ಬೆಂಗಳೂರು | ಬಿಜೆಪಿ ನಾಯಕರ ಸುಳ್ಳು ಹೇಳಿಕೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ

Update: 2025-03-25 19:38 IST
ಬೆಂಗಳೂರು | ಬಿಜೆಪಿ ನಾಯಕರ ಸುಳ್ಳು ಹೇಳಿಕೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ
  • whatsapp icon

ಬೆಂಗಳೂರು : ಕೇಂದ್ರ ಸಚಿವ ಜೆ.ಪಿ.ನಡ್ಡಾ, ಕಿರಣ್ ರಿಜಿಜು ಸಂಸತ್‍ನಲ್ಲಿ ಸಂವಿಧಾನ ಬದಲಾವಣೆಗೆ ಡಿ.ಕೆ.ಶಿವಕುಮಾರ್ ಅವರು ಒತ್ತಾಯಿಸಿದ್ದಾರೆ ಎಂಬ ಸುಳ್ಳು ಹೇಳಿಕೆ ಖಂಡಿಸಿ ನಗರದಲ್ಲಿರುವ ಕಾಂಗ್ರೆಸ್ ಭವನದ ಗಾಂಧಿ ಪ್ರತಿಮೆ ಎದುರು ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.

ಈ ವೇಳೆ ಮಾತನಾಡಿದ ಕೆಪಿಸಿಸಿ ಪ್ರದಾನ ಕಾರ್ಯದರ್ಶಿ ಎಸ್.ಮನೋಹರ್, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಸಂವಿಧಾನವನ್ನು ಗೌರವಿಸಬೇಕು. ಸಂವಿಧಾನದ ಮೂಲಕ ನಮ್ಮ ಹಕ್ಕನ್ನು ಪಡೆಯಬೇಕೆಂದು ಸಂವಿಧಾನದ ರಕ್ಷಣೆಗೆ ಇಡೀ ರಾಜ್ಯ ವ್ಯಾಪ್ತಿ ಹೋರಾಟ ನಡೆಸುತ್ತಿದ್ದಾರೆ. ಹಾಗೂ ಹೊಸ ಹೊಸ ಕಾರ್ಯಕ್ರಮಗಳನ್ನು ರೂಪಿಸಿ ಸಂವಿಧಾನ ಉಳಿವಿಗೆ ಕಾಂಗ್ರೆಸ್ ಕಾರ್ಯಕರ್ತರೊಂದಿಗೆ ಹೋರಾಟ ನಡೆಸುತ್ತಿದ್ದಾರೆ. ಆದರೆ ಬಿಜೆಪಿಗರು ಡಿ.ಕೆ.ಶಿವಕುಮಾರ್ ನೀಡಿರುವ ಹೇಳಿಕೆಯನ್ನು ಉದ್ದೇಶಪೂರ್ವಕವಾಗಿ ದಾರಿ ತಪ್ಪಿಸುವ ಹಿನ್ನೆಲೆಯಲ್ಲಿ ಸುಳ್ಳು ಸುದ್ದಿ ಹರಡುತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸಂವಿಧಾನಕ್ಕೆ ಹಾಗೂ ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ಬಿಜೆಪಿ ನಾಯಕರು ಅಪಮಾನ ಮಾಡಿರುವ ಹಿನ್ನೆಲೆಯಲ್ಲಿ ಇವರ ವಿರುದ್ಧ ಕೂಡಲೇ ಕ್ರಮ ಕೈಗೊಳ್ಳಬೇಕೆಂದು ಲೋಕಸಭಾ ಸ್ಪೀಕರ್ ಅವರಿಗೆ ಮನವಿಯನ್ನು ಮಾಡಿಕೊಳ್ಳಲಾಗಿದೆ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಸಂವಿಧಾನವನ್ನು ದಿನನಿತ್ಯ ಸ್ಮರಿಸುವ ಕಾಂಗ್ರೆಸ್ ನಾಯಕರು ಎಂದಿಗೂ ಸಹ ಸಂವಿಧಾನವನ್ನು ವಿರೋಧಿಸುವ ಮಾತನ್ನಾಡಿಲ್ಲ ಎಂದರು.

ಕರ್ನಾಟಕದಲ್ಲಿಯೂ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಹಾಗೂ ಸುನಿಲ್ ಕುಮಾರ್ ಸಂವಿಧಾನ ಬದಲಾವಣೆಗೆ ಡಿ.ಕೆ.ಶಿವಕುಮಾರ್ ಒತ್ತಾಯಿಸಿದ್ದಾರೆ ಎಂಬ ಸುಳ್ಳು ಮಾಹಿತಿ ನೀಡಿರುವುದು ಅವರ ಸುಳ್ಳುತನ ಹಾಗೂ ಜನರನ್ನ ದಾರಿ ತಪ್ಪಿಸುವ ಹುನ್ನಾರ ಬಹಿರಂಗವಾಗಿದೆ ಎಂದು ಹೇಳಿದರು. ಇದೇ ವೇಳೆ ಬಿಜೆಪಿ ನಾಯಕರ ಪ್ರತಿಕೃತಿ ದಹಿಸಿ, ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ಕಾಂಗ್ರೆಸ್ ಮುಖಂಡರಾದ ಎ.ಆನಂದ್, ಜಿ.ಪ್ರಕಾಶ್, ಹೇಮರಾಜು, ಚಂದ್ರಶೇಖರ್, ಕೆ.ಟಿ.ನವೀನ್, ಉಮೇಶ್, ಸುಂಕದಕಟ್ಟೆ ನವೀನ್, ಕುಶಾಲ್ ಹರುವೇಗೌಡ, ಪ್ರವೀಣ್ ರಾವ್, ಓಬಳೇಶ್, ನವೀನ್ ಸಾಯಿ, ಚಿನ್ನಿ ಪ್ರಕಾಶ್ ಮತ್ತಿತರರು ಹಾಜರಿದ್ದರು.


Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News