ರಾಯಚೂರು, ಕೊಪ್ಪಳ ಸೇರಿ ವಿವಿಧ ಭಾಗಗಳಿಗೆ ಎ.10ರವರೆಗೆ ಕಾಲುವೆಗೆ ನೀರು: ಶಿವರಾಜ್ ತಂಗಡಗಿ

ಶಿವರಾಜ್ ತಂಗಡಗಿ
ಬೆಂಗಳೂರು, : ಬೇಸಿಗೆಯಲ್ಲಿ ಕುಡಿಯುವ ನೀರು ಹಾಗೂ ರೈತರ ಬೆಳೆಗಳಿಗೆ ಯಾವುದೇ ಸಮಸ್ಯೆಯಾಗದಂತೆ ರಾಯಚೂರು, ಕೊಪ್ಪಳ, ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಗಳಿಗೆ ಎ.9 ಅಥವಾ 10ರವರೆಗೆ ಕಾಲುವೆಗೆ ಮೂರು ಸಾವಿರ ಕ್ಯೂಸೆಕ್ ನಂತೆ ನೀರು ಹರಿಸಲು ತೀರ್ಮಾನಿಸಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ, ನೀರಾವರಿ ಸಲಹಾ ಸಮಿತಿ ಅಧ್ಯಕ್ಷ ಶಿವರಾಜ್ ತಂಗಡಗಿ ಭರವಸೆ ನೀಡಿದ್ದಾರೆ.
ಬುಧವಾರ ವಿಧಾನಸೌಧದಲ್ಲಿ ಸರಕಾರದ ಮುಖ್ಯಕಾರ್ಯದರ್ಶಿ ಅವರೊಂದಿಗೆ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಸರಕಾರ ರೈತರ ಪರವಾಗಿದೆ. ಕುಡಿಯುವ ನೀರಿಗೂ ಯಾವುದೇ ಸಮಸ್ಯೆಯಾಗದಂತೆ ಕ್ರಮವಹಿಸಲಾಗುವುದು ಎಂದರು.
ಮಾ.21ರಂದು ಬೆಂಗಳೂರಿನಲ್ಲಿ ನಡೆದ ಐಸಿಸಿ ಸಲಹಾ ಸಮಿತಿ ಸಭೆಯಲ್ಲಿ, ತುಂಗಭದ್ರಾ ಎಡದಂಡೆ ಮುಖ್ಯಕಾಲುವೆ ಮೂಲಕ ಎ.9 ಅಥವಾ 10ರವರೆಗೆ ಕುಡಿಯುವ ನೀರು ಒಳಗೊಂಡಂತೆ ಹಾಗೂ ಬೆಳೆಗಳ ಸಂರಕ್ಷಣೆಗಾಗಿ 3,000 ಕ್ಯೂಸೆಕ್ ನಂತೆ ನೀರು ಹರಿಸಲು ಸೂಚನೆ ನೀಡಲಾಗಿದೆ ಎಂದು ಶಿವರಾಜ್ ತಂಗಡಗಿ ತಿಳಿಸಿದರು.
ಫಸಲಿಗಾಗಿ ಕಾಯುತ್ತಿರುವ ಬೆಳೆದು ನಿಂತ ಬೆಳೆಗಳಿಗೆ ನೀರು ಒದಗಿಸಲಾಗುವುದು. ಕೊನೆಯ ಭಾಗದ ರೈತರಿಗೆ ನೀರು ತಲುಪುವಂತೆ ಅಧಿಕಾರಿಗಳು ಕಾರ್ಯ ಪ್ರವೃತ್ತರಾಗಲಿದ್ದಾರೆ. ಯಾವುದೇ ತೊಂದರೆಯಾಗದ ರೀತಿಯಲ್ಲಿ ನಿಷ ಧಾಜ್ಞೆ ಮೂಲಕ ನೀರು ಹರಿಸಲಾಗುವುದು. ರೈತರು ಮತ್ತು ಸಾರ್ವಜನಿಕರು ಯಾವುದೇ ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ ಎಂದು ಶಿವರಾಜ್ ತಂಗಡಗಿ ಹೇಳಿದರು.