'ಪಿಯುಸಿ ಫಲಿತಾಂಶ ಉತ್ತಮಗೊಳಿಸಲು ಇನ್ನೂ ಎರಡು ಅವಕಾಶವಿದೆ; ಸಿಇಟಿ ಮಿಸ್ ಮಾಡ್ಕೊಬೇಡಿ'

Update: 2025-04-12 12:13 IST
ಪಿಯುಸಿ ಫಲಿತಾಂಶ ಉತ್ತಮಗೊಳಿಸಲು ಇನ್ನೂ ಎರಡು ಅವಕಾಶವಿದೆ; ಸಿಇಟಿ ಮಿಸ್ ಮಾಡ್ಕೊಬೇಡಿ
  • whatsapp icon

ಬೆಂಗಳೂರು: ದ್ವಿತೀಯ ಪಿಯುಸಿಯ ಮೊದಲನೇ ಪರೀಕ್ಷೆಯಲ್ಲಿ ನಿಗದಿತ ಅರ್ಹತೆ ಗಳಿಸದ ಅಥವಾ ಅನುತ್ತೀರ್ಣರಾಗಿರುವ ಅಭ್ಯರ್ಥಿಗಳು 2 ಮತ್ತು 3ನೇ ಪರೀಕ್ಷೆಯಲ್ಲಿ ಅರ್ಹತೆ ಪಡೆಯಲು ಅವಕಾಶ ಇರುವ ಕಾರಣ, ಯಾರೆಲ್ಲ ಶುಲ್ಕ ಕಟ್ಟಿ ಅರ್ಜಿ ಸಲ್ಲಿಸಿದ್ದೀರೊ ಅವರೆಲ್ಲರೂ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ)ಗೆ ಹಾಜರಾಗಿ ಪರೀಕ್ಷೆ ಬರೆಯಬೇಕು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ)ದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಸಲಹೆ ನೀಡಿದ್ದಾರೆ.

ಹೊರನಾಡು ಕನ್ನಡಿಗರಿಗೆ ಎ.15ರಂದು ಕನ್ನಡ ಹಾಗೂ 16 ಮತ್ತು 17ರಂದು ವಿಜ್ಞಾನ ವಿಷಯಗಳಿಗೆ ಸಿಇಟಿ ನಡೆಯುಲಿದ್ದು, ಪ್ರಾಧಿಕಾರ ಸಕಲ ರೀತಿಯ ತಯಾರಿ ನಡೆಸಿದೆ. ದ್ವಿತೀಯ ಪಿಯುಸಿಯ ಮೊದಲನೇ ಪರೀಕ್ಷೆಯಲ್ಲಿ ಅಂಕ ಕಡಿಮೆ ಬಂದಿದೆ ಎಂದು ಸಿಇಟಿ ಪರೀಕ್ಷೆ ಬರೆಯದೆ ಕೈಚೆಲ್ಲವುದು ಸರಿಯಲ್ಲ. ದ್ವಿತೀಯ ಪಿಯುಸಿಯ ಎರಡನೇ ಮತ್ತು ಮೂರನೇ ಪರೀಕ್ಷೆ ಬರೆಯುವುದಕ್ಕೂ ಅವಕಾಶ ಇದ್ದು, ಅಲ್ಲಿ ತಮ್ಮ ಫಲಿತಾಂಶವನ್ನು ಉತ್ತಮಪಡಿಸಿಕೊಳ್ಳಬಹುದು. ಸಿಇಟಿ ಬರೆದಿದ್ದರೆ ಮಾತ್ರ ಪಿಯುಸಿಯ 3ನೇ ಪರೀಕ್ಷೆಯಲ್ಲಿ ಅರ್ಹರಾದವರಿಗೂ ಸಿಇಟಿ ರಾಂಕ್ (Rank) ಕೊಟ್ಟು, ವೃತ್ತಿಪರ ಕೋರ್ಸ್ಗಳ ಪ್ರವೇಶಕ್ಕೆ ಅವಕಾಶ ಮಾಡಬಹುದು. ಆದರೆ ಸಿಇಟಿಯೇ ಬರೆಯದಿದ್ದರೆ ರಾಂಕ್ ಗೆ ಪರಿಗಣಿಸಲು ಆ ಸಂದರ್ಭದಲ್ಲಿ ಸಾಧ್ಯ ಇರುವುದಿಲ್ಲ ಎಂದು ಅವರು ಎಚ್ಚರಿಸಿದ್ದಾರೆ.

ಕಳೆದ ವರ್ಷ ಕೂಡ 3ನೇ ಪರೀಕ್ಷೆಯಲ್ಲಿ ಅರ್ಹತೆಯಾದ ಆನೇಕರಿಗೆ ರಾಂಕ್ ಕೊಟ್ಟು, ಪ್ರವೇಶಕ್ಕೆ ವ್ಯವಸ್ಥೆ ಮಾಡಲಾಗಿದೆ. ಹೀಗಾಗಿ ಸಿಇಟಿ ಪರೀಕ್ಷೆಯನ್ನು ಯಾವುದೇ ಕಾರಣಕ್ಕೂ ತಪ್ಪಿಸಿಕೊಳ್ಳಬೇಡಿ. ಸಿಇಟಿ ಪರೀಕ್ಷೆ ಒಮ್ಮೆ ಮಾತ್ರ ನಡೆಸುವುದರಿಂದ ಅದನ್ನು ತಪ್ಪದೇ ಬರೆಯಬೇಕು ಎಂದು ಅವರು ಸಲಹೆ ನೀಡಿದ್ದಾರೆ.

ಈ ವರ್ಷ 3.3 ಲಕ್ಷ ಅಭ್ಯರ್ಥಿಗಳು ಸಿಇಟಿ ಬರೆಯಲು ಶುಲ್ಕ ಪಾವತಿಸಿದ್ದು, ಅವರಲ್ಲಿ ಇದುವರೆಗೂ 2.85 ಲಕ್ಷ ಮಂದಿ ತಮ್ಮ ಪ್ರವೇಶ ಪತ್ರಗಳನ್ನು ಡೌನ್ ಲೋಡ್ ಮಾಡಿಕೊಂಡಿದ್ದಾರೆ. ಇನ್ನೂ ಸುಮಾರು 45 ಸಾವಿರ ಮಂದಿ ಡೌನ್ ಲೋಡ್ ಮಾಡಿಕೊಳ್ಳಬೇಕಾಗಿದೆ ಎಂದು ಅವರು ತಿಳಿಸಿದ್ದಾರೆ.

ಈ ವಿಷಯದಲ್ಲಿ ಪೋಷಕರು ಕೂಡ ಎಚ್ಚರ ವಹಿಸಬೇಕು. ಫಲಿತಾಂಶವನ್ನು ಉತ್ತಮ ಪಡಿಸಿಕೊಳ್ಳಲು ಸರಕಾರ ಇನ್ನೂ ಎರಡು ಅವಕಾಶ ನೀಡುತ್ತಿದೆ. ಹೀಗಾಗಿ ಒಮ್ಮೆ ಮಾತ್ರ ನಡೆಯುವ ಸಿಇಟಿ ಪರೀಕ್ಷೆಯಿಂದ ಯಾರೂ ವಿಮುಖರಾಗುವುದು ಬೇಡ ಎಂದೂ ಪ್ರಸನ್ನ ಹಿತವಚನ ನೀಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Haneef

contributor

Byline - ವಾರ್ತಾಭಾರತಿ

contributor

Similar News