ರಾಜ್ಯ ರಾಜಕೀಯದಲ್ಲಿ ಕುತೂಹಲಕ್ಕೆ ಕಾರಣವಾದ ಆಡಳಿತ-ಪ್ರತಿಪಕ್ಷ ಶಾಸಕರ ಔತಣಕೂಟ

ಬೆಂಗಳೂರು : ವಿಧಾನ ಮಂಡಲ ಅಧಿವೇಶನ ನಡೆಯುತ್ತಿರುವ ಸಂದರ್ಭದಲ್ಲೇ ಮೊದಲ ಬಾರಿಗೆ ಆಯ್ಕೆಯಾಗಿರುವ ಆಡಳಿತಾರೂಢ ಕಾಂಗ್ರೆಸ್ ಹಾಗೂ ಪ್ರತಿಪಕ್ಷ ಜೆಡಿಎಸ್-ಬಿಜೆಪಿ ಶಾಸಕರ ಔತಣಕೂಟ ನಡೆಸಿರುವುದು ರಾಜಕೀಯ ವಲಯದಲ್ಲಿ ತೀವ್ರ ಕುತೂಹಲಕ್ಕೆ ಕಾರಣವಾಗಿದೆ.
ಪ್ರಮುಖ ರಾಜಕೀಯ ಪಕ್ಷಗಳ 60ಕ್ಕೂ ಹೆಚು ಮಂದಿ ಲಿಂಗಾಯತ ಹಾಗೂ ಒಕ್ಕಲಿಗ ಸಮುದಾಯ ಶಾಸಕರೇ ಸಭೆಯಲ್ಲಿ ಪಾಲ್ಗೊಂಡಿದ್ದರು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹಾಗೂ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಔತಣಕೂಟದಲ್ಲಿ ಭಾಗವಹಿಸಿದ್ದರು ಎಂದು ಹೇಳಲಾಗಿದೆ. ಔತಣಕೂಟದ ನೆಪದಲ್ಲಿ ಸಭೆ ನಡೆಸಿದ್ದು, ರಾಜ್ಯ ರಾಜಕೀಯದಲ್ಲಿ ಅಲ್ಲೋಲ-ಕಲ್ಲೋಲವನ್ನೇ ಸೃಷ್ಟಿಸಿದೆ.
ಔತಣಕೂಟದ ಬಗ್ಗೆ ಕಾಂಗ್ರೆಸ್ ಪಕ್ಷದ ಶಾಸಕ ರವಿ ಗಣಿಗ ಮಾತನಾಡಿ, ಹೊಸದಾಗಿ ಆಯ್ಕೆಯಾಗಿರುವ ಶಾಸಕರೆಲ್ಲರೂ ಸೇರಿ ಒಟ್ಟಿಗೆ ಊಟ ಮಾಡಿದ್ದೇವೆ. ಸಹಜವಾಗಿಯೇ ಎಲ್ಲರೂ ಒಟ್ಟಿಗೆ ಸೇರಿದ್ದ ಹಿನ್ನೆಲೆಯಲ್ಲಿ ಪ್ರಸಕ್ತ ರಾಜಕೀಯ ವಿಆರಗಳ ಬಗ್ಗೆಯೂ ಚರ್ಚಿಸಿದ್ದೇವೆ. ಇದರಲ್ಲಿ ಯಾವುದೇ ವಿಶೇಷವೇನೂ ಇಲ್ಲ ಎಂದು ಸ್ಪಷ್ಟಣೆ ನೀಡಿದರು.
ನಮ್ಮ ಸಭೆಯೂ ಪಕ್ಷಾತೀತವಾಗಿ ನಡೆದಿದ್ದು, ಇದರಲ್ಲಿ ಯಾವುದೇ ರಾಜಕೀಯ ಉದ್ದೇಶವಿಲ್ಲ. ಇನ್ನು ಮುಂದೆ ಸಭೆ ನಡೆಯುವ ವೇಳೆ ನಿಮ್ಮನ್ನು(ಮಾಧ್ಯಮ ಪ್ರತಿನಿಧಿಗಳನ್ನು) ಆಹ್ವಾನಿಸುತ್ತೇವೆ. ನಿಮ್ಮ ಕ್ಯಾಮರ ಹೊರಗಿಟ್ಟು ನೀವೂ ಭಾಗಿಯಾದರೆ ನಾವು ಯಾವ ಉದ್ದೇಶಕ್ಕೆ ಸೇರಿದ್ದೇವೆಂಬುದು ನಿಮಗೆ ತಿಳಿಯುತ್ತದೆ ಎಂದು ರವಿ ಗಣಿಗ ವಿವರಣೆ ನೀಡಿದರು.