ಒತ್ತುವರಿ ತೆರವುಗೊಳಿಸಲು ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ

Update: 2025-04-22 22:35 IST
ಒತ್ತುವರಿ ತೆರವುಗೊಳಿಸಲು ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ
  • whatsapp icon

ಬೆಂಗಳೂರು : ‘ರಾಜ್ಯದಲ್ಲಿ ಖಾಸಗಿಯವರಿಂದ ಒತ್ತುವರಿಯಾಗಿರುವ ಪ್ರದೇಶವನ್ನು ಯಾವುದೇ ಮುಲಾಜಿಲ್ಲದೆ ತೆರವುಗೊಳಿಸಬೇಕು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿಲ್ಲಿ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

ಮಂಗಳವಾರ ಸಿಎಂ ನಿವಾಸ ಕಾವೇರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಕರ್ನಾಟಕ ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಧಿಕಾರದ ಸಭೆಯ ಬಳಿಕ ಮಾತನಾಡಿದ ಅವರು, ‘ರಾಜ್ಯದಲ್ಲಿ ಒಟ್ಟು ವಿವಿಧ ಇಲಾಖೆಗಳ ವ್ಯಾಪ್ತಿಯಲ್ಲಿ ಅಂದಾಜು 10,710 ಕೆರೆಗಳ ಅಳತೆ ಬಾಕಿ ಇದ್ದು ಎರಡು ತಿಂಗಳ ಒಳಗೆ ಸರ್ವೇ ಕಾರ್ಯ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದು ಅಭಿವೃದ್ಧಿ ಆಯುಕ್ತರಿಗೆ ಸೂಚಿಸಿದರು.

ಗ್ರಾಮೀಣಾಭಿವೃದ್ಧಿ, ಸಣ್ಣ ನೀರಾವರಿ ಇಲಾಖೆ ಸೇರಿದಂತೆ ವಿವಿಧ ಇಲಾಖಾವಾರು ವ್ಯಾಪ್ತಿಗೆ ಬರುವ ಕೆರೆಗಳ ಸರ್ವೆ ಕಾರ್ಯ, ಒತ್ತುವರಿ ತೆರವುಗೊಳಿಸಿರುವ ಹಾಗೂ ತೆರವಿಗೆ ಬಾಕಿ ಇರುವ ಕೆರೆಗಳ ಮಾಹಿತಿ ಪಡೆದರು. ಗ್ರಾಮೀಣಾಭಿವೃದ್ಧಿ, ಸಣ್ಣ ನೀರಾವರಿ, ಬಿಬಿಎಂಪಿ, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ, ಬೃಹತ್ ನೀರಾವರಿ ಇಲಾಖೆ, ಅರಣ್ಯ, ಕಂದಾಯ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ರಾಜ್ಯದಲ್ಲಿರುವ 41,875 ಕೆರೆಗಳ ಪೈಕಿ 31,033 ಕೆರೆಗಳು ಅಳತೆ ಯಾಗಿವೆ. 11,212 ಒತ್ತುವರಿ ಗುರುತಿಸಲಾಗಿದೆ. 5 967 ಕೆರೆಗಳ ಒತ್ತುವರಿ ತೆರವು ಗೊಳಿಸಲಾಗಿದೆ. ಸುಮಾರು 5245 ಕೆರೆಗಳು ತೆರವು ಗೊಳಿಸಲು ಬಾಕಿ ಇವೆ ಎಂದು ಅಧಿಕಾರಿಗಳು, ಸಿಎಂಗೆ ಮಾಹಿತಿ ನೀಡಿದರು.

ಸಣ್ಣ ನೀರಾವರಿ ಇಲಾಖೆಗೆ ಸಂಬಂಧಿಸಿದಂತೆ ಒಟ್ಟು 3778 ಕೆರೆಗಳಿದ್ದು, 166 ಕೆರೆಗಳ ಒತ್ತುವರಿ ತೆರವು ಕಾರ್ಯ ಬಾಕಿ ಇದೆ. ಬೆಂಗಳೂರು ಮಹಾ ನಗರ ಪಾಲಿಕೆ ವ್ಯಾಪ್ತಿಯಲ್ಲಿ 202 ಕೆರೆಗಳಿದ್ದು 167 ಕೆರೆಗಳು ಅಳತೆ ಯಾಗಿವೆ. ಸುಮಾರು 96 ಕೆರೆಗಳ ಒತ್ತುವರಿ ತೆರವು ಬಾಕಿ ಇದೆ. ಕೆರೆಗಳ ಮಲೀನವಾಗದಂತೆ ತಡೆಯಲು ಸಂಸ್ಕರಣಾ ಘಟಕಗಳನ್ನು ಸ್ಥಾಪಿಸಲು ಕಾರ್ಯ ಯೋಜನೆ ಸಿದ್ಧಪಡಿಸಿ ಪ್ರಸ್ತಾವನೆ ಸಲ್ಲಿಸಬೇಕು ಎಂದು ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳಿಗೆ ಸಿಎಂ ಸೂಚಿಸಿದರು.

ಕೆರೆಗಳಲ್ಲಿ ಮೀನುಗಾರಿಕೆ ಚಟುವಟಿಕೆಗಳಿಂದ ಆದಾಯ ಗಳಿಸಲು ಸಾಧ್ಯವಾಗುವಂತೆ ಆನ್‍ಲೈನ್ ಟೆಂಡರ್ ಕರೆಯಲು ಸಭೆಯಲ್ಲಿ ಹಾಜರಿದ್ದ ಮೀನುಗಾರಿಕೆ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು. ಕೆರೆಗಳ ಸುತ್ತ ಬಫರ್ ಜೋನ್ ಅನ್ನು ನಿಗದಿ ಪಡಿಸಲು ತಾಂತ್ರಿಕ ಸಮಿತಿ ರಚಿಸಬೇಕು ಎಂದು ಸಿದ್ದರಾಮಯ್ಯ, ಅಧಿಕಾರಿಗಳಿಗೆ ಸೂಚಿಸಿದರು.

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಬೈರತಿ ಸುರೇಶ್, ಕೆ.ಎನ್.ರಾಜಣ್ಣ, ಭೋಸರಾಜು, ಮಂಕಾಳ ವೈದ್ಯ, ರಹೀಂ ಖಾನ್, ಸಿಎಂ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್, ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್, ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ ಸೇರಿದಂತೆ ಸಂಬಂಧಿಸಿದ ಇಲಾಖೆಗಳ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News