖ್ಯಮಂತ್ರಿಗಳಿಗೆ ಗಮನವಿದೆ ಎಂದರು.

ಈ ಹಿಂದೆ ಆಡಳಿತದಲ್ಲಿದ್ದ ಯಾವುದೇ ಸರಕಾರ ಕಾಂತರಾಜು ಅವರ ವರದಿಯನ್ನು ಸ್ವೀಕಾರ ಮಾಡಿರಲಿಲ್ಲ. ಈ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಹಿಂದುಳಿದ ಸಮಾಜದ ಸ್ಥಿತಿಗತಿ ಬಗ್ಗೆ ತಿಳಿಯಲು ಆಯೋಗ ರಚಿಸಿದ್ದರು. ಪುನಃ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ ಆಗಿದ್ದು, ವರದಿ ಸ್ವೀಕಾರ ಮಾಡಿದ್ದೇವೆ. ಲೋಕಸಭಾ ಚುನಾವಣೆ ಎದುರಾದ ಹಿನ್ನೆಲೆಯಲ್ಲಿ ವರದಿಯ ಸಾಧಕ ಬಾಧಕದ ಬಗ್ಗೆ ಚರ್ಚೆ ನಡೆಸಲು ಸಾಧ್ಯವಾಗಿರಲಿಲ್ಲ ಎಂದು ಶಿವರಾಜ್ ತಂಗಡಗಿ ಹೇಳಿದರು.

ಸಚಿವ ಸ್ಥಾನದಲ್ಲಿ ತೃಪ್ತಿ ಇದೆ: ‘ಪಕ್ಷದ ನಾಯಕರು ನನ್ನನ್ನು ಗುರುತಿಸಿ ಎರಡು ಬಾರಿ ಮಂತ್ರಿ ಮಾಡಿದ್ದು, ನಾನು ಕೆಪಿಸಿಸಿ ಅಧ್ಯಕ್ಷನಾಗುವಷ್ಟು ದೊಡ್ಡವನಲ್ಲ. ನಾನು ಡಿಸಿಎಂ ಹುದ್ದೆಯ ಆಕಾಂಕ್ಷಿಯೂ ಅಲ್ಲ. ನನಗೆ ಈಗ ಕೊಟ್ಟಿರುವ ಜವಾಬ್ದಾರಿಯಲ್ಲೇ ತೃಪ್ತಿ ಇದೆ’ ಎಂದು ಹೇಳಿದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News