ʼಡಾ.ಸರೋಜಿನಿ ಮಹಿಷಿ ಪರಿಷ್ಕೃತ ವರದಿಗೆ ಕಾನೂನು ಬೆಂಬಲ ನೀಡಿʼ : ಸಿಎಂಗೆ ಪುರುಷೋತ್ತಮ ಬಿಳಿಮಲೆ ಒತ್ತಾಯ

Update: 2024-09-19 11:26 GMT

ಬೆಂಗಳೂರು : ಕನ್ನಡ ಅಭಿವೃದ್ಧಿ ಪ್ರಾಧಿಕಾರವು ಸರಕಾರಕ್ಕೆ ಸಲ್ಲಿಸಿರುವ ಡಾ.ಸರೋಜಿನಿ ಮಹಿಷಿ ಪರಿಷ್ಕೃತ ವರದಿಗೆ ಶೀಘ್ರವಾಗಿ ಕಾನೂನು ಬಲ ದೊರಕಿಸಲು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಡಾ.ಪುರುಷೋತ್ತಮ ಬಿಳಿಮಲೆ ರಾಜ್ಯ ಸರಕಾರವನ್ನು ಆಗ್ರಹಿಸಿದ್ದಾರೆ.

ಗುರುವಾರ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಡಾ.ಪುರುಷೋತ್ತಮ ಬಿಳಿಮಲೆ ಅವರು, ಕನ್ನಡ ಅಭಿವೃದ್ಧಿ ಪ್ರಾಧಿಕಾರವು ಇಂದಿನ ಜಾಗತೀಕರಣ ಕಾಲಘಟ್ಟಕ್ಕೆ ಅನುಗುಣವಾದ ಕನ್ನಡ ಪರ ವರದಿಯನ್ನು ಸರಕಾರಕ್ಕೆ ಸಲ್ಲಿಸಿದ್ದು ಕನ್ನಡದ ಉಳಿವಿನ ದೃಷ್ಠಿಯಿಂದ ಇದು ಮಹತ್ವದ ವರದಿಯಾಗಿದೆ ಎಂದಿದ್ದಾರೆ.

ಈ ವರದಿಯಲ್ಲಿ ಖಾಸಗಿ ವಲಯದ ವಿವಿಧ ವರ್ಗಗಳ ಹುದ್ದೆಗಳಲ್ಲಿ ಕನ್ನಡಿಗರಿಗೆ ಆದ್ಯತೆ, ರಾಜ್ಯದಲ್ಲಿ ವ್ಯವಹರಿಸುವ ಬ್ಯಾಂಕುಗಳಲ್ಲಿ ನೇಮಕ ಹೊಂದುವ ಅಭ್ಯರ್ಥಿಗಳಿಗೆ ಕನ್ನಡದ ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ಷರತ್ತು, ಸರಕಾರಿ ವಲಯದ ಉದ್ಯಮಗಳಲ್ಲಿ ಕನ್ನಡಿಗರ ಆದ್ಯತೆಯ ಆಯ್ಕೆ, ಅಪ್ರೆಂಟಿಸ್ ಆಯ್ಕೆಯಲ್ಲಿ ಕಾರ್ಮಿಕರ, ಗುತ್ತಿಗೆ, ದಿನಗೂಲಿ ನೌಕರರ ನೇಮಕಾತಿಗಳಲ್ಲಿ ಕೇವಲ ಕನ್ನಡಿಗರಿಗೆ ಅವಕಾಶ, ತಂತ್ರಜ್ಞಾನ ಬೆಳವಣಿಗೆಗೆ ಅನುಗುಣವಾಗಿ ಉದ್ಯೋಗ ತರಬೇತಿಗೆ ಪ್ರತ್ಯೇಕ ತಾಂತ್ರಿಕ ಸಲಹಾ ಮಂಡಳಿ ಸ್ಥಾಪನೆ, ನಾಮಫಲಕಗಳಲ್ಲಿ ಕನ್ನಡಕ್ಕೆ ಮೊದಲ ಆದ್ಯತೆ, ಕೇಂದ್ರ ಪಠ್ಯಕ್ರಮ ಶಿಕ್ಷಣದಲ್ಲಿ 1 ರಿಂದ10ನೇ ತರಗತಿಯವರೆಗೆ ಕನ್ನಡ ಬೋಧನೆಯನ್ನು ಕಡ್ಡಾಯಗೊಳಿಸುವಿಕೆ ಸೇರಿದಂತೆ ಒಟ್ಟು 14 ಅನುಷ್ಠಾನ ಯೋಗ್ಯ ಅಂಶಗಳಿವೆ. ಮುಂದಿನ ಅಧಿವೇಶನದಲ್ಲಿ ಪ್ರಾಧಿಕಾರದ ವರದಿಯನ್ನು ಮಂಡಿಸಿ ರಾಜ್ಯ ಸರಕಾರದ ಕನ್ನಡ ಬದ್ಧತೆಯನ್ನು ಸ್ಥಿರೀಕರಿಸಬೇಕೆಂದು ಡಾ.ಬಿಳಿಮಲೆ ಮುಖ್ಯಮಂತ್ರಿಯವರನ್ನು ಆಗ್ರಹಿಸಿದ್ದಾರೆ.

ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರಾದ ಶಿವರಾಜ ತಂಗಡಗಿ ಮತ್ತು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಡಾ.ಸಂತೋಷ ಹಾನಗಲ್ಲ ಮತ್ತಿತರರು ಇದ್ದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News