ಮುಚ್ಚುವ ನಿರ್ಧಾರ ಕೈಬಿಟ್ಟು ಹೊಸ ವಿವಿಗಳಿಗೆ ಅನುದಾನ ಕೊಡಿ : ವಿಜಯೇಂದ್ರ ಒತ್ತಾಯ

Update: 2025-02-16 18:15 IST
Photo of B.Y.Vijayendra

ಬಿ.ವೈ.ವಿಜಯೇಂದ್ರ 

  • whatsapp icon

ಬೆಂಗಳೂರು : ರಾಜ್ಯದ ಹೊಸ ವಿವಿಗಳನ್ನು ಮುಚ್ಚಲು ಮುಂದಾಗಿರುವ ಸರಕಾರ ತನ್ನ ಈ ನಿರ್ಧಾರವನ್ನು ಕೈಬಿಟ್ಟು ಈ ಒಂಭತ್ತು ವಿಶ್ವವಿದ್ಯಾನಿಲಯಗಳ ಅಸ್ತಿತ್ವವನ್ನು ಉಳಿಸಿ ಅಭಿವೃದ್ಧಿಗೆ ಸೂಕ್ತ ಅನುದಾನ ಬಿಡುಗಡೆ ಮಾಡಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಒತ್ತಾಯಿಸಿದ್ದಾರೆ.

ರವಿವಾರ ಎಕ್ಸ್‌ ನಲ್ಲಿ ಪೋಸ್ಟ್ ಹಾಕಿರುವ ಅವರು, ಬಿಜೆಪಿ ಅವಧಿಯಲ್ಲಿ ಪದವಿ ಹಾಗೂ ಸ್ನಾತಕೋತ್ತರ ಶಿಕ್ಷಣ ಪಡೆಯಲು ಸಂಕಷ್ಟ ಎದುರಿಸುತ್ತಿದ್ದ ವಿವಿಧ ಪ್ರದೇಶಗಳ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ತೆರೆಯಲಾಗಿದ್ದ ಹಾಸನ, ಚಾಮರಾಜನಗರ, ಹಾವೇರಿ, ಕೊಡಗು, ಕೊಪ್ಪಳ, ಬಾಗಲಕೋಟೆ, ಮಂಡ್ಯ, ಮಹರಾಣಿ ಕ್ಲಸ್ಟರ್, ನೃಪತುಂಗ ಸೇರಿದಂತೆ ಇತರ ಹಿಂದುಳಿದ ಪ್ರದೇಶಗಳ ವಿವಿಗಳನ್ನು ಮುಚ್ಚಿಸಲು ಹೊರಟಿರುವ ಕಾಂಗ್ರೆಸ್ ಸರಕಾರದ ಕ್ರಮದ ಹಿಂದಿನ ಯೋಚನೆ ಶಿಕ್ಷಣ ವಿರೋಧಿ ನೀತಿಯ ವಿಕೃತ ನಡೆ ಎಂದು ಟೀಕಿಸಿದ್ದಾರೆ.

ಕಾಂಗ್ರೆಸ್ ಸರಕಾರ ‘ಜ್ಞಾನ ಗಂಗೆಯ ಆಲಯಗಳನ್ನು ಬರಿದು ಮಾಡಿ ಅಕ್ಷರ ದೀವಿಗೆಯನ್ನು ನಂದಿಸಲು ಹೊರಟಿದೆ’. 9 ವಿವಿಗಳಿಗೆ ಬೀಗ ಜಡಿಯಲು ಹೊರಟು ಬಡ ಹಾಗೂ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳ ಪಾಲಿನ ಶಿಕ್ಷಣ ಭಾಗ್ಯ ಕಸಿಯಲು ಹೊರಟಿರುವ ಸರಕಾರದ ನಿರ್ಧಾರ ಅವಿವೇಕತನದ ಪರಮಾವಧಿಯಾಗಿದೆ ಎಂದು ಅವರು ವಾಗ್ದಾಳಿ ನಡೆಸಿದ್ದಾರೆ.

ದೂರದೃಷ್ಟಿ ಹಾಗೂ ಉನ್ನತ ಶಿಕ್ಷಣದ ಹಕ್ಕು ಪ್ರತಿಯೊಬ್ಬ ವಿದ್ಯಾರ್ಥಿಗೆ ಸುಲಭವಾಗಿ ದೊರೆಯಬೇಕು ಎಂಬ ಮಹತ್ವದ ಉದ್ದೇಶದಿಂದ 9 ವಿವಿಗಳನ್ನು ಬಿಜೆಪಿ ಸರಕಾರ ಅಸ್ತಿತ್ವಕ್ಕೆ ತಂದಿತ್ತು, ಇವುಗಳ ಅಭಿವೃದ್ಧಿಗಾಗಿ ಮೀಸಲಿರಿಸಬೇಕಾಗಿದ್ದ ಹಣವನ್ನು ಗ್ಯಾರಂಟಿಗಳಿಗೆ ವಿನಿಯೋಗಿಸಿಕೊಳ್ಳುವ ಕಾರಣಕ್ಕಾಗಿ ವಿವಿಗಳನ್ನು ಮುಚ್ಚಲು ಹೊರಟಿರುವ ಈ ಸರಕಾರದ ನಿರ್ಧಾರ ಶಿಕ್ಷಣ ವಿರೋಧಿ ಧೋರಣೆಯನ್ನು ಸಾಕ್ಷಿಕರಿಸುತ್ತಿದೆ ಎಂದು ಅವರು ಟೀಕಿಸಿದ್ದಾರೆ.

ಇತಿಹಾಸದಿಂದಲೂ ದಕ್ಷಿಣ ಭಾರತದಲ್ಲಿ ‘ಕರ್ನಾಟಕ ರಾಜ್ಯ ಶಿಕ್ಷಣದ ಕಾಶಿ’ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಅದಕ್ಕೆ ಹಿನ್ನಡೆಯುಂಟುಮಾಡುವ ನಿರ್ಧಾರಗಳನ್ನು ಈ ಹಿಂದಿನ ಯಾವ ಸರಕಾರಗಳೂ ಕೈಗೊಂಡಿರಲಿಲ್ಲ, ಆದರೆ, ಈ ಕಾಂಗ್ರೆಸ್ ಸರಕಾರ ಇಂತಹ ನಿರ್ಧಾರ ಕೈಗೊಂಡಿರುವುದು ನಿಜಕ್ಕೂ ಖಂಡನೀಯ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News