ಲೈಂಗಿಕ ದೌರ್ಜನ್ಯ ಪ್ರಕರಣ | ಪ್ರಜ್ವಲ್ ರೇವಣ್ಣಗೆ 14 ದಿನಗಳ ನ್ಯಾಯಾಂಗ ಬಂಧನ

Update: 2024-06-18 15:48 GMT

ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿ, ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ನಗರದ 42ನೆ ಎಸಿಎಂಎಂ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ಮಂಗಳವಾರ ಆದೇಶ ಹೊರಡಿಸಿದೆ.

ಪ್ರಜ್ವಲ್ ರೇವಣ್ಣ ಅವರ ಎಸ್‍ಐಟಿ ಕಸ್ಟಡಿ ಅವಧಿ ಮಂಗಳವಾರ ಅಂತ್ಯಗೊಂಡ ಹಿನ್ನೆಲೆಯಲ್ಲಿ ಪೊಲೀಸರು ಅವರನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿ ಹೆಚ್ಚಿನ ವಿಚಾರಣೆಗೆ ವಶಕ್ಕೆ ನೀಡಬೇಕೆಂದು ಮಾಡಿದ ಮನವಿಯನ್ನು ನಿರಾಕರಿಸಿದ ನ್ಯಾಯಾಲಯ ಅವರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶಿಸಿದೆ.

ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಕ ದೌರ್ಜನ್ಯ ಪ್ರಕರಣದ ತನಿಖೆಗೆ ಸರಕಾರ ಎಸ್‍ಐಟಿ ರಚನೆ ಮಾಡಿತ್ತು. ಅವರನ್ನು ವಶಕ್ಕೆ ಪಡೆದ ಎಸ್‍ಐಟಿ ನ್ಯಾಯಾಲಯದ ಮುಂದೆ ಹಾಜರುಪಡಿಸಿ ಹೆಚ್ಚಿನ ವಿಚಾರಣೆಗೆ ವಶಕ್ಕೆ ಪಡೆದಿತ್ತು.

ಎರಡು ಪ್ರಕರಣದಲ್ಲಿ ಮಹಜರು ಪ್ರಕ್ರಿಯೆ ಪೂರ್ಣಗೊಳಿಸಿರುವ ಪೊಲೀಸರು ಮಂಗಳವಾರ ಮತ್ತೆ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದರು. ಹೊಳೆನರಸೀಪುರದಲ್ಲಿ ಪ್ರಜ್ವಲ್ ವಿರುದ್ಧ ದಾಖಲಾಗಿರುವ ಎರಡು ಪ್ರಕರಣಗಳಲ್ಲಿ ವಿಚಾರಣೆಯನ್ನು ಅಂತ್ಯಗೊಳಿಸಿರುವ ಎಸ್‍ಐಟಿ ಮತ್ತೊಂದು ಪ್ರಕರಣದಲ್ಲಿ ವಿಚಾರಣೆ ನಡೆಸಲು ಪೊಲೀಸ್ ಕಸ್ಟಡಿಗೆ ನೀಡಬೇಕೆಂದು ಸರಕಾರದ ಪರ ವಕೀಲರು ಮನವಿ ಮಾಡಿದರು.

ವಾದ-ಪ್ರತಿವಾದ ಆಲಿಸಿದ ನ್ಯಾಯಾಧೀಶರು ಪ್ರಜ್ವಲ್ ಅವರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದರು. ಮೂರನೇ ಪ್ರಕರಣದ ವಿಚಾರಣೆಗೆ ಸಂಬಂಧಿಸಿದಂತೆ ಬಾಡಿ ವಾರಂಟ್ ಪಡೆಯಲು ಅರ್ಜಿ ಸಲ್ಲಿಸಲು ನ್ಯಾಯಾಲಯ ಸೂಚಿಸಿತು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News