ಮುಡಾ ವಿಚಾರ | ಉದ್ದೇಶ ಪೂರ್ವಕವಾಗಿ ಬಿಜೆಪಿ-ಜೆಡಿಎಸ್ ನಾಯಕರಿಂದ ನನ್ನ ತೇಜೋವಧೆ : ಸಿಎಂ ಸಿದ್ದರಾಮಯ್ಯ

Update: 2024-07-26 16:20 GMT

ಬೆಂಗಳೂರು : ಮುಡಾ ನಿವೇಶನ ಹಂಚಿಕೆ ಕಾನೂನು ಅನ್ವಯವೇ ನಡೆದಿದ್ದು, ಉದ್ದೇಶ ಪೂರ್ವಕವಾಗಿಯೇ ಬಿಜೆಪಿ ಮತ್ತು ಜೆಡಿಎಸ್ ನಾಯಕರು ತೇಜೋವಧೆ ಮಾಡಲು ಮುಂದಾಗಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಶುಕ್ರವಾರ ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮುಡಾ ಸಂಬಂಧ ದಾಖಲೆ ಬಿಡುಗಡೆ ಮಾಡಿದ ಅವರು, ಮುಡಾ ಪ್ರಕರಣದಲ್ಲಿ ನನ್ನ ಹಾಗೂ ನನ್ನ ಪತ್ನಿ ಪಾತ್ರ ಇಲ್ಲ. ಶಾಸಕನಾಗಿ, ಮಂತ್ರಿಯಾಗಿ, ಮುಖ್ಯಮಂತ್ರಿ ಆಗಿ ಸುಮಾರು 40 ವರ್ಷಗಳ ಕಾಲ ರಾಜಕೀಯದಲ್ಲಿದ್ದೇನೆ. ಇಂದಿನವರೆಗೆ ನನ್ನ ಮೇಲೆ ಕಪ್ಪು ಚುಕ್ಕೆ ಇಲ್ಲ. ನನ್ನ ರಾಜಕೀಯ ಜೀವನ ತೆರೆದ ಪುಸ್ತಕ. ಬಿಜೆಪಿ-ಜೆಡಿಎಸ್ ದ್ವೇಷದಿಂದ, ಸೇಡಿನ ರಾಜಕಾರಣ ಮಾಡುತ್ತಿದ್ದಾರೆ ಎಂದು ಟೀಕಿಸಿದರು.

ಬಿಜೆಪಿ ಮತ್ತು ಜೆಡಿಎಸ್ ಜನರ ವಿಶ್ವಾಸ ಕಳೆದುಕೊಳ್ಳುತ್ತಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಮೈತ್ರಿ ಮಾಡಿದರೂ ಹೆಚ್ಚು ಸ್ಥಾನ ಗೆಲ್ಲಲು ಆಗಿಲ್ಲ. ಜನರ ವಿಶ್ವಾಸ ಗಳಿಸಲು ಅವರು ವಾಮಮಾರ್ಗ ಬಳಸುತ್ತಿದ್ದಾರೆ ಎಂದ ಅವರು, ಈಗಾಗಲೇ ವಿಚಾರಗಳನ್ನೆಲ್ಲಾ ಪರಿಶೀಲಿಸಲು ನ್ಯಾಯಮೂರ್ತಿ ಪಿ.ಎನ್.ದೇಸಾಯಿ ಅಧ್ಯಕ್ಷತೆಯಲ್ಲಿ ವಿಚಾರಣಾ ಆಯೋಗವನ್ನು ರಚಿಸಲಾಗಿದೆ. ವಿಚಾರಣಾ ಆಯೋಗವು ಈ ಕುರಿತು ತನಿಖೆ ಪ್ರಾರಂಭಿಸಿದೆ ಎಂದು ಅವರು ಹೇಳಿದರು.

ದಾಖಲೆಗಳನ್ನು ವಿವರಿಸಿದ ಅವರು, 1935ನೆ ವರ್ಷದಲ್ಲಿ ಜವರ ಅವರ ಪುತ್ರ ನಿಂಗ ಎಂಬುವರಿಗೆ ಮೈಸೂರು ತಾಲೂಕು ಕಚೇರಿಗೆ ಜಮೀನು ನೀಡುವಂತೆ ಅರ್ಜಿ ಸಲ್ಲಿಸಿದ್ದಾರೆ. ಆಗಿನ ಕೆಳ ಹಂತದ ಅಧಿಕಾರಿಗಳು ಅದೇ ವರ್ಷವೇ ನಿಂಗ ಅವರು ಕೇಳಿರುವ ಜಮೀನುಗಳನ್ನು ಹರಾಜಿನ ಮೂಲಕ ವಿಲೇಪಡಿಸಬೇಕೆಂದು ವರದಿ ಸಲ್ಲಿಸಿದ್ದಾರೆ. ಅದರ ಪ್ರಕಾರ ಹರಾಜು ನಡೆಸಲು ಕ್ರಮವಹಿಸಿದ್ದಾರೆ ಎಂದರು.

ಹಾಗೇ, ಅದೇ ವರ್ಷವೇ ಹರಾಜು ನೋಟೀಸು ಹೊರಡಿಸಿದ್ದಾರೆ. ಅದರ ಪ್ರಕಾರ ಹರಾಜು ಪ್ರಕ್ರಿಯೆ ನಡೆದು, ಕೆಸರೆ ಗ್ರಾಮದ ಸರ್ವೆ ನಂ.464ರ 3.16 ಜಮೀನನ್ನು 1 ರೂಪಾಯಿಗೆ ನಿಂಗ ಅವರಿಗೆ ಹರಾಜು ಮಾಡಲಾಯಿತು ಎಂದು ಉಲ್ಲೇಖಿಸಿದ್ದಾರೆ. ಜಮೀನುಗಳನ್ನು ಹರಾಜಿನ ಮೂಲಕ ಪಡೆದಿರುವುದರಿಂದ ಸ್ವಯಾರ್ಜಿತ ಜಮೀನಾಗುತ್ತದೆಯೆ ಹೊರತು ಈ ಜಮೀನುಗಳ ಮೇಲೆ ಸರಕಾರದ ಯಾವುದೇ ಹಿತಾಸಕ್ತಿ ಇರುವುದಿಲ್ಲ. ಸ್ವಯಾರ್ಜಿತ ಜಮೀನಾಗಿರುವುದರಿಂದ ಈ ಜಮೀನುಗಳು ಪಿಟಿಸಿಎಲ್ ಕಾಯ್ದೆ ವ್ಯಾಪ್ತಿಗೆ ಬರುವುದಿಲ್ಲ ಎಂದು ಸಿದ್ದರಾಮಯ್ಯ ಹೇಳಿದರು.

1993ರಲ್ಲಿ ಒಂದು ವಂಶವೃಕ್ಷ ಮಾಡಿಸಿದ್ದಾರೆ. ಆ ಪ್ರಕಾರ ನಿಂಗ ಅವರಿಗೆ ಮೂರು ಜನ ಮಕ್ಕಳು. ಮೊದಲನೆಯವರು ಮಲ್ಲಯ್ಯ, ಎರಡನೆಯವರು ಮೈಲಾರಯ್ಯ ಮತ್ತು ಮೂರನೆಯವರು ಜೆ.ದೇವರಾಜು. ವಂಶವೃಕ್ಷದ ಪ್ರಕಾರ ಮಲ್ಲಯ್ಯ ಎನ್ನುವವರಿಗೆ ವಾರಸುದಾರರನ್ನು ತೋರಿಸಿಲ್ಲ. ಮೈಲಾರಯ್ಯಗೆ ಮಂಜುನಾಥಸ್ವಾಮಿ ಎಂ. ಎನ್ನುವವರಿದ್ದಾರೆ. ಆಗ ಅವರಿಗೆ 29 ವರ್ಷ ಎಂದು ನಮೂದಿಸಲಾಗಿದೆ. ಮೂರನೆಯವರು ದೇವರಾಜು ಎನ್ನುವವರು.ಈ ವಂಶವೃಕ್ಷದಲ್ಲಿ ಮಲ್ಲಯ್ಯ, ದೇವರಾಜು, ಮೈಲಾರಯ್ಯನವರ ಪತ್ನಿ ಪುಟ್ಟಗೌರಮ್ಮ, ಎಂ.ಮಂಜುನಾಥಸ್ವಾಮಿ ಸಹಿ ಮಾಡಿದ್ದಾರೆ ಎಂದು ಮಾಹಿತಿ ನೀಡಿದರು.

ಇನ್ನೂ, ಮೈಸೂರು ತಾಲೂಕು ಕಸಬಾ ಹೋಬಳಿ ಕೆಸರೆ ಗ್ರಾಮದ ಸರ್ವೆ ನಂ.464ರ 3 ಎಕರೆ 16 ಗುಂಟೆ ಜಮೀನಿಗೆ ಖಾತೆ ಮಾಡಿಕೊಡಲು ಲೇಟ್ ನಿಂಗ ಅವರ ಮೂರನೆ ಮಗ ಜೆ.ದೇವರಾಜು ನಮೂನೆ 19ರ ಮೂಲಕ ಅರ್ಜಿ ಸಲ್ಲಿಸಿದ್ದಾರೆ. ಈ ಜಮೀನು ನಿಂಗ ಅವರಿಗೆ ಸೇರಿದ್ದು, ಅವರು ಫೌತಿಯಾಗಿ ನಮಗೆ ಸದರಿ ಜಮೀನಿನಲ್ಲಿ ಭಾಗ ಬರಬೇಕಾಗಿರುವುದಿಲ್ಲ. ಈಗಾಗಲೆ ನಾವು ಸರ್ವೆ ನಂ.462 ರಲ್ಲಿ 4 ಎಕರೆ ಜಮೀನನ್ನು ಪುಟ್ಟಮ್ಮ ಎನ್ನುವವರಿಗೆ ಮಾರಿರುತ್ತೇವೆ. ಆದ್ದರಿಂದ ಅರ್ಜಿದಾರ ಜೆ.ದೇವರಾಜುರವರಿಗೆ ಸದರಿ ಜಮೀನುಗಳನ್ನು ಖಾತೆ ಮಾಡುವುದರಲ್ಲಿ ನಮ್ಮ ತಕರಾರು ಏನೂ ಇರುವುದಿಲ್ಲವೆಂದು ಸಹಿ ಹಾಕಿದ್ದರು ಎಂದು ತಿಳಿಸಿದರು.

ಇದರ ಆಧಾರದ ಮೇಲೆ ಜೆ.ದೇವರಾಜು ಅವರ ಹೆಸರಿಗೆ ಈ ಜಮೀನುಗಳು ವರ್ಗಾವಣೆಯಾಗಿವೆ. ಹಾಗಾಗಿ ಕ್ರಯದಾರರ ವಾಸರಸುದಾರರ ಒಪ್ಪಿಗೆ ಇಲ್ಲದೆ ಖರೀದಿ ನಡೆದಿದೆ ಎಂಬ ಬಿಜೆಪಿಯವರ ಆರೋಪವು ಸುಳ್ಳು. ಈ ಎಲ್ಲ ವ್ಯವಹಾರಗಳು 2010ಕ್ಕಿಂತ ಮುಂಚೆ ನಡೆದಿವೆ. ಇವು ನನಗೆ ಸಂಬಂಧಪಟ್ಟಿದ್ದಲ್ಲ. ಈ ಜಮೀನುಗಳನ್ನು ಭೂಸ್ವಾಧೀನ ಮಾಡಲು 1992ರ ಸೆ.18ಲ್ಲಿ ಪ್ರಾಥಮಿಕ ಅಧಿಸೂಚನೆ ಹೊರಡಿಸಿದ್ದಾರೆ. ಆದರೆ, ಅದು ಬಹಳ ವರ್ಷಗಳಾದರೂ ಇತ್ಯರ್ಥವಾಗಿಲ್ಲ. ಆಗ, ಜಿ.ದೇವರಾಜು 1996ರ ಸೆ.13 ರಂದು ತಮ್ಮ ಜಮೀನುಗಳನ್ನು ಭೂಸ್ವಾಧೀನದಿಂದ ಕೈಬಿಡುವಂತೆ ಅರ್ಜಿ ಬರೆದಿದ್ದಾರೆ.

ಈ ಜಮೀನುಗಳ ಅಂತಿಮ ಅಧಿಸೂಚನೆಯಾಗಿದ್ದು 1997ನೆ ಸಾಲಿನ ಮೊದಲೇ ಈ ಅರ್ಜಿ ಬರೆದಿದ್ದಾರೆ. ಅರ್ಜಿಯ ಮೇಲೆ ಅಂದಿನ ನಗರಾಭಿವೃದ್ಧಿ ಸಚಿವರಾಗಿದ್ದ ಬಿ.ಎನ್.ಬಚ್ಚೇಗೌಡ ಅವರು ಮನವಿ ಪರಿಶೀಲಿಸಿ ಸ್ಥಳೀಯ ಅಧಿಕಾರಿಗಳಿಂದ ವರದಿ ತರಿಸಿಕೊಂಡು ಅಭಿಪ್ರಾಯದೊಂದಿಗೆ ಮಂಡಿಸಿ ಎಂದು ಕಾರ್ಯದರ್ಶಿಯವರಿಗೆ ಟಿಪ್ಪಣಿ ಬರೆದಿದ್ದಾರೆ. ಅದನ್ನು ಆಧರಿಸಿ, ಒಂದು ತಿಂಗಳಾದ ಮೇಲೆ ಪತ್ರ ಮುಡಾ ಆಯುಕ್ತರಿಗೆ ಹೋಗಿದೆ ಎಂದು ವಿವರಿಸಿದರು.

ಮುಡಾದಲ್ಲಿ 1997ರ ಜುಲೈ 24 ರಂದು ಈ ಜಾಗ ಭೂಸ್ವಾಧೀನದಿಂದ ಕೈಬಿಡಲು ನಿರ್ಣಯ ಪಾಸ್ ಮಾಡಿದ್ದಾರೆ. ಅದೇ ವರ್ಷ ಆ.30ರಂದು ಈ ಜಾಗಗಳನ್ನು ಭೂಸ್ವಾಧೀನದಿಂದ ಕೈಬಿಡಲು ಮುಡಾ ಆಯುಕ್ತರು ಸರಕಾರದ ಕಾರ್ಯದರ್ಶಿಗಳಿಗೆ ಶಿಫಾರಸ್ಸು ಮಾಡಿದ್ದಾರೆ. ಈ ಶಿಫಾರಸ್ಸನ್ನು ಆಧರಿಸಿ, ಭೂಸ್ವಾಧೀನ ಮಾಡಿದ ಜಮೀನುಗಳನ್ನು ಡಿ-ನೋಟಿಫೈ ಮಾಡಲು ಆಗ ರೆವಿನ್ಯೂ ಇಲಾಖೆಯ ಪ್ರಧಾನ ಕಾರ್ಯದರ್ಶಿ ವಿ. ಬಾಲಸುಬ್ರಮಣ್ಯನ್ ಅಧ್ಯಕ್ಷತೆಯ ಸಮಿತಿ ಪರಿಶೀಲಿಸಿ ಡಿನೋಟಿಫೈ ಮಾಡಿದೆ.

ಈ 3 ಜನರ ಸಮಿತಿಯು ಬೆಂಗಳೂರಿನಲ್ಲಿ ಬಿಡಿಎಯ ಯಡಿಯೂರು-ನಾಗಸಂದ್ರ, ಮೈಸೂರಿನ ಮುಡಾದ ಕೆಸರೆ ಸೇರಿದಂತೆ ಸುಮಾರು 19 ಕಡೆ ಡಿನೋಟಿಫೈ ಮಾಡಲು ಅನುಮೋದನೆ ಮಾಡಿರುತ್ತದೆ ಎಂದು ಸಿದ್ದರಾಮಯ್ಯ ತಿಳಿಸಿದರು.

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ 1984ರಿಂದ ಒಟ್ಟು 13 ಬಡಾವಣೆಗಳಲ್ಲಿ 235-30 ಎಕರೆ ಭೂಮಿಯನ್ನು ಭೂ ಸ್ವಾಧೀನದಿಂದ ಕೈಬಿಡಲಾಗಿದೆ. ನಮ್ಮ ಕುಟುಂಬಕ್ಕೆ ಈ ಜಮೀನುಗಳು ಬರುವ ವೇಳೆಗಾಗಲೆ 2005ರಲ್ಲಿ ಭೂಪರಿವರ್ತನೆಯಾಗಿವೆ. ಕೃಷಿ ಉದ್ದೇಶದಿಂದ ವಸತಿ ಉದ್ದೇಶಕ್ಕೆ ಭೂ ಪರಿವರ್ತನೆಯಾಗಿವೆ. ಇದಾದ ಮೇಲೆ 2014ರಲ್ಲಿ ಮತ್ತು 2021ರಲ್ಲಿ ಭೂಪರಿಹಾರಕ್ಕೆ ಬದಲಾಗಿ ಪರ್ಯಾಯ ಜಾಗವನ್ನು ಕೊಡಬೇಕೆಂದು ಅರ್ಜಿ ಹಾಕಲಾಗಿದೆ.

ನನ್ನ ಪತ್ನಿ ತನ್ನ ನಿವೇಶನ, ಜಾಗ ಕೊಡಿ ಎಂದು ನನ್ನ ಜಾಗವನ್ನು ಮುಡಾ ಬಳಸಿಕೊಂಡಿದೆ. ಅದಕ್ಕೆ ಪರ್ಯಾಯ ಜಾಗ ಕೊಡಿ ಎಂದು ಕೇಳಿದ್ದಾರೆ. ಮುಡಾದವರು ಕೊಟ್ಟಿದ್ದಾರೆ. ಭೂಸ್ವಾಧೀನ ಪಡಿಸದೆ ಭೂಮಿಯನ್ನು ಉಪಯೋಗಿಸಿಕೊಂಡ ಪ್ರಕರಣಗಳಲ್ಲಿ ಹಾಗೆ ಉಪಯೋಗಿಸಲಾದ ಭೂಮಿಗೆ ಪರ್ಯಾಯವಾಗಿ ಶೇ.50:50ರ ಅನುಪಾತದಲ್ಲಿ ಜಾಗವನ್ನು ಕೊಡಬೇಕೆಂದು 2020ರಲ್ಲಿ ನಿರ್ಣಯ ಮಾಡಿದ್ದಾರೆ. ಈ ನಿರ್ಣಯವನ್ನು ಸರಕಾರ ರದ್ದು ಮಾಡಿದೆ ಎಂದು ತಿಳಿಸಿದರು.

ಇದೆಲ್ಲ ಆದ ಮೇಲೆ ನನ್ನ ಪತ್ನಿ 2021 ರಲ್ಲಿ ಮತ್ತೆ ಅರ್ಜಿ ಸಲ್ಲಿಸಿದ್ದಾರೆ. ಅದರಲ್ಲಿ, ನನ್ನ ಜಮೀನನ್ನು ಪ್ರಾಧಿಕಾರವು ಉಪಯೋಗಿಸಿಕೊಂಡಿರುವ ಬಾಬ್ತು ಇದುವರೆವಿಗೂ ಯಾವುದೇ ಪರಿಹಾರವನ್ನು ನೀಡಿರುವುದಿಲ್ಲ. ಆದ್ದರಿಂದ ನನಗೆ ಮೇಲಿನ ಜಮೀನಿಗೆ ಪರಿಹಾರವಾಗಿ ಪ್ರಸ್ತುತ ಶೇ. 50:50ರ ಅನುಪಾತದಲ್ಲಿ ಕೊಡಿ ಎಂದು ಕೇಳಿದ್ದಾರೆ. ಪ್ರಾಧಿಕಾರದವರು ಇದನ್ನೆಲ್ಲ ಪರಿಶೀಲಿಸಿ ನನ್ನ ಪತ್ನಿಯಿಂದ ಪರಿತ್ಯಾಜನ ಪತ್ರ ಬರೆಸಿಕೊಂಡು 3-16 ಗುಂಟೆ ಜಮೀನುಗಳ ಹಕ್ಕುಗಳನ್ನು ಪ್ರಾಧಿಕಾರದ ಹೆಸರಿಗೆ ವರ್ಗಾಯಿಸಿಕೊಂಡು 2021 ರಂದು ಕೆಸರೆ ಗ್ರಾಮದ ಸ.ನಂ. 464ರ 3-16 ಎಕರೆ ಜಮೀನಿಗೆ ಬದಲಿ ಜಾಗ ನೀಡುವ ಬಗ್ಗೆ ಪ್ರಾಧಿಕಾರದಿಂದ ಆಯುಕ್ತರು ಅಧಿಕೃತ ಜ್ಞಾಪನ ಆದೇಶ ಹೊರಡಿಸಿ 38,284 ಚದರ ಅಡಿ ಅಳತೆಗೆ ನಿವೇಶನಗಳನ್ನು ಪರಿಹಾರ ರೂಪದಲ್ಲಿ ಮಂಜೂರು ಮಾಡಿರುತ್ತಾರೆ ಎಂದು ತಿಳಿಸಿದರು.

ವಿಚಾರಣಾ ಆಯೋಗವು ಈ ಕುರಿತು ತನಿಖೆ ಪ್ರಾರಂಭಿಸಿದೆ. ಆದರೂ, ಉದ್ದೇಶ ಪೂರಕವಾಗಿ ಬಿಜೆಪಿ, ಜೆಡಿಎಸ್ ಮುಡಾ ವಿಚಾರದಲ್ಲಿ ನನ್ನ ವ್ಯಕ್ತಿತ್ವಕ್ಕೆ ಮಸಿ ಬಳಿಯಲು ಪ್ರಯತ್ನಿಸುತ್ತಿದ್ದಾರೆ ಎಂದು ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದರು.

ಅಲ್ಲದೆ, ಬಿಜೆಪಿಯವರಿಗೆ ಮಾನ ಮರ್ಯಾದೆ ಇದೆಯಾ?. ಹತಾಶೆಯಿಂದ ರಾಜಕೀಯ ಮಸಿ ಬಳಿಯಲು ಯತ್ನಿಸುತ್ತಿದ್ದು, ಅಮನೆ ಮುರುಕರು ಎಂದು ಬಿಜೆಪಿಯವರನ್ನು ಕರೆಯಬೇಕು. ಈವರೆಗೆ 50:50ರಡಿ 909 ನಿವೇಶನ ಹಂಚಿಕೆ ಆಗಿರುತ್ತದೆ. 109 ಬದಲಿ ನಿವೇಶನಗಳನ್ನು ಹಂಚಿಕೆ ಮಾಡಲಾಗಿದೆ. ಆ ಮೂಲಕ ಒಟ್ಟು 1,328 ನಿವೇಶನಗಳನ್ನು ಮುಡಾ ಹಂಚಿಕೆ ಮಾಡಿದೆ. ವಿಜಯನಗರ ಬಡಾವಣೆಯಲ್ಲಿ 125 ಸೈಟ್ ಗಳನ್ನು ಬೇರೆ ಬೇರೆಯವರಿಗೆ ಕೊಡಲಾಗಿತ್ತು. ಇದರಲ್ಲಿ ನನ್ನದಾಗಲಿ, ನನ್ನ ಪತ್ನಿದಾಗಲಿ ಯಾವ ಪಾತ್ರವೂ ಇಲ್ಲ. ಇದರಲ್ಲಿ ನಮ್ಮದೇನು ತಪ್ಪಿಲ್ಲ ಎಂದು ಅವರು ಉಲ್ಲೇಖಿಸಿದರು.

ನಮ್ಮಲ್ಲಿ ಅನೇಕರು ಟವೆಲ್ ಹಾಕಿದ್ದಾರೆ..!

ಮುಖ್ಯಮಂತ್ರಿ ಕುರ್ಚಿಗೆ ಟವಲ್ ಹಾಕಿದವರಿಂದಲೇ ಷಡ್ಯಂತ್ರ ಎಂಬ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿ, ನಮ್ಮಲ್ಲಿ ಸಿಎಂ ಆಗುವ ಅನೇಕ ಅರ್ಹ ವ್ಯಕ್ತಿಗಳಿದ್ದಾರೆಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಕಡೆ ಕಡೆ ಗಮನಿಸಿದ ಸಿದ್ದರಾಮಯ್ಯ, ಯಾರೆಂದು ಕುಮಾರಸ್ವಾಮಿಯನ್ನೆ ಕೇಳಿ ಎಂದು ಸೂಚ್ಯವಾಗಿ ತಿಳಿಸಿದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News