ನೇಮಕಾತಿ ಪರೀಕ್ಷೆಗಳಲ್ಲಿನ ಭ್ರಷ್ಟ ಚಾರ ತಡೆ ನಿಬಂಧನೆ ಜಾರಿಗೊಳಿಸಲು ಪ್ರಿಯಾಂಕ್ ಖರ್ಗೆ ಒತ್ತಾಯ
ಬೆಂಗಳೂರು : ಕರ್ನಾಟಕ ಸಾರ್ವಜನಿಕ ಪರೀಕ್ಷೆ(ನೇಮಕಾತಿಯಲ್ಲಿನ ಭ್ರಷ್ಟಾಚಾರ ಮತ್ತು ಅನುಚಿತ ವಿಧಾನಗಳ ಪ್ರತಿಬಂಧಕ ಕ್ರಮಗಳು)ಅಧಿನಿಯಮ, 2023ರ ನಿಬಂಧನೆಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ನೇಮಕಾತಿ ಮತ್ತು ಪರೀಕ್ಷಾ ಪ್ರಾಧಿಕಾರ ಹಾಗೂ ಕಾನೂನು ಜಾರಿ ಸಂಸ್ಥೆಗಳಿಗೆ ನಿರ್ದೇಶನ ನೀಡಬೇಕು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಒತ್ತಾಯಿಸಿದ್ದಾರೆ.
ಶುಕ್ರವಾರ ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ಅವರು, ಅಧಿನಿಯಮದ ನಿಬಂಧನೆಗಳು ಮತ್ತು ಅವುಗಳನ್ನು ಪಾಲಿಸುವ ಮಹತ್ವದ ಬಗ್ಗೆ ಸಿಬ್ಬಂದಿ ಮತ್ತು ಪರೀಕ್ಷಾರ್ಥಿಗಳು ಸೇರಿದಂತೆ ಎಲ್ಲ ಪಾಲುದಾರರಿಗೆ ಅರಿವು ಮೂಡಿಸಲು ಅಭಿಯಾನ ಪ್ರಾರಂಭಿಸಬೇಕು. ಅಧಿನಿಯಮದ ನಿಬಂಧನೆಗಳಿಗೆ ಹೊಂದಿಕೊಂಡಂತೆ ಮೇಲ್ವಿಚಾರಣೆ ಮಾಡಬೇಕು ಎಂದಿದ್ದಾರೆ.
ಪರೀಕ್ಷೆಗಳ ಸಮಯದಲ್ಲಿ ಅಕ್ರಮಗಳನ್ನು ಪತ್ತೆಹಚ್ಚಲು ಮತ್ತು ತಡೆಯಲು ಬಲವಾದ ಮೇಲ್ವಿಚಾರಣಾ ವ್ಯವಸ್ಥೆಗಳನ್ನು ಸ್ಥಾಪಿಸಬೇಕು. ಶಂಕಿತ ಉಲ್ಲಂಘನೆಗಳನ್ನು ತ್ವರಿತವಾಗಿ ವರದಿ ಮಾಡಲು ಹಾಗೂ ಎಲ್ಲ ವರದಿಗಳನ್ನು ಗಂಭೀರವಾಗಿ ಪರಿಗಣಿಸಬೇಕು. ಪ್ರತಿ ಇಲಾಖೆಯೊಳಗಿನ ಪರೀಕ್ಷಾ ಪ್ರಕ್ರಿಯೆಗಳ ಕುರಿತು ಕಾಲಕಾಲಕ್ಕೆ ಮೌಲ್ಯಮಾಪನ ಮಾಡಿ ವಿಮರ್ಶಿಸುವ ಪ್ರಕ್ರಿಯೆಗಳನ್ನು ಜಾರಿಗೊಳಿಸಬೇಕು ಎಂದು ಸಚಿವರು ಹೇಳಿದ್ದಾರೆ.
ಅಧಿನಿಯಮದ ನಿಬಂಧನೆಗಳನ್ನು ಜಾರಿಗೊಳಿಸುವಲ್ಲಿ ಪೊಲೀಸ್ ಇಲಾಖೆಯು ಪ್ರಮುಖ ಪಾತ್ರ ವಹಿಸಬೇಕಾಗಿರುತ್ತದೆ. ಪರೀಕ್ಷಾ ಕೇಂದ್ರಗಳಲ್ಲಿ ಸಮನ್ವಯ ಸಾಧಿಸಲು, ಕಣ್ಗಾವಲು ಮತ್ತು ಮೇಲ್ವಿಚಾರಣೆಗೆ ಸಹಕರಿಸಲು ಹಾಗೂ ಯಾವುದೇ ವರದಿಯಾದ ಉಲ್ಲಂಘನೆಗಳ ಬಗ್ಗೆ ಸಮಗ್ರ ತನಿಖೆ ನಡೆಸಿ ಅಪರಾಧಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲು ಸೂಚಿಸಬೇಕು ಎಂದು ಅವರು ಪತ್ರದಲ್ಲಿ ಬರೆದಿದ್ದಾರೆ.
ಅಧಿನಿಯಮವು 2025ರ ಫೆ.27 ರಿಂದ ಜಾರಿಗೆ ಬಂದಿದ್ದು, ನೇಮಕಾತಿ ಪ್ರಕ್ರಿಯೆಯಲ್ಲಿ ಪಾರದರ್ಶಕತೆ, ನ್ಯಾಯಸಮ್ಮತತೆ ಮತ್ತು ಸಮಗ್ರತೆಯನ್ನು ಎತ್ತಿಹಿಡಿಯಲು ಸ್ಥಾಪಿಸಲಾಗಿದೆ. ಇದು ಸಾರ್ವಜನಿಕ ನಂಬಿಕೆಯನ್ನು ಕಾಪಾಡಿಕೊಳ್ಳಲು ಮತ್ತು ಎಲ್ಲ ಅಭ್ಯರ್ಥಿಗಳಿಗೆ ಸಮಾನ ಅವಕಾಶಗಳನ್ನು ಒದಗಿಸಲು ನಿರ್ಣಾಯಕವಾಗಲಿದೆ ಎಂದು ಅವರು ತಿಳಿಸಿದ್ದಾರೆ.
ಪತ್ರದಲ್ಲಿ ವಿವರಿಸಿರುವ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳುವ ಮೂಲಕ, ರಾಜ್ಯ ಸರಕಾರವು ನೇಮಕಾತಿ ಪ್ರಕ್ರಿಯೆಗಳಲ್ಲಿ ಗಮನಾರ್ಹವಾದ ಬದಲಾವಣೆಯನ್ನು ತರಬಹುದು ಎಂದು ಪ್ರಿಯಾಂಕ್ ಖರ್ಗೆ ಮುಖ್ಯ ಕಾರ್ಯದರ್ಶಿಗಳಿಗೆ ಬರೆದಿರುವ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.